ಬೆಂಗಳೂರು: ಮಂಡ್ಯ ಪಕ್ಷೇತರ ಸಂಸದೆ ಸುಮಲತಾ ಅಂಬರೀಷ್ ಅವರು ಶುಕ್ರವಾರ ಬಿಜೆಪಿ ಸೇರುವುದಾಗಿ ಘೋಷಿಸಿದ್ದಾರೆ.
ನಟಿ ಹಾಗೂ ರಾಜಕಾರಣಿ ಸುಮಲತಾ ಅಂಬರೀಷ್ ಅವರು 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಬೆಂಬಲದೊಂದಿಗೆ ಮಾಜಿ ಪ್ರಧಾನಿ ಮತ್ತು ಜೆಡಿ(ಎಸ್) ವರಿಷ್ಠ ಎಚ್ ಡಿ ದೇವೇಗೌಡರ ಮೊಮ್ಮಗ ಮತ್ತು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ವಿರುದ್ಧ ಗೆಲುವು ಸಾಧಿಸಿದ್ದರು.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಮತ್ತು ಬಿಜೆಪಿ ಸೇರುವುದಾಗಿ ಸುಮಲತಾ ಅಂಬರೀಷ್ ಬುಧವಾರ ಹೇಳಿದ್ದರು.
ಇಂದು ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮಂಡ್ಯ ಸಂಸದೆ, ಮಂಡ್ಯದ ಅಭಿವೃದ್ಧಿಗಾಗಿ ಮತ್ತು ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದನ್ನು ನೋಡಲು ಬಿಜೆಪಿ ಸೇರುತ್ತಿರುವುದಾಗಿ ತಿಳಿಸಿದ್ದಾರೆ.
ಅದರಂತೆ 2024ರ ಏಪ್ರಿಲ್ 5 ಶುಕ್ರವಾರ ಬೆಳಗ್ಗೆ 11.30ಕ್ಕೆ ಬೆಂಗಳೂರಿನ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಬಿಜೆಪಿ ನಾಯಕರ ಸಮ್ಮುಖದಲ್ಲಿ ನಾನು ಅಧಿಕೃತವಾಗಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದೇನೆ ಎಂದು ಸುಮಲತಾ ಹೇಳಿದ್ದಾರೆ.
ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ಜೆಡಿಎಸ್, ಎನ್ಡಿಎ ಸೇರಿದ್ದು, ಕರ್ನಾಟಕದಲ್ಲಿ ಸೀಟು ಹಂಚಿಕೆಯ ಭಾಗವಾಗಿ, ಬಿಜೆಪಿ 25 ಕ್ಷೇತ್ರಗಳಲ್ಲಿ ಮತ್ತು ಜೆಡಿಎಸ್ ಉಳಿದ ಮೂರು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ. ಮಂಡ್ಯದಿಂದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಕಣಕ್ಕೆ ಇಳಿದಿದ್ದಾರೆ.
Advertisement