ಶನಿವಾರ ರಾಜ್ಯಪಾಲರ ಭೇಟಿಗೆ ಸಮಯ ನಿಗದಿ; ಚನ್ನಪಟ್ಟಣದಲ್ಲಿ ಯಾರೇ ಅಭ್ಯರ್ಥಿಯಾದರೂ ನನಗೇ ಮತ: ಡಿ.ಕೆ ಶಿವಕುಮಾರ್

ಬಿ ಫಾರಂ ಬರೆವುದು, ಅದಕ್ಕೆ ಸಹಿ ಹಾಕುವುದು ನಾನು. ನಿಮ್ಮನ್ನು (ಮಾಧ್ಯಮದವರನ್ನು) ನಿಲ್ಲಿಸಿದರೂ ನನಗೆ ಓಟು ಬರುತ್ತದೆ ಎಂದು ಹೇಳಿದರು.
ಡಿ ಕೆ ಶಿವಕುಮಾರ್
ಡಿ ಕೆ ಶಿವಕುಮಾರ್
Updated on

ಬೆಂಗಳೂರು: ಶನಿವಾರ ರಾಜ್ಯಪಾಲರನ್ನು ಭೇಟಿ ಮಾಡಲು ಅಪಾಯಿಂಟ್‌ಮೆಂಟ್ ಸಿಕ್ಕಿದ್ದು ಅವರನ್ನು ಭೇಟಿಯಾಗುವುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಬೆಂಗೂರಿನಲ್ಲಿ ಮಾತನಡಿದ ಅವರು, ನಾವು ಇತ್ತೀಚೆಗೆ ನಡೆದ ಭೈರತಿ ಸುರೇಶ್ ಅವರ ಮಗನ ನಿಶ್ಚಿತಾರ್ಥ ಸಮಾರಂಭದಲ್ಲಿ ರಾಜ್ಯಪಾಲರನ್ನು ಭೇಟಿಯಾಗಿದ್ದೆವು, ಈ ವೇಳೆ ಅವರು ಯಾವಾಗ ತಮ್ಮನ್ನು ಭೇಟಿಯಾಗುತ್ತೀರಾ ಎಂದು ನನ್ನನ್ನು ಕೇಳಿದ್ದರು, ಅವರು ಶನಿವಾರ ನಮಗೆ ಅಪಾಯಿಂಟ್‌ಮೆಂಟ್ ನೀಡಿದ್ದು ಅಂದು ಗವರ್ನರ್ ರನ್ನು ಭೇಟಿಯಾಗುವುದಾಗಿ ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಒಪ್ಪಿಗೆ ನೀಡಿರುವ ರಾಜ್ಯಪಾಲರ ನಿರ್ಧಾರವನ್ನು ವಿರೋಧಿಸಿ ಕಾಂಗ್ರೆಸ್‌ನ ರಾಜ್ಯ ಘಟಕವು ಶನಿವಾರ ರಾಜಭವನ ಚಲೋ ಆಂದೋಲನವನ್ನು ಘೋಷಿಸಿತ್ತು. ಶನಿವಾರ ಭೇಟಿಗೆ ಕಾಲಾವಕಾಶ ನೀಡಿದ್ದು, ನಾವು ನಮ್ಮ ಮನವಿ ಸಲ್ಲಿಸುತ್ತೇವೆ ಎಂದು ಹೇಳಿದರು.

ಇನ್ನು ಚನ್ನಪಟ್ಟಣ ವಿಧಾನಸಭೆ ಉಪ ಬಗ್ಗೆ ಮಾತನಾಡಿದ ಶಿವಕುಮಾರ್ ಚುನಾವಣೆಗೆ ಅಭ್ಯರ್ಥಿ ನಾನೇ. ಕಾಂಗ್ರೆಸ್ ಪಕ್ಷದಿಂದ ಯಾರೇ ಅಭ್ಯರ್ಥಿ ಆದರೂ ನನಗೆ ಮತ ಹಾಕಿದಂತೆ ಎಂದು ಪುನರುಚ್ಚರಿಸಿದರು. ಬಿ ಫಾರಂ ಬರೆವುದು, ಅದಕ್ಕೆ ಸಹಿ ಹಾಕುವುದು ನಾನು. ನಿಮ್ಮನ್ನು (ಮಾಧ್ಯಮದವರನ್ನು) ನಿಲ್ಲಿಸಿದರೂ ನನಗೆ ಓಟು ಬರುತ್ತದೆ ಎಂದು ಹೇಳಿದರು. ಎರಡು ವಿರೋಧ ಪಕ್ಷಗಳು ಒಂದಾಗಿವೆ ಎಂದು ಕೇಳಿದಾಗ "ಒಂದು, ಎರಡು, ಮೂರಾದರೂ ಆಗಲಿ ನಮಗೆ ಅದು ಸಂಬಂಧವಿಲ್ಲ. ನಾವು ಜನಸೇವೆ ಮಾಡುತ್ತೇವೆ, ಅದರ ಮೇಲೆ ಉಳಿದದ್ದು ಜನರ ತೀರ್ಮಾನಕ್ಕೆ ಬಿಟ್ಟಿದ್ದು ಎಂದರು.

ಡಿ ಕೆ ಶಿವಕುಮಾರ್
ಚನ್ನಪಟ್ಟಣ ವಿಧಾನಸಭೆ ಉಪ ಚುನಾವಣೆ ಸಂಬಂಧ HDK ಜೊತೆ ಚರ್ಚೆ: ಯೋಗೇಶ್ವರ್ ಪರ ಅಶೋಕ್ ಬ್ಯಾಟಿಂಗ್

ಸಿ.ಪಿ.ಯೋಗೇಶ್ವರ್ ಅವರು ಬಂದರೆ ಪಕ್ಷಕ್ಕೆ ಆಹ್ವಾನ ಮಾಡುವಿರಾ ಎಂದು ಕೇಳಿದಾಗ "ನೀವುಗಳು (ಮಾಧ್ಯಮ) ಏಕೆ ಇದರ ಬಗ್ಗೆ ಮಾತನಾಡುತ್ತೀರಾ? ನಮ್ಮ ಬಳಿಗೆ ಯಾರೂ ಬಂದಿಲ್ಲ, ಚರ್ಚೆಯನ್ನೂ ಮಾಡಿಲ್ಲ. ಅವರು ಮೈತ್ರಿ ಮಾಡಿಕೊಂಡಿರುವಾಗ ಏಕೆ ಅವರ ಬಗ್ಗೆ ಮಾತನಾಡಬೇಕು. ಮೊದಲು ನಮ್ಮ ಪಕ್ಷದ ಬಗ್ಗೆ ಮಾತನಾಡುತ್ತೇನೆ" ಎಂದರು. ಟಿಕೆಟ್ ಸಿಗದಿದ್ದರೆ ಪಕ್ಷೇತರನಾಗಿ ಸ್ಪರ್ಧಿಸುತ್ತೇನೆ ಎನ್ನುವ ಸಿ.ಪಿ.ಯೋಗೇಶ್ವರ್ ಹೇಳಿಕೆ ಬಗ್ಗೆ ಕೇಳಿದಾಗ" ನನಗೆ ನಿಮ್ಮಗಳ (ಮಾಧ್ಯಮ) ಮಾತಿನ ಮೇಲೆ ನಂಬಿಕೆ ಇಲ್ಲ" ಎಂದು ಹೇಳಿದರು.

ಉಪ ಚುನಾವಣೆ ತಯಾರಿಗಾಗಿ ಚನ್ನಪಟ್ಟಣದಲ್ಲಿ ಉದ್ಯೋಗಮೇಳ ಮಾಡಲಾಗುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಸೇವೆ ಮಾಡಲು ನಮಗೆ ಅಧಿಕಾರ, ಅವಕಾಶ ನೀಡಿದ್ದಾರೆ. ನಾವು ನಮ್ಮ ಅಧಿಕಾರ ಬಳಸಿಕೊಂಡು ಜನರಿಗಾಗಿ ಯಾವ ರೀತಿ ಒಳ್ಳೆಯದು ಮಾಡಬೇಕು ಎಂಬ ಬಗ್ಗೆ ಆಲೋಚಿಸುತ್ತಿದ್ದೇವೆ. ಗುರುವಾರ ಎತ್ತಿನಹೊಳೆ ಯೋಜನೆ ಪರೀಕ್ಷಾರ್ಥ ಕಾರ್ಯಾಚರಣೆ ವೀಕ್ಷಣೆಗೆ ಹೋಗಿದ್ದೆ. ಕೆಲವರು ಮೂಗು, ಬಾಯಿ, ಕಿವಿ ಕತ್ತರಿಸಿಕೊಳ್ಳುತ್ತೇನೆ ಎಂದು ಹೇಳುತ್ತಿದ್ದರು. ಆದರೆ ನಾನು ಏತ ಕಾಮಗಾರಿ ಪರೀಕ್ಷಾರ್ಥ ಕಾರ್ಯಾಚರಣೆ ಚಾಲನೆ ನೀಡಿದ್ದು, ಸಧ್ಯದಲ್ಲೇ ಶುಭ ಮುಹೂರ್ತ ನೋಡಿ ಉದ್ಘಾಟನಾ ದಿನಾಂಕ ನಿಗದಿ ಮಾಡಲಿದ್ದೇವೆ. ಈ ಬಗ್ಗೆ ಸಿಎಂ ಜತೆ ಚರ್ಚೆ ಮಾಡಿದ್ದೇನೆ. ಇದು ನಮ್ಮ ಕೆಲಸದ ವೈಖರಿ" ಎಂದರು.

"ಅದೇ ರೀತಿ ಉದ್ಯೋಗ ಮೇಳ ಮೂಲಕ ನಮ್ಮ ಭಾಗದ ಯುವಕರಿಗೆ ಉದ್ಯೋಗ ಸಿಗುವಂತೆ ಮಾಡುತ್ತಿದ್ದೇವೆ. ನಾನು ಜಿಲ್ಲೆಗೆ ಹೋದಾಗಲೆಲ್ಲಾ ಕೆಲಸ ಕೊಡಿಸಿ ಎಂದು ಯುವಕರು ಅರ್ಜಿ ನೀಡುತ್ತಿದ್ದರು. ನಮಗೆ ಅರ್ಜಿ ಕೊಟ್ಟವರನ್ನು ಕರೆಸುತ್ತಿದ್ದೇವೆ. ಎಷ್ಟು ಜನರಿಗೆ ಉದ್ಯೋಗ ಸಿಗುತ್ತೋ ಸಿಗಲಿ. ನಾವು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ" ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com