ನಂಜನಗೂಡು: ಬಿಜೆಪಿಯವರು ಕತ್ರಿ ಹಾಕೋದ್ರಲ್ಲಿ ನಿಸ್ಸೀಮರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಚಾಮರಾಜನಗರ ಲೋಕಸಭಾ ಕ್ಷೇತ್ರದ ನಂಜನಗೂಡಿನಲ್ಲಿ ನಡೆದ ಬೃಹತ್ ಬಹಿರಂಗ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ, ಬಿಜೆಪಿ ಪಕ್ಷಕ್ಕೆ ಓಟು ಹಾಕುವ ಬಡವರೂ ಸೇರಿ ಇಡೀ ರಾಜ್ಯದ ಬಡವರು ಹೊಟ್ಟೆ ತುಂಬ ಊಟ ಮಾಡಲಿ ಅಂತ ಈ ಹಿಂದೆ ಮುಖ್ಯಮಂತ್ರಿ ಆಗಿದ್ದಾಗ 5 ಕೆ.ಜಿ ಅಕ್ಕಿ ಕೊಟ್ರೆ, ಈ ಬಿಜೆಪಿಯವರು ಬಂದು ಕತ್ತರಿ ಹಾಕಿಬಿಟ್ಟರು. ಈಗ ನಾವು ಮತ್ತೆ ಅಧಿಕಾರಕ್ಕೆ ಬಂದು ಹತ್ತು ಕೆಜಿ ಅಕ್ಕಿ ಕೊಡ್ತಾ ಇದೀವಿ. ಈ ಕಾರ್ಯಕ್ರಮ ದೇಶದ ಬೇರೆ ರಾಜ್ಯದಲ್ಲಿ ಇದ್ದರೆ ತೋರಿಸಲಿ ಎಂದು ಸವಾಲು ಹಾಕಿದರು.
ಮಹಾತ್ಮಗಾಂಧಿಯವರ ನೇತೃತ್ವದಲ್ಲಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದು ಕಾಂಗ್ರೆಸ್ ಪಕ್ಷ. ಬ್ರಿಟೀಷರ ವಿರುದ್ಧ ಹೋರಾಟ ಮಾಡಿ ಹುತಾತ್ಮರಾದ ಸಂಘ ಪರಿವಾರದ, ಬಿಜೆಪಿ ಪಕ್ಷದ ಒಬ್ಬ ವ್ಯಕ್ತಿಯನ್ನು ತೋರಿಸಿದರೆ ರಾಜಕೀಯ ನಿವೃತ್ತಿ ತೆಗೆದುಕೊಳ್ತೇನೆ. ದೇಶಕ್ಕಾಗಿ ಏನೇನೂ ಮಾಡದವರಿಂದ ನಾವು ದೇಶಭಕ್ತಿ ಪಾಠ ಕಲಿಯಬೇಕಾ?ಎಂದು ಪ್ರಶ್ನಿಸಿದ ಅವರು, ಬಿಜೆಪಿ-ಜೆಡಿಎಸ್ ಇಬ್ಬರಿಗೂ ಜನಪರವಾದ ಸಿದ್ಧಾಂತ ಮತ್ತು ಬದ್ಧತೆ ಇಲ್ಲದಿರುವುದರಿಂದ ನಾಡಿನ ಜನತೆ ಎರಡೂ ಪಕ್ಷಗಳನ್ನು ತಿರಸ್ಕರಿಸಬೇಕು ಎಂದು ಜನರಲ್ಲಿ ಮನವಿ ಮಾಡಿದರು.
ನಂತರ ಹೆಚ್.ಡಿ.ಕೋಟೆಯಲ್ಲಿ ನಡೆದ ಜನಧ್ವನಿ-2ರ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ, ಪ್ರಧಾನಿ ನರೇಂದ್ರ ಮೋದಿ ಅವರು, ಅವರು ಕೊಟ್ಟ ಮಾತಿನಂತೆ ಒಂದೇ ಒಂದನ್ನೂ ಜಾರಿ ಮಾಡಿಲ್ಲ. ಬದಲಿಗೆ ಜನರ ಮುಂದೆ ಆಶ್ವಾಸನೆ ಕೊಟ್ಟು ಅದಕ್ಕೆ ಉಲ್ಟಾ ನಡೆದುಕೊಂಡಿದ್ದಾರೆ. ವಿದೇಶದಿಂದ ಕಪ್ಪು ಹಣ ತರಲಿಲ್ಲ, ಭಾರತೀಯರ ಖಾತೆಗೆ 15 ಲಕ್ಷ ಹಾಕಲಿಲ್ಲ, ರೈತರ ಆದಾಯ ದುಪ್ಪಟ್ಟು ಮಾಡಲಿಲ್ಲ, ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡ್ತೀವಿ ಅಂದ್ರು. ಆದರೆ ಹೊಸ ಉದ್ಯೋಗ ಸೃಷ್ಟಿ ಮಾಡೋದಿರಲಿ, ಇರೋ ಕೆಲಸಗಳೂ ಬಂದ್ ಆದ್ವು. ಇಂಥವರಿಗೆ ನಿಮ್ಮ ಮತ ಕೇಳುವ ಮುಖ ಇದೆಯಾ? ಎಂದು ಟೀಕಿಸಿದರು.
ರಾಜ್ಯದ ಜನತೆ ಬರಗಾಲಕ್ಕೆ ತುತ್ತಾಗಿದ್ದಾರೆ. ನಮ್ಮ ಜನ ಕಟ್ಟಿದ ತೆರಿಗೆಯಲ್ಲಿನ ಪಾಲು ನಮಗೆ ವಾಪಾಸ್ ಕೊಡಿ, ಬರಗಾಲಕ್ಕೆ ನಮ್ಮ ಪಾಲಿನ ಪರಿಹಾರದ ಹಣ ಕೊಡಿ ಎಂದು ನಾವು ಪತ್ರ ಬರೆದು ಹೋರಾಟ ಮಾಡಿದರೂ
ಬಿಜೆಪಿ ಸರ್ಕಾರ ನಮ್ಮ ಪಾಲಿನ ನಯಾಪೈಸೆ ಕೊಡಲಿಲ್ಲ. ಇಂಥವರಿಗೆ ಮತ ಹಾಕಿದ್ರೆ ಆ ಮತಕ್ಕೆ ಗೌರವ ಬರುತ್ತದೆಯಾ? ಪ್ರಧಾನಿ ಮೋದಿ ರಾಜ್ಯಕ್ಕೆ ಮಾಡಿದ ಅನ್ಯಾಯ ಸರಿ, ಬರಗಾಲ ಬಂದ್ರೂ ಮೋದಿ ಅನುದಾನ ಕೊಡದೇ ಇದ್ದದ್ದೇ ಸರಿ, ಮೋದಿಯವರು ಪೆಟ್ರೋಲ್-ಡೀಸೆಲ್-ಗ್ಯಾಸ್-ರಸಗೊಬ್ಬರ ಬೆಲೆಯನ್ನು ಹೆಚ್ಚಿಸಿದ್ದೇ ಸರಿ ಎಂದು ಬಿಜೆಪಿ ನಾಯಕರು ಕೋಲೆ ಬಸವನಂತೆ ತಲೆ ತೂಗುತ್ತಿದ್ದಾರೆ. ಇಂಥವರಿಗೆ ನಿಮ್ಮ ಮತ ಹೋಗಬೇಕಾ? ಎಂದು ಕೇಳಿದರು.
Advertisement