ಬೆಳಗಾವಿ/ಅಥಣಿ: ಬೆಳಗಾವಿ ಬಿಜೆಪಿಯಲ್ಲಿ ಬಿರುಕು ಮೂಡಿದ್ದು, ಹಿರಿಯ ನಾಯಕರು ಪಕ್ಷದ ಪ್ರಚಾರಗಳಲ್ಲಿ ಪಾಲ್ಗೊಳ್ಳದೇ ಇರುವುದು ಹಲವರ ಹುಬ್ಬೇರುವಂತೆ ಮಾಡಿದೆ.
ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಪ್ರಚಾರದಿಂದ ಮಾಜಿ ಸಂಸದ ರಮೇಶ ಕತ್ತಿ, ಮಾಜಿ ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ ಮತ್ತು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ದೂರ ಉಳಿದಿದ್ದು, ಇದರಿಂದ ಒಗ್ಗಟ್ಟಿನ ಕೊರತೆ ಎದ್ದು ಕಾಣುತ್ತಿದೆ.
ಕತ್ತಿಯವರು ಚಿಕ್ಕೋಡಿಯಿಂದ ಸ್ಪರ್ಧಿಸಲು ಆಸಕ್ತಿ ತೋರಿದ್ದು, ಹಲವು ಬಾರಿ ಬಿಜೆಪಿ ಕೇಂದ್ರ ನಾಯಕತ್ವವನ್ನು ಸಂಪರ್ಕಿಸಿದ್ದರು. ಆದರೆ ಬಿಜೆಪಿ ಹೈಕಮಾಂಡ್ ಅವರಿಗೆ ಟಿಕೆಟ್ ನೀಡಲು ನಿರಾಕರಿಸಿ, ಅಣ್ಣಾಸಾಹೇಬ ಜೊಲ್ಲೆ ಅವರನ್ನು ತನ್ನ ಅಭ್ಯರ್ಥಿ ಎಂದು ಘೋಷಿಸಿತು. ಇದರ ಬೆನ್ನಲ್ಲೇ ಕತ್ತಿ ಕ್ಷೇತ್ರದಲ್ಲಿ ಪ್ರಚಾರದಿಂದ ದೂರ ಉಳಿದಿದ್ದಾರೆಂದು ಹೇಳಲಾಗುತ್ತಿದೆ.
ಪ್ರಭಾಕರ ಕೋರೆ ಅವರು ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನಗೊಳ್ಳದಿರುವುದು ಮತ್ತು ಅವರ ಪುತ್ರ ಅಮಿತ್ ಕೋರೆ ಅವರಿಗೆ ಚಿಕ್ಕೋಡಿ ಟಿಕೆಟ್ ನೀಡದ ಕಾರಣ ಅಸಮಾಧಾನಗೊಂಡಿದ್ದಾರೆನ್ನಲಾಗಿದೆ.
ಇದೇ ವೇಳೆ ರಮೇಶ್ ಜಾರಕಿಹೊಳಿ ಅವರು ಚಿಕ್ಕೋಡಿಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡುವುದಕ್ಕಿಂತ ಹೆಚ್ಚಾಗಿ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರ, ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಅವರನ್ನು ಸೋಲಿಸಲು ಹೆಚ್ಚಿನ ಆಸಕ್ತಿ ತೋರುತ್ತಿದ್ದಾರೆಂದು ಹೇಳಲಾಗುತ್ತಿದೆ.
ಇದಲ್ಲದೆ, ಕಾಂಗ್ರೆಸ್ ಅಭ್ಯರ್ಥಿಯಾಗಿ ಅವರ ಕಿರಿಯ ಸಹೋದರ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಅವರು ಕಣಕ್ಕಿಳಿದಿರುವುದು. ತಮ್ಮ ಸ್ವಂತ ಸೊಸೆಯ ವಿರುದ್ಧ ಹೋಗಬೇಕಾಗಿರುವುದರಿಂದ ಪ್ರಚಾರದಿಂದ ದೂರ ಉಳಿದಿದ್ದಾರೆಂದು ಹೇಳಲಾಗುತ್ತಿದೆ.
ಬಿಜೆಪಿಯ ಹುಬ್ಬಳ್ಳಿ-ಧಾರವಾಡ ಶಾಸಕ ಮಹೇಶ್ ತೆಂಗಿನಕಾಯಿ ಅವರು ಮೂವರು ನಾಯಕರ ಸಮಸ್ಯೆಗಳನ್ನು ಬಗೆ ಹರಿಸುವಲ್ಲಿ ಮುಂದಾಳತ್ವ ವಹಿಸಿದ್ದುರು. ಇದರಂತೆ ಪ್ರಚಾರಕ್ಕೆ ಬರುವಂತೆ ಮನವರಿಕೆ ಮಾಡಿಕೊಟ್ಟರೂ ವಿಫಲರಾದರು ಎಂದು ಮೂಲಗಳು ತಿಳಿಸಿವೆ.
ಕೋರೆ, ಕತ್ತಿ ಮತ್ತು ಜಾರಕಿಹೊಳಿ ಅವರ ಬಗ್ಗೆ ಪಕ್ಷದಲ್ಲಿ ಯಾವುದೇ ಸಮಸ್ಯೆಗಳಿಲ್ಲ. ಅವರದೇ ಆದ ವೈಯುಕ್ತಿಕ ಸಮಸ್ಯೆಗಳಿದ್ದು, ಪಕ್ಷದ ಪ್ರಚಾರದಲ್ಲಿ ಪಾಲ್ಗೊಳ್ಳುತ್ತಿಲ್ಲ, ಶೀಘ್ರದಲ್ಲಿಯೇ ಚಿಕ್ಕೋಡಿಯಲ್ಲಿ ಕಾರ್ಯೋನ್ಮುಖರಾಗಲಿದ್ದಾರೆ ಎಂದು ಮಹೇಶ್ ಹೇಳಿದ್ದಾರೆ.
Advertisement