ಬೆಂಗಳೂರು: ಜನತಾದಳ ಜಾತ್ಯತೀತ (ಜೆಡಿಎಸ್) ಮುಖಂಡ ನಿಖಿಲ್ ಕುಮಾರಸ್ವಾಮಿ ಅವರು ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ನಾಯಕ ಅಮಿತ್ ಶಾ ಅವರನ್ನು ಸೋಮವಾರ ನವದೆಹಲಿಯಲ್ಲಿ ಭೇಟಿ ಮಾಡಿದ್ದು, ಭೇಟಿ ವೇಳೆ ಬಿಬಿಎಂಪಿ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯದಲ್ಲಿ ಎನ್ಡಿಎ ಬಲಪಡಿಸುವ ಕುರಿತು ಮಾತುಕತೆ ನಡೆಸಿದ್ದಾರೆಂದು ತಿಳಿದುಬಂದಿದೆ.
ನವದೆಹಲಿಯಲ್ಲಿಯೇ ಉಳಿದುಕೊಂಡಿರುವ ನಿಖಿಲ್ ಅವರು ಶೀಘ್ರದಲ್ಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನೂ ಭೇಟಿಯಾಗುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
ಅಮಿತ್ ಶಾ ಭೇಟಿ ಕುರಿತು ಪ್ರತಿಕ್ರಿಯೆ ನೀಡಿರುವ ನಿಖಿಲ್ ಅವರು, ಅಮಿತ್ ಶಾ ಭೇಟಿ ವೇಳೆ ಚನ್ನಪಟ್ಟಣ ಉಪಚುನಾವಣೆ ಫಲಿತಾಂಶದ ಬಗ್ಗೆ ಚರ್ಚೆ ನಡೆಸಲಾಯಿತು. ಅವರು ಕೆಲ ಅಮೂಲ್ಯವಾದ ಸಲಹೆಗಳನ್ನು ನೀಡಿದರು. ರಾಜ್ಯದಲ್ಲಿ ಎನ್ಡಿಎಯನ್ನು ಬಲಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡುವಂತೆ ಪ್ರೋತ್ಸಾಹಿಸಿದರು. ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್ ಒಗ್ಗಟ್ಟಿನಿಂದ ಹೋರಾಡಲಿದ್ದು, ಈ ಚುನಾವಣೆಗಳ ಬಗ್ಗೆಯೂ ಚರ್ಚೆ ನಡೆಸಲಾಯಿತು ಎಂದು ಹೇಳಿದರು.
ಎನ್ಡಿಎಯನ್ನು ತಳಮಟ್ಟದಲ್ಲಿ ಬಲಪಡಿಸಲು ಅಮಿತ್ ಶಾ ಅವರು ಸಲಹೆಗಳನ್ನು ನೀಡಿದ್ದಾರೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯು ಎನ್ಡಿಎಗೆ ಸವಾಲು ಎಂಬುದು ನಿಜ. ಏಕೆಂದರೆ ಬಿಜೆಪಿ ಮತ್ತು ಜೆಡಿಎಸ್ನಿಂದ ಹಲವು ನಾಯಕರು ಟಿಕೆಟ್ ಆಕಾಂಕ್ಷಿಗಳಿದ್ದಾರೆ. ತಳಮಟ್ಟದ ಕಾರ್ಯಕರ್ತರು ಈ ಸವಾಲನ್ನು ಯಶಸ್ವಿಯಾಗಿ ಎದುರಿಸುಲಿದ್ದಾರೆ. ಕೇಂದ್ರದ ನಾಯಕರೂ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿಟ್ಟಿನಿಂದ ಬಲವಾದ ಹೋರಾಟ ನಡೆಸುವಂತೆ ಸಲಹೆ ನೀಡಿದ್ದಾರೆಂದು ತಿಳಿಸಿದರು.
ನಾನು ಪಕ್ಷದ ಶಿಸ್ತಿನ ಸಿಪಾಯಿ. ಜೆಡಿಎಸ್ ಪಕ್ಷದಿಂದ ನಿಖಿಲ್ ಕುಮಾರಸ್ವಾಮಿಯೇ ಹೊರತು ನಿಖಿಲ್ ಕುಮಾರಸ್ವಾಮಿ ಅವರಿಂದ ಜೆಡಿಎಸ್ ಅಲ್ಲ. ನನ್ನ ಇತಿಮಿತಿಗಳ ಬಗ್ಗೆ ನನಗೆ ಅರಿವಿದೆ. ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ. ತಳಮಟ್ಟದ ಕಾರ್ಯಕರ್ತರನ್ನು ಗುರುತಿಸಿ ಅವರಿಗೆ ರಾಜಕೀಯ ಶಕ್ತಿ ತುಂಬುತ್ತೇನೆ. ಅವರ ಜತೆಯಲ್ಲಿ ನಿಂತು ಕೆಲಸ ಮಾಡುತ್ತೇನೆ. ನಮ್ಮ ಪಕ್ಷದಲ್ಲಿ ಸಾಕಷ್ಟು ಹಿರಿಯರಿದ್ದಾರೆ, ಹಿರಿಯ ನಾಯಕರ ಮಾರ್ಗದರ್ಶನದಿಂದ ಕಾರ್ಯಕರ್ತನಾಗಿ ದುಡಿಯುತ್ತೇನೆ ಎಂದು ತಿಳಿಸಿದರು.
ಉಪ ಚುನಾವಣೆಯಲ್ಲಿ ಇಂತಹ ಫಲಿತಾಂಶವನ್ನು ನಾನು ನಿರೀಕ್ಷೆ ಮಾಡಿರಲಿಲ್ಲ. ಸೋಲಿಗೆ ಸಾಕಷ್ಟು ಕಾರಣಗಳಿವೆ. ಚುನಾವಣೆ ಹಿಂದಿನ 48 ಗಂಟೆಗಳಲ್ಲಿ ಮಹಿಳೆಯರ ಖಾತೆಗೆ ಎರಡು ತಿಂಗಳ ಗೃಹಲಕ್ಷಿ ಹಣ ಒಟ್ಟಿಗೆ ಜಮೆ ಮಾಡಿದ್ದಾರೆ. ಅದನ್ನು ಪ್ರಶ್ನೆ ಮಾಡಬೇಕಿದೆ. ಸರ್ಕಾರ ಆಡಳಿತವನ್ನು ಎಷ್ಟರಮಟ್ಟಿಗೆ ದುರ್ಬಳಕೆ ಮಾಡಿಕೊಂಡಿದೆ ಎನ್ನುವುದಕ್ಕೆ ಇದೊಂದು ಉದಾಹರಣೆ ಅಷ್ಟೆ. ಈಗ ಸೋಲಿಗೆ ಕಾರಣ ಹುಡುಕುವುದಿಲ್ಲ. ರಾಜಕೀಯ ಜೀವನದಲ್ಲಿ ಅನಿರೀಕ್ಷಿತ ನಿರ್ಧಾರ ಮಾಡಿದೆ.
ಎರಡು ಪಕ್ಷಗಳ ಕಾರ್ಯಕರ್ತರಿಗಾಗಿ ಸ್ಪರ್ಧೆ ಅನಿರ್ವಾಯವಾಗಿತ್ತು. ಚುನಾವಣೆಯ ಕೊನೆಯ ಹಂತದಲ್ಲಿ ಮೈತ್ರಿಗೆ ಕಪ್ಪುಚುಕ್ಕೆ ಬರದಂತೆ ಕುಮಾರಸ್ವಾಮಿ ಅವರು ನಿರ್ಧಾರ ಮಾಡಿದರು. ಮೈತ್ರಿಕೂಟದ ಎಲ್ಲಾ ನಾಯಕರ ಅಣತಿಯಂತೆ ಕೊನೆ ಕ್ಷಣದಲ್ಲಿ ನಾನು ಸ್ಪರ್ಧೆ ಮಾಡಬೇಕಾಯಿತು. ಕೇವಲ 15 ದಿನಗಳು ಮಾತ್ರ ಸಿದ್ಥತೆ ನಡೆಸಲು ಸಮಯವಿತ್ತು. ಅವರಿಗೆ ಸಾಕಷ್ಟು ಸಮಯ ಸಿಕ್ಕಿತ್ತು, ನಮ್ಮ ಕಡೆ ಅಭ್ಯರ್ಥಿ ಆಯ್ಕೆಯಲ್ಲಿ ವಿಳಂಬವಾಯಿತು. ನಮಗೆ ಜಯ ಸಿಕ್ಕದೆ ಹೋದರೂ ಫಲ ಸಿಕ್ಕಿದೆ ಎಂದರು.
ಒಂದು ಸಮುದಾಯಕ್ಕೆ ದೇವೇಗೌಡರು ಅನೇಕ ಕೊಡುಗೆಗಳನ್ನು ನೀಡಿದ್ದರು. ಅವರು ನಮ್ಮ ಕೈ ಹಿಡಿಯಲಿಲ್ಲ. ನಾಗಮಂಗಲದಲ್ಲಿ ಕೋಮು ಸಂಘರ್ಷ ಉಂಟಾಗಿತ್ತು. ಸಂಘರ್ಷದಲ್ಲಿ ಹಾನಿ ಉಂಟಾದ ಅಂಗಡಿ ಜನರಿಗೆ ಕುಮಾರಸ್ವಾಮಿ ಅವರು ಪರಿಹಾರ ನೀಡಿದ್ದಾರೆ. ಮುಸ್ಲಿಂ ಸಮುದಾಯಕ್ಕೂ ಪರಿಹಾರ ನೀಡಿದ್ದಾರೆ. ಚನ್ನಪಟ್ಟಣದ ಇತಿಹಾಸದಲ್ಲಿಯೇ ರೂ.1200 ಕೋಟಿ ಅನುದಾನ ತಂದು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಆದರೂ ಸೋತಿದ್ದೇವೆ, ಇದೊಂದು ನಮಗೆ ಪಾಠ ಎಂದು ಹೇಳಿದರು.
Advertisement