
ರಾಮನಗರ: ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಭವಿಷ್ಯದ ನಾಯಕರಾಗಲಿದ್ದು, ಅವರನ್ನು ಪಕ್ಷಕ್ಕೆ ಒಪ್ಪಿಸುತ್ತಿದ್ದು, ಮಾರ್ಗದರ್ಶನ ನೀಡುವ ಜವಾಬ್ದಾರಿ ನಿಮಗಿದೆ ಎಂದು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಬಿಡದಿಯ ತಮ್ಮ ನಿವಾಸದಲ್ಲಿ ಭಾನುವಾರ ಜೆಡಿಎಸ್ ಪಕ್ಷದ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಸಚಿವರು ಮತ್ತು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರುಗಳ ಜೊತೆಗಿನ ಸಭೆಯಲ್ಲಿ ಮಾತನಾಡಿದ ಕುಮಾರಸ್ವಾಮಿ,ನಿಖಿಲ್ ನನ್ನ ಮಗನಾಗಿರುವುದರಿಂದ ನಾನು ಮಾತನಾಡುತ್ತಿಲ್ಲ. ಅವರಿಗಿರುವ ಗುಣದ ಬಗ್ಗೆ ಮಾತಾಡುತ್ತೇನೆ. ನಾನು ಅವರನ್ನು ಪಕ್ಷಕ್ಕೆ ಒಪ್ಪಿಸುತ್ತಿದ್ದೇನೆ. ಅವರಿಗೆ ಮಾರ್ಗದರ್ಶನ ಮಾಡುವ ಜವಾಬ್ದಾರಿ ನಿಮಗೆ ಇದೆ ಎಂದು ಹೇಳಿದರು.
ಪಕ್ಷ ಬಲವರ್ಧನೆ ಮತ್ತು ಸಂಘಟನೆಯ ದೃಷ್ಟಿಯಿಂದ ರಾಜ್ಯಾದ್ಯಂತ ಮತ್ತೆ ಸದಸ್ಯತ್ವ ನೊಂದಣಿ ಪುನಾರಂಭವಾಗಬೇಕು ಎಂದು ಸಚಿವರು ಪಕ್ಷದ ಮುಖಂಡರುಗಳಿಗೆ ಸೂಚನೆ ನೀಡಿದರು. ಪ್ರತಿ ಬೂತ್ಗಳಲ್ಲಿ ಸದಸ್ಯತ್ವ ನೊಂದಣಿ ಚಾಲನೆ ಆಗಬೇಕು. ಇನ್ನು ಕೆಲವು ಜಿಲ್ಲೆಗಳಲ್ಲಿ ಸದಸ್ಯತ್ವ ಚಾಲನೆ ನಿಂತಿದೆ ಅದನ್ನು ಮತ್ತೆ ಆರಂಭಿಸಬೇಕು. ಉಪಚುನಾವಣೆ ಫಲಿತಾಂಶಗಳು ಪಕ್ಷದ ಭವಿಷ್ಯವನ್ನ ತೀರ್ಮಾನಿಸುವುದಿಲ್ಲ ಸಚಿವರು ತಿಳಿಸಿದರು.
2018ರಲ್ಲಿ 2013ರಿಂದ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ 75 ಸ್ಥಾನಗಳಿಗೆ ಕುಸಿದಿತ್ತು. ಸಾಮಾನ್ಯ ಚುನಾವಣೆಯ ಚಿತ್ರವೇ ಬೇರೆ, ಸ್ವತಃ ಅವರ ಪಕ್ಷದ ಶಾಸಕರೇ ಅಭಿವೃದ್ಧಿಗೆ ಹಣವಿಲ್ಲ ಎಂದು ಸ್ಪಷ್ಟವಾಗಿ ಹೇಳುತ್ತಿದ್ದಾರೆ. ಈ ಸರ್ಕಾರವನ್ನು ಕೆಡವಲು ನಾವು ಬಿಜೆಪಿಯೊಂದಿಗೆ ಸಹಕಾರ ಮಾಡಬೇಕಾಗಿದೆ. ಜೆಡಿಎಸ್ ಪಕ್ಷ ಎಂದಿಗೂ ಹಿಂದಕ್ಕೆ ಬಿದ್ದಿಲ್ಲ. ದೇವೇಗೌಡರು ಮುಖ್ಯಮಂತ್ರಿ ಆದರು, ನಂತರ ಪ್ರಧಾನಿ ಆದರು. ಈಗ 2023ರ ಚುನಾವಣೆಯಲ್ಲಿ ಕೇವಲ 18 ಸ್ಥಾನಗಳನ್ನು ಗೆದ್ದಿದ್ದರೂ ನಾನು ಕೇಂದ್ರ ಸಚಿವನಾಗಿದ್ದೇನೆ ಎಂದು ಹೇಳಿದರು.
ಪಕ್ಷದ ಏಕತೆಯ ಮಹತ್ವವನ್ನು ಒತ್ತಿ ಹೇಳಿದ ಕುಮಾರಸ್ವಾಮಿ, ಪಕ್ಷದ ಅಸಮಾಧಾನಗಳಿದ್ದರೆ, ಅವುಗಳನ್ನು ಬಗೆಹರಿಸಿಕೊಳ್ಳಬೇಕು. ನಮ್ಮ ಪಕ್ಷವು ಕಾರ್ಯಕರ್ತರಿಗೋಸ್ಕರ ಇರುವ ಪಕ್ಷ. ಜಾತಿ ರಾಜಕಾರಣದಲ್ಲಿ ನಮಗೆ ನಂಬಿಕೆ ಇಲ್ಲ. ಎಲ್ಲ ಸಮುದಾಯಗಳನ್ನು ನಮ್ಮೊಂದಿಗೆ ಕೊಂಡೊಯ್ಯಲು ಬದ್ಧರಾಗಿದ್ದೇವೆ. ನಾವು ಒಗ್ಗಟ್ಟಿನಿಂದ ಇದ್ದರೆ, ನಮ್ಮ ಪಕ್ಷವನ್ನು ಯಾವುದೇ ಶಕ್ತಿಗಳು ಅಂತ್ಯಗೊಳಿಸಲಾರವು ಎಂದು ಹೇಳಿದರು.
ಸಭೆಯಲ್ಲಿ ಬಂಡೆಪ್ಪ ಖಾಶೆಂಪುರ್, ಹೆಚ್.ಕೆ ಕುಮಾರಸ್ವಾಮಿ, ಸಾ.ರಾ.ಮಹೇಶ್, ಸುರೇಶ ಬಾಬು, ನಿಖಿಲ್ ಕುಮಾರಸ್ವಾಮಿ, ಬಾಲಕೃಷ್ಣ, ಶಾರದಾ ಪೂರ್ಯ ನಾಯಕ್, ಲೀಲಾ ದೇವಿ ಪ್ರಸಾದ್ ಸೇರಿದಂತೆ ಹಲವು ಪ್ರಮುಖ ನಾಯಕರು ಪಾಲ್ಗೊಂಡರು.
Advertisement