ಬೆಂಗಳೂರು: ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರದಲ್ಲಿ ತೊಡಗಿವೆ. ವಿವಿಧ ರಾಜ್ಯಗಳಲ್ಲಿ ರಾಜ್ಯದ ನಾಯಕರು ಸ್ಟಾರ್ ಪ್ರಚಾರಕರಾಗಿ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ.
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಬಿಜೆಪಿ ರಾಷ್ಟ್ರೀಯ ಯುವ ಅಧ್ಯಕ್ಷ ತೇಜಸ್ವಿ ಸೂರ್ಯ ಅವರು, ಶುಕ್ರವಾರ ಕೊಯಮತ್ತೂರಿಗೆ ಭೇಟಿ ನೀಡಿದ್ದು, ಪಕ್ಷದ ಅಭ್ಯರ್ಥಿ ಮತ್ತು ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ ಪರ ಮತಯಾಚಿಸಿದರು.
ತೇಜಸ್ವಿ ಸೂರ್ಯ ಹಾಗೂ ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ತಮಿಳುನಾಡಿನ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.
ಪ್ರಚಾರ ಕುರಿತು ಮಾತನಾಡಿರುವ ರವಿ ಅವರು, ಕೊಯಮತ್ತೂರು ಮತ್ತು ನೀಲಗಿರಿ ಲೋಕಸಭಾ ಕ್ಷೇತ್ರಗಳಲ್ಲಿ ಪ್ರಚಾರಕ್ಕೆ ಬಂದಿದ್ದೇವೆ. ಭಾನುವಾರ ಬೆಳಗ್ಗೆ ಕೃಷ್ಣಗಿರಿಯಲ್ಲಿರುತ್ತೇವೆ. ತಮಿಳುನಾಡಿನ ಬಹುತೇಕ ಕ್ಷೇತ್ರಗಳಲ್ಲಿ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಅಲ್ಲಿ ಪ್ರಚಾರ ನಡೆಸಿದ್ದೇವೆಂದು ಹೇಳಿದರು.
ಅಣ್ಣಾಮಲೈ ಪರ ಪ್ರಚಾರ ಮಾಡಲು ಬಿಜೆಪಿಯ ಹಿರಿಯ ನಾಯಕ ಸುರೇಶ್ ಕುಮಾರ್ ಕೂಡ ಕೊಯಮತ್ತೂರಿಗೆ ಭೇಟಿ ನೀಡಿದ್ದರು.
ಅಣ್ಣಾಮಲೈ ಐಪಿಎಸ್ಗೆ ರಾಜೀನಾಮೆ ನೀಡಿದಾಗ ನಾನು ಅಸಮಾಧಾನಗೊಂಡಿದ್ದೆ. ಆದರೆ, ಇಷ್ಟು ಕಡಿಮೆ ಅವಧಿಯಲ್ಲಿ ಅವರ ಸಾಧನೆ ನೋಡಿ ಸಂತೋಷವಾಗುತ್ತಿದೆ. ಅವರಿಗೆ ಮೆಚ್ಚುಗೆ ಸೂಚಿಸುವ ಸಲುವಾಗಿಯೇ ಪ್ರಚಾರದ ಭಾಗವಾಗಿದ್ದೇನೆಂದು ಸುರೇಶ್ ಕುಮಾರ್ ಅವರು ಹೇಳಿದ್ದಾರೆ.
ಕಳೆದ ವರ್ಷ ವಿಧಾನಸಭಾ ಚುನಾವಣೆ ವೇಳೆ ಅಣ್ಣಾಮಲೈ ನನ್ನ ಪರ ಪ್ರಚಾರಕ್ಕೆಂದು ರಾಜಾಜಿನಗರಕ್ಕೆ ಬಂದಿದ್ದರು. ಇದಕ್ಕೆ ಅವರಿಗೆ ಧನ್ಯವಾದಗಳನ್ನು ತಿಳಿಸಲು ಕೊಯಮತ್ತೂರಿಗೆ ಭೇಟಿ ನೀಡಿದ್ದೇನೆಂದು ತಿಳಿಸಿದರು.
ಇದೇ ವೇಳೆ ಸುರೇಶ್ ಕುಮಾರ್ ಅವರು ಚನ್ನಪಟ್ಟಣ ಸಮೀಪದ ಹೊಂಗನೂರು ಗ್ರಾಮಕ್ಕೆ ಭೇಟಿ ಸ್ಥಳೀಯರೊಂದಿಗೆ ಮಾತುಕತೆ ನಡಸಿದರು.
ಗ್ರಾಮದಲ್ಲಿ ಸುಮಾರು 2,000 ಕುಟುಂಬಗಳು ವಾಸವಾಗಿವೆ. ಅವರೆಲ್ಲರೂ ಕನ್ನಡ ಮಾತನಾಡುತ್ತಾರೆ. ಅಣ್ಣಾಮಲೈ ಪರ ಮತ ಕೇಳಲು ಅವರೊಂದಿಗೆ ಮಾತುಕತೆ ನಡೆಸಿದ್ದೇನೆ ಎಂದು ಹೇಳಿದರು.
ಕರ್ನಾಟಕದ ಕಾಂಗ್ರೆಸ್ ನಾಯಕರು ಕೂಡ ಬೇರೆ ರಾಜ್ಯಗಳಿಗೆ ತೆರಳಿ ಪ್ರಚಾರ ನಡೆಸುತ್ತಿದ್ದಾರೆ. ಮೇ 7 ರಂದು ರಾಜ್ಯದಲ್ಲಿ ಚುನಾವಣೆ ಮುಗಿದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಸಿದ್ದರಾಮಯ್ಯ ಉತ್ತರ ಪ್ರದೇಶ, ಛತ್ತೀಸ್ಗಢ ಮತ್ತು ಪಶ್ಚಿಮ ಬಂಗಾಳಕ್ಕೆ ಸ್ಟಾರ್ ಪ್ರಚಾರಕರಾಗಿದ್ದರೆ, ಡಿಕೆ.ಶಿವಕುಮಾರ್ ಪಶ್ಚಿಮ ಬಂಗಾಳ, ಮೇಘಾಲಯ ಮತ್ತು ಅರುಣಾಚಲ ಪ್ರದೇಶಕ್ಕೆ ಸ್ಟಾರ್ಪ ಪ್ರಚಾರಕರಾಗಿ ಪ್ರಚಾರ ನಡೆಸಲಿದ್ದಾರೆ.
ಇನ್ನು ಇಂಧನ ಸಚಿವ ಕೆಜೆ ಜಾರ್ಜ್ ಅವರು ಅರುಣಾಚಲ ಪ್ರದೇಶಕ್ಕೆ ತೆರಳಿದ್ದರೆ, ಮೇಲ್ಮನೆಯ ಮಾಜಿ ಮುಖ್ಯ ಸಚೇತಕ ಐವನ್ ಡಿಸೋಜಾ ನಾಗಾಲ್ಯಾಂಡ್ನ ಸ್ಟಾರ್ ಪ್ರಚಾರಕರಾಗಿದ್ದಾರೆ.
ರಾಜ್ಯಸಭಾ ಸಂಸದ ಮತ್ತು ಕರ್ನಾಟಕದ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಅವರು ತ್ರಿಪುರಾ ಮತ್ತು ಸಿಕ್ಕಿಂನ ಸ್ಟಾರ್ ಪ್ರಚಾರಕರಾಗಿದ್ದಾರೆ. ಭಾರತೀಯ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಅಸ್ಸಾಂ, ಮಣಿಪುರ, ಮೇಘಾಲಯ, ತ್ರಿಪುರ, ಮಹಾರಾಷ್ಟ್ರ, ರಾಜಸ್ಥಾನ ಮತ್ತಿತರ ರಾಜ್ಯಗಳಲ್ಲಿ ಪ್ರಚಾರ ನಡೆಸಲಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕರ್ನಾಟಕದವರೇ ಆಗಿದ್ದು, ಎಲ್ಲಾ ರಾಜ್ಯಗಳಲ್ಲಿ ಕಾಂಗ್ರೆಸ್ನ ಟಾಪ್ ಸ್ಟಾರ್ ಪ್ರಚಾರಕರಾಗಿದ್ದಾರೆ.
Advertisement