ಬೆಂಗಳೂರು: ಲೋಕಸಭೆ ಚುನಾವಣೆ 2024ರ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 28 ಮತ್ತು 29 ರಂದು ಕರ್ನಾಟಕದಲ್ಲಿ ಮತ್ತೆ ಪ್ರವಾಸ ಮಾಡಲಿದ್ದಾರೆ.
ಒಟ್ಟು 2 ದಿನಗಳ ಕಾಲ ಪ್ರಧಾನಿ ಮೋದಿ ರಾಜ್ಯದಲ್ಲಿ ಪ್ರಚಾರ ಮಾಡಲಿದ್ದು, ಈ ವೇಳೆ ಐದು ಜಿಲ್ಲೆಗಳಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಲೋಕಸಭೆ ಚುನಾವಣೆಯ ಬಿಜೆಪಿಯ ಪ್ರಚಾರ ಮತ್ತು ಪಕ್ಷದ ರಾಜ್ಯ ಘಟಕ ಗುರುವಾರ ಮಾಹಿತಿ ನೀಡಿದೆ.
ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿಯ ರಾಜ್ಯ ಸಂಯೋಜಕ ವಿ ಸುನೀಲ್ ಕುಮಾರ್ ಈ ಬಗ್ಗೆ ಮಾಹಿತಿ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 28 ರಂದು ಬೆಳಿಗ್ಗೆ ಬೆಳಗಾವಿಗೆ ಆಗಮಿಸಿ 10 ಗಂಟೆಗೆ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನಂತರ ಅವರು ಮಧ್ಯಾಹ್ನ 12 ಗಂಟೆಗೆ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲು ಶಿರಸಿಗೆ ತೆರಳುತ್ತಾರೆ ಎಂದರು.
ಅಂತೆಯೇ ಬಳಿಕ ದಾವಣಗೆರೆಯಲ್ಲಿ ಮಧ್ಯಾಹ್ನ 2 ಗಂಟೆಗೆ ಚುನಾವಣಾ ರ್ಯಾಲಿಯಲ್ಲಿ ಅವರು ಭಾಗವಹಿಸುವ ನಿರೀಕ್ಷೆಯಿದೆ. ಬಳಿಕ ಸಂಜೆ 4 ಗಂಟೆಗೆ ಬಳ್ಳಾರಿಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮೋದಿ ಮಾತನಾಡಲಿದ್ದಾರೆ. ಏಪ್ರಿಲ್ 29 ರಂದು ಬೆಳಗ್ಗೆ 11 ಗಂಟೆಗೆ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಬಾಗಲಕೋಟೆಗೆ ತೆರಳಲಿದ್ದಾರೆ.
Advertisement