ವಕ್ಫ್ ಆಸ್ತಿ ಕಬಳಿಕೆ ಬಗ್ಗೆ ಮೌನವಾಗಿರಲು ವಿಜಯೇಂದ್ರರಿಂದ 150 ಕೋಟಿ ರೂ ಆಮಿಷ: ಸಿಬಿಐ ತನಿಖೆಗೆ ಸಿಎಂ ಸಿದ್ದರಾಮಯ್ಯ ಆಗ್ರಹ

ಪ್ರಧಾನಿ ಮೋದಿ ಅವರು ಈ ಆರೋಪವನ್ನು ಗಂಭೀರವಾಗಿ ಪರಿಗಣಿಸಿ, ಈ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಒತ್ತಾಯಿಸಿದ್ದಾರೆ.
siddaramaiah and vijayendra
ಸಿದ್ದರಾಮಯ್ಯ ಹಾಗೂ ವಿಜಯೇಂದ್ರ
Updated on

ಬೆಂಗಳೂರು: ವಕ್ಫ್ ಆಸ್ತಿ ಒತ್ತುವರಿ ತನಿಖಾ ವರದಿ ಬಗ್ಗೆ ಮಾತನಾಡದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು 150 ಕೋಟಿ ರೂಪಾಯಿ ಲಂಚದ ಆಮಿಷ ನೀಡಿದ್ದರು ಎಂದು ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೇರವಾಗಿ ಪತ್ರ ಬರೆದಿರುವುದು ಬಯಲಾಗಿದೆ. ಪ್ರಧಾನಿ ಮೋದಿ ಅವರು ಈ ಆರೋಪವನ್ನು ಗಂಭೀರವಾಗಿ ಪರಿಗಣಿಸಿ, ಈ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಒತ್ತಾಯಿಸಿದ್ದಾರೆ.

ಬಿ.ಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿಯೇ ವಿಜಯೇಂದ್ರ ನಮ್ಮ ಮನೆಗೆ ಬಂದು ವಕ್ಪ್ ಆಸ್ತಿ ಒತ್ತುವರಿ ಬಗ್ಗೆ ತನಿಖೆ ನಡೆಸಿ ನೀಡಿರುವ ವರದಿ ಬಗ್ಗೆ ಮೌನವಹಿಸುವಂತೆ ಕೇಳಿಕೊಂಡಿದ್ದರು. ಅಲ್ಲದೆ ಇದಕ್ಕಾಗಿ 150 ಕೋಟಿ ರೂಪಾಯಿ ಆಮಿಷವೊಡ್ಡಿದ್ದರು. ನಾನು ಅವರಿಗೆ ಗದರಿಸಿ ಮನೆಯಿಂದ ಓಡಿಸಿದ್ದೆ. ಅದರ ನಂತರ ಈ ಎಲ್ಲ ಘಟನೆಗಳನ್ನು ಉಲ್ಲೇಖಿಸಿ ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರ ಬರೆದಿದ್ದೆ’’ ಎಂದು ಸಾಕ್ಷಾತ್ ಅನ್ವರ್ ಮಾಣಿಪ್ಪಾಡಿಯವರೇ ಮಾಧ್ಯಮದ ಮುಂದೆ ಹೇಳಿಕೊಂಡಿದ್ದಾರೆ. ‘’ನಾ ಖಾವೂಂಗಾ, ನಾ ಖಾನೆ ದೂಂಗಾ’’ ಎಂದು ಊರೆಲ್ಲ ಡಂಗೂರ ಹೊಡ್ಕೊಂಡು ತಿರುಗಾಡುವ ನರೇಂದ್ರ ಮೋದಿಯವರು ಈ ಆರೋಪದ ಬಗ್ಗೆ ಮೌನವಾಗಿರುವುದು ಸಂಶಯ ಮಾತ್ರವಲ್ಲ, ಅನೇಕ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಸಿಎಂ ಸಿದ್ದರಾಮಯ್ಯ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ವಕ್ಫ್ ಆಸ್ತಿ ಲೂಟಿಯಲ್ಲಿ ಭಾಗಿಯಾಗಿರುವ ಬಿವೈ ವಿಜಯೇಂದ್ರ ಮತ್ತು ಇತರರನ್ನು ಬಿಜೆಪಿ ಹೈಕಮಾಂಡ್ ಏಕೆ ರಕ್ಷಿಸುತ್ತಿದೆ? ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದ್ದಾರೆ.

siddaramaiah and vijayendra
ವಕ್ಫ್ ವಿವಾದ: ಅಕ್ರಮ ಮುಚ್ಚಿಹಾಕಲು ಪಕ್ಷದ ನಾಯಕರಿಗೆ 150 ಕೋಟಿ ರೂ ಆಫರ್ ಮಾಡಿದ್ದರು; BJP ವಿರುದ್ಧ ಪ್ರಿಯಾಂಕ್ ಖರ್ಗೆ ಆರೋಪ

ವಕ್ಫ್ ಆಸ್ತಿ ವಿಚಾರದಲ್ಲಿ ವಿಜಯೇಂದ್ರ ವಹಿಸುತ್ತಿರುವ ಆಸಕ್ತಿಯನ್ನ ನೋಡಿದರೆ ಅವರು ಮತ್ತು ಅವರ ಕುಟುಂಬ ವರ್ಗ ವಕ್ಫ್ ಆಸ್ತಿ ಕಬಳಿಕೆಯಲ್ಲಿ ನೇರವಾಗಿ ಶಾಮೀಲಾಗಿರುವಂತೆ ಕಾಣುತ್ತಿದೆ. ಅವರ ಜೊತೆ ಪಕ್ಷದ ಮಹಾಮಹಿಮರೆಲ್ಲರೂ ಶಾಮೀಲಾಗಿರುವ ಸಂಶಯ ಇದೆ. ಬಿ.ಎಸ್.ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿಯೇ ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಗರಿಷ್ಠ ಸಂಖ್ಯೆಯಲ್ಲಿ ನೋಟಿಸ್ ನೀಡಿರುವುದನ್ನು ಈಗಾಗಲೇ ಮಾಧ್ಯಮಗಳು ವ್ಯಾಪಕವಾಗಿ ವರದಿ ಮಾಡಿವೆ. ಮಾಣಿಪ್ಪಾಡಿಯವರ ಬಾಯಿಮುಚ್ಚಿಸುವ ಷಡ್ಯಂತ್ರದಲ್ಲಿ ಯಾರೆಲ್ಲ ಶಾಮೀಲಾಗಿದ್ದಾರೆ? ವಕ್ಫ್ ಆಸ್ತಿ ಲೂಟಿಯಲ್ಲಿ ಬೇರೆ ಯಾರೆಲ್ಲ ಪಾಲುದಾರರಿದ್ದಾರೆ? ಎನ್ನುವ ಬಗ್ಗೆಯೂ ತನಿಖೆಯಾಗಬೇಕಾಗಿದೆ ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಈ ಬಗ್ಗೆ ಮಾಣಿಪ್ಪಾಡಿ ಅಥವಾ ವಿಜಯೇಂದ್ರ ಅವರು ಇದುವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com