ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಪುತ್ರ ಹಾಗೂ ಸಂಸದ ಬಿ.ವೈ.ರಾಘವೇಂದ್ರ ಶಿವಮೊಗ್ಗ ರೈತರು ಮತ್ತು ಜನರ ಪ್ರಮುಖ ಸಮಸ್ಯೆಗಳನ್ನು ನಿರ್ಲಕ್ಷ್ಯಿಸಿದ್ದಾರೆ, ಹೀಗಿರುವಾಗ ಕ್ಷೇತ್ರದ ಜನರು ಬಿಜೆಪಿಗೆ ಏಕೆ ಮತ ಹಾಕಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ.
ಅರಣ್ಯ ಹಕ್ಕು ಕಾಯಿದೆಯಡಿ ರೈತರ ಒತ್ತುವರಿ ತೆರವು ವಿಚಾರವನ್ನು ನೀವೇಕೆ ಪ್ರಸ್ತಾಪಿಸಿಲ್ಲ ಎಂದು ಪ್ರಶ್ನಿಸಿದರು. ಬಗೈರ್ ಹುಕುಂ ಭೂಮಿಯ ಕಾನೂನನ್ನು 75 ವರ್ಷದಿಂದ 25 ವರ್ಷಕ್ಕೆ ಇಳಿಸಲು ನೀವು ಏಕೆ ವಿಫಲರಾಗಿದ್ದೀರಿ? ಮೈಸೂರು ಪೇಪರ್ ಮಿಲ್ಸ್ ಮತ್ತು ವಿಶ್ವೇಶ್ವರಯ್ಯ ಐರನ್ ಅಂಡ್ ಸ್ಟೀಲ್ ಲಿಮಿಟೆಡ್ ಅನ್ನು ಪುನರುಜ್ಜೀವನಗೊಳಿಸಲು ನಿಮ್ಮನ್ನು ತಡೆದದ್ದು ಯಾವುದು? ತೀರ್ಥಹಳ್ಳಿಯಲ್ಲಿ ಅಡಿಕೆಕಸಂಶೋಧನಾ ಕೇಂದ್ರವನ್ನು ಮಂಜೂರು ಮಾಡುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭರವಸೆ ಏನಾಯಿತು? ಎಂದು ಪ್ರಶ್ನೆಗಳ ಸುರಿಮಳೆ ಸುರಿಸಿದ್ದಾರೆ.
ರಾಘವೇಂದ್ರ ಅವರು ಸಂಸತ್ತಿನಲ್ಲಿ ಯಾವುದೇ ರೈತ ಪರ ಸಮಸ್ಯೆಗಳನ್ನು ಪ್ರಸ್ತಾಪಿಸಿದ್ದಾರೆಯೇ ಮತ್ತು ಅವರು ಮಾಡಿದ್ದೆರೆ ಅದರ ವಿವರಗಳನ್ನು ನೀಡುವಂತೆ ಶಿವಕುಮಾರ್ ಕೇಳಿದರು. ಬಿಜೆಪಿ ಜನರ ಭಾವನೆಗಳನ್ನು ದುರ್ಬಳಕೆ ಮಾಡಿಕೊಂಡು ಚುನಾವಣೆಗೆ ಸ್ಪರ್ಧಿಸುತ್ತಿದೆ, ಆದರೆ ಕಾಂಗ್ರೆಸ್ ಅವರ ಬದುಕನ್ನು ಕಟ್ಟಿಕೊಳ್ಳಲು ಸಹಾಯ ಮಾಡುತ್ತಿದೆ. ಬಿಜೆಪಿಯವರು ಮೋದಿ ಗ್ಯಾರಂಟಿ ಬಗ್ಗೆ ಮಾತನಾಡುತ್ತಿದ್ದರೆ, ನಾವು ಕಾಂಗ್ರೆಸ್ ಗ್ಯಾರಂಟಿ ಬಗ್ಗೆ ಮಾತನಾಡುತ್ತಿದ್ದೇವೆ. ನಾವು ಏನು ಭರವಸೆ ನೀಡಿದ್ದೇವೆಯೋ ಅದನ್ನು ಈಡೇರಿಸಿದ್ದೇವೆ ಎಂದು ಅವರು ಪ್ರತಿಪಾದಿಸಿದರು.
ಗೃಹಲಕ್ಷ್ಮಿ ಯೋಜನೆಯ ಲಾಭ ಪಡೆದು ಹಳ್ಳಿಗಳ ಮಹಿಳೆಯರು ದಾರಿ ತಪ್ಪುತ್ತಿದ್ದಾರೆ ಎಂಬ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಯಡಿಯೂರಪ್ಪ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೌನ ವಹಿಸಿದ್ದೇಕೆ? ಎಂದು ಶಿವಕುಮಾರ್ ಪ್ರಶ್ನಿಸಿದ್ದಾರೆ.
Advertisement