ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಪಕ್ಷದ ಅಭ್ಯರ್ಥಿಗಳ ಗೆಲುವು ಖಚಿತಪಡಿಸಿ, ಬಿಬಿಎಂಪಿ ಚುನಾವಣೆಗೆ ಟಿಕೆಟ್ ಪಡೆಯಿರಿ: ಆಕಾಂಕ್ಷಿಗಳಿಗೆ ಕಾಂಗ್ರೆಸ್ ಸೂಚನೆ

ಲೋಕಸಭಾ ಚುನಾವಣೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ಆಯಾ ವಾರ್ಡ್‌ಗಳಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲವು ಖಚಿತಪಡಿಸಿ, ಬಿಬಿಎಂಪಿ ಚುನಾವಣೆಗೆ ಟಿಕೆಟ್ ಪಡೆಯುವಂತೆ ಆಕಾಂಕ್ಷಿಗಳಿಗೆ ಕಾಂಗ್ರೆಸ್ ಸೂಚನೆ ನೀಡಿದೆ.
Published on

ಬೆಂಗಳೂರು: ಲೋಕಸಭಾ ಚುನಾವಣೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ಆಯಾ ವಾರ್ಡ್‌ಗಳಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲವು ಖಚಿತಪಡಿಸಿ, ಬಿಬಿಎಂಪಿ ಚುನಾವಣೆಗೆ ಟಿಕೆಟ್ ಪಡೆಯುವಂತೆ ಆಕಾಂಕ್ಷಿಗಳಿಗೆ ಕಾಂಗ್ರೆಸ್ ಸೂಚನೆ ನೀಡಿದೆ.

ನಗರದಲ್ಲಿ ಬುಧವಾರ ರಾತ್ರಿ ನಡೆದ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ಮುಖಂಡರ ಸಭೆಯ ಬಳಿಕ ಪಕ್ಷವು ಈ ಸೂಚನೆಯನ್ನು ನೀಡಿದೆ.

ಮಾಜಿ ಮೇಯರ್ ಎನ್ ಮಂಜುನಾಥ್ ರೆಡ್ಡಿ ಅವರು ಮಾತನಾಡಿ, ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಸೆಂಟ್ರಲ್ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲ್ಲುವಂತೆ ಮಾಡಿ ಎಂದು ಬಿಬಿಎಂಪಿ ಚುನಾವಣೆಗೆ ಸ್ಪರ್ಧಿಸಲು ಉತ್ಸುಕರಾಗಿರುವ ಕಾಂಗ್ರೆಸ್ ಮುಖಂಡರಿಗೆ ಸೂಚನೆ ನೀಡಲಾಗಿದೆ. ವಾರ್ಡ್ ಮಟ್ಟದಲ್ಲಿ ಪಡೆಯುವ ಮುನ್ನಡೆಗಳು ಬಿಬಿಎಂಪಿ ಚುನಾವಣೆಗೆ ಟಿಕೆಟ್ ಪಡೆಯಲು ಸಹಾಯ ಮಾಡುತ್ತದೆ ಎಂದು ಹೇಳಿದರು.

ಮಾಜಿ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ಅವರು ಮಾತನಾಡಿ, ಪಕ್ಷವನ್ನು ಬಲಪಡಿಸಲು ಇಂತಹ ನಿರ್ಧಾರಗಳು ಅಗತ್ಯ. ಕಾಂಗ್ರೆಸ್‌ನಿಂದ ಕಾರ್ಪೊರೇಟರ್‌ಗಳು ಅಥವಾ ಶಾಸಕರಾಗಲು ಬಯಸುವವರು ನಗರದಲ್ಲಿ ಹಾಲಿ ಬಿಜೆಪಿ ಸಂಸದರನ್ನು ಅಧಿಕಾರದಿಂದ ಕೆಳಗಿಳಿಸಲು ಶ್ರಮಿಸಬೇಕು ಎಂದು ತಿಳಿಸಿದರು.

ಕಾಂಗ್ರೆಸ್ ಮಾಜಿ ಶಾಸಕರೊಬ್ಬರು ಮಾತನಾಡಿ, ಇದೊಂದು ಒಳ್ಳೆಯ ನಿರ್ಧಾರ. ಈ ಹಿಂದೆ ಬಿಬಿಎಂಪಿ ಚುನಾವಣೆಗೆ ನಗರದಲ್ಲಿ ಪಕ್ಷದ ಕೆಲವು ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸಲಾಗಿತ್ತು. ಇದು ಅಸಮಾಧಾನಕ್ಕೆ ಕಾರಣವಾಯಿತು.

ಸಂಗ್ರಹ ಚಿತ್ರ
ಬಿಜೆಪಿ ಅಸಮಾಧಾನಿತರಿಗೆ ಕಾಂಗ್ರೆಸ್ ಗಾಳ: ಕೇಸರಿ ಪಡೆಯ ಭಿನ್ನಮತೀಯರಿಗೆ ತಟಸ್ಥರಾಗಿರಲು ಡಿಕೆಶಿ ಸೂಚನೆ!

ರಾಜಾಜಿನಗರ ವಿಧಾನಸಭಾ ಕ್ಷೇತ್ರ ಶಾಸಕಿ ಆಕಾಂಕ್ಷಿಯಾಗಿರುವ ಜಿ ಪದ್ಮಾವತಿ ಅವರು ಪ್ರಕಾಶ್‌ನಗರ ವಾರ್ಡ್‌ನಲ್ಲಿ ಸಾಕಷ್ಟು ಶ್ರಮಿಸಿದ್ದಾರೆ. COVID-19 ಸಮಯದಲ್ಲಿ ಜನರಿಗೆ ಸಹಾಯ ಮಾಡಿದ್ದರು. ಆದರೆ, ಡಿ.ಕೆ.ಶಿವಕುಮಾರ್ ಅವರು ಪದ್ಮಾವತಿಯವರನ್ನು ಕಡೆಗಣಿಸಿ ಪುಟ್ಟಣ್ಣ ಅವರಿಗೆ ಪಕ್ಷದ ಟಿಕೆಟ್ ನೀಡಿದ್ದರು. ವಿಧಾನಸಭೆ ಮತ್ತು ಬಿಬಿಎಂಪಿ ಚುನಾವಣೆಗೆ ಸ್ಪರ್ಧಿಸಲು ಉತ್ಸುಕರಾಗಿರುವವರು ಇಂತಹ ಬೆಳವಣಿಗೆಗಳಿಂದ ಬೇಸರಗೊಂಡಿದ್ದಾರೆಂದು ತಿಳಿಸಿದ್ದಾರೆ.

ವಾರ್ಡ್‌ಗಳ ವಿಂಗಡಣೆ ಮತ್ತು ಮೀಸಲಾತಿ ನಿಗದಿಯಿಂದಾಗಿ 2020 ರಿಂದ ಬಿಬಿಎಂಪಿ ಚುನಾವಣೆ ನಡೆದಿಲ್ಲ. ಹಿಂದಿನ ಸರ್ಕಾರಗಳೂ ಕೂಡ ಚುನಾವಣೆ ನಡೆಸುವ ಪ್ರಯತ್ನ ಮಾಡಲಿಲ್ಲ. ಲೋಕಸಭೆ ಚುನಾವಣೆ ನಂತರ ಬಿಬಿಎಂಪಿ ಚುನಾವಣೆಯನ್ನು ಆಗಸ್ಟ್‌ನೊಳಗೆ ನಡೆಸಲು ರಾಜ್ಯ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡಬೇಕಿದೆ. ಸ್ಥಳೀಯ ಸಂಸ್ಥೆ ಇಲ್ಲದೇ ಬೆಂಗಳೂರು ನಿರ್ವಹಣೆ ಕಷ್ಟವಾಗಿದೆ ಎಂದು ಹೇಳಿದ್ದಾರೆ.

X

Advertisement

X
Kannada Prabha
www.kannadaprabha.com