ಹುಬ್ಬಳ್ಳಿ: ಇದು ಕುಟುಂಬ ರಾಜಕಾರಣ ಮತ್ತು ಭ್ರಷ್ಟಾಚಾರದ ಮೈತ್ರಿಯೇ ಹೊರತು ಬೇರೇನೂ ಅಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟದ ಇತರ ಪಕ್ಷದ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಹುಬ್ಬಳ್ಳಿಯ ವಿದ್ಯಾನಗರದಲ್ಲಿ ಭಾನುವಾರ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, 'ಇಂಡಿಯಾ ಮೈತ್ರಿಕೂಟದ ಬಹುತೇಕ ನಾಯಕರು ಜಾಮೀನಿನ ಮೇಲೆ ಅಥವಾ ಜೈಲಿನಲ್ಲಿದ್ದಾರೆ. ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರಿಗೆ ದೇಶವಿರೋಧಿಗಳ ಜತೆ ಬೆರೆಯಲು ನಾಚಿಕೆಯಾಗುವುದಿಲ್ಲ’ ಎಂದು ಹೇಳಿದರು.
'ದಕ್ಷಿಣ ಭಾರತವನ್ನು ಪ್ರತ್ಯೇಕ ರಾಷ್ಟ್ರ' ಮಾಡುವ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಡಿಕೆ ಸುರೇಶ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಕ್ ಪರ ಘೋಷಣೆಗಳನ್ನು ಕೂಗುವವರನ್ನು ರಕ್ಷಿಸುತ್ತಿದ್ದಾರೆ. ಅವರು ಇಂತಹ ಘಟನೆಗಳನ್ನು ಖಂಡಿಸುವುದಿಲ್ಲ. ಕಾಂಗ್ರೆಸ್ ಸುಳ್ಳುಗಾರರ ಪಕ್ಷ. ರಾಜ್ಯವು ತನ್ನ ಪಾಲಿನ ಹಣವನ್ನು ಪಡೆಯುತ್ತಿಲ್ಲ ಎಂದು ಅವರು ಆರೋಪಿಸುತ್ತಿದ್ದಾರೆ. ಆದರೆ, ಸತ್ಯವೆಂದರೆ ಕೇಂದ್ರ ಸರ್ಕಾರವು ಕಾಂಗ್ರೆಸ್ ಮಾಡಿದ್ದಕ್ಕಿಂತ ಸುಮಾರು ನಾಲ್ಕು ಪಟ್ಟು ಹೆಚ್ಚಿನ ಹಣವನ್ನು ಬಿಡುಗಡೆ ಮಾಡಿದೆ ಎಂದರು.
ನಾವು ಆರ್ಟಿಕಲ್ 370 ಅನ್ನು ತೆಗೆದುಹಾಕುವುದಾಗಿ ಭರವಸೆ ನೀಡಿದ್ದೇವೆ ಮತ್ತು ನಾವು ಅದನ್ನು ಮಾಡಿದ್ದೇವೆ. ರಾಮ ಮಂದಿರ ನಿರ್ಮಾಣದ ಭರವಸೆ ನೀಡಿದ್ದೆವು ಮತ್ತು ನಾವು ಅದನ್ನು ಮಾಡಿದ್ದೇವೆ. ಭಾರತವು 5ನೇ ಅತಿದೊಡ್ಡ ಆರ್ಥಿಕತೆ ಹೊಂದಿದ ರಾಷ್ಟ್ರವಾಗಿದೆ. ನಾವು ಮತ ಮತ್ತು ಅಧಿಕಾರಕ್ಕಾಗಿ ಭ್ರಷ್ಟಾಚಾರ ಮತ್ತು ತುಷ್ಟೀಕರಣ ರಾಜಕಾರಣದಲ್ಲಿ ತೊಡಗಿರುವ ಜನರನ್ನು ದೂರವಿಡಬೇಕು ಎಂದು ಅವರು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮುಂದಿನ ದಿನಗಳಲ್ಲಿ ಭಾರತವು ಮೂರನೇ ಅಗ್ರ ಆರ್ಥಿಕತೆ ಹೊಂದಿದ ದೇಶವಾಗಲಿದೆ ಎಂದ ಅವರು, ಕೇಂದ್ರ ಸರ್ಕಾರದ ಯೋಜನೆಗಳು ಮತ್ತು ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
Advertisement