ಬೆಂಗಳೂರು: ಲೋಕಸಭಾ ಚುನಾವಣೆ 2024ರಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಬೆಂಬಲಿಸುತ್ತಿದ್ದಾರೆ ಎಂಬ ಕಾರಣಕ್ಕೆ ಶಾಸಕ ಎಸ್ ಟಿ ಸೋಮಶೇಖರ್ ಗೆ ಬಿಜೆಪಿ ನೋಟಿಸ್ ಜಾರಿ ಮಾಡಿದೆ.
ಪಕ್ಷದ ವಿರುದ್ಧ ಕೆಲಸ ಮಾಡುತ್ತಿರುವ ಬಿಜೆಪಿ ರೆಬೆಲ್ ಶಾಸಕ ಎಸ್.ಟಿ. ಸೋಮಶೇಖರ್ ಅವರಿಗೆ ನೋಟಿಸ್ ಕೊಡಲಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅಶೋಕ್, ಬಿಜೆಪಿ ಪರ ಕೆಲಸ ಮಾಡುವ ಬದಲು ಕಾಂಗ್ರೆಸ್ ಪರ ಕೆಲಸ ಮಾಡುತ್ತಿರುವುದು ಗೊತ್ತಾಗಿದೆ. ಈ ಬಗ್ಗೆ ಕಾರಣ ಕೇಳಿ ನೋಟಿಸ್ ನೀಡಲಾಗಿದೆ. ಅಲ್ಲದೇ, ಸಭಾಧ್ಯಕ್ಷರಿಗೂ ಸಹ ದೂರು ಕೊಡಲಾಗಿದೆ ಎಂದು ಹೇಳಿದ್ದಾರೆ.
ಅಂತೆಯೇ ಎಸ್ ಟಿ ಸೋಮಶೇಖರ್ ಮಾಡುತ್ತಿರುವುದು ತಪ್ಪು. ಶೀಘ್ರದಲ್ಲೇ ಅವರಿಗೆ ತಮ್ಮ ತಪ್ಪಿನ ಅರಿವಾಗಲಿದೆ. ಅವರು ತಮ್ಮ ತಪ್ಪಿಗೆ ಪಶ್ಚಾತಾಪ ಪಡಬೇಕಾಗುತ್ತದೆ. ಬಿಜೆಪಿಯಲ್ಲಿರುವ ಸೋಮಶೇಖರ್ ಅವರು ಬಿಜೆಪಿ ಅಭ್ಯರ್ಥಿಯ ಪರ ಕೆಲಸ ಮಾಡಬೇಕು. ಈಗಲೂ ಬಿಜೆಪಿ ಪರವಾಗಿ ಕೆಲಸ ಮಾಡಲು ಸೋಮಶೇಖರ್ ಅವರಿಗೆ ಅವಕಾಶವಿದೆ ಎಂದು ಹೇಳಿದರು.
Advertisement