ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಐದನೇ ಅಭ್ಯರ್ಥಿ ನಾಮಪತ್ರ ಸಲ್ಲಿಸಿರುವುದರಿಂದ ಚುನಾವಣಾ ಕಣ ರಂಗೇರಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, 27ನೇ ತಾರೀಕು ಏನಾಗುತ್ತೆ ಅಂತ ನೋಡುತ್ತಾ ಇರಿ, ಬೇರೆ ಪಕ್ಷದಿಂದ ಆತ್ಮಸಾಕ್ಷಿ ಮತಗಳು ಸಿಗುವ ಭರವಸೆ ಇದೆ ಎಂದು ಹೇಳಿದ್ದಾರೆ.
ರಾಜ್ಯಸಭೆ ಚುನಾವಣೆ ಫೆಬ್ರವರಿ 27ರಂದು ನಡೆಯಲಿದ್ದು, ಕರ್ನಾಟಕದಲ್ಲಿ ಕಾಂಗ್ರೆಸ್ ನಿಂದ ಅಜಯ್ ಮೇಕನ್, ನಾಸಿರ್ ಹುಸೇನ್, ಜಿ.ಸಿ.ಚಂದ್ರಶೇಖರ್, ಬಿಜೆಪಿಯಿಂದ ನಾರಾಯಣ ಬಾಂಡಗೆ, ಜೆಡಿಎಸ್ ನಿಂದ ಕುಪೇಂದ್ರ ರೆಡ್ಡಿ ನಾಮಪತ್ರ ಸಲ್ಲಿಸಿದ್ದಾರೆ. ಆ ಮೂಲಕ, ಅಡ್ಡ ಮತದಾನ ಮತ್ತು ಕುದುರೆ ವ್ಯಾಪಾರಕ್ಕೆ ಅನುವು ಮಾಡಿಕೊಟ್ಟಂತಾಗಿದೆಯೇ ಎನ್ನುವ ಸಂಶಯ ಉಂಟಾಗಿದೆ.
ಐವರು ಕಣದಲ್ಲಿ ಇರುವುದರಿಂದ ಒಬ್ಬರು ಸೋಲಲೇ ಬೇಕು. ಅದು ಮೇಲ್ನೋಟಕ್ಕೆ ಕಾಣುವುದು ಕಾಂಗ್ರೆಸ್ಸಿನ ಮೂರನೇ ಅಭ್ಯರ್ಥಿಯಾ ಅಥವಾ ಬಿಜೆಪಿ - ಜೆಡಿಎಸ್ ಮೈತ್ರಿಕೂಟದ ಎರಡನೇ ಅಭ್ಯರ್ಥಿಯಾ ಎನ್ನುವುದು. ಹಾಲೀ ಶಾಸಕರು ಪಕ್ಷದ ಆದೇಶವನ್ನು ಉಲ್ಲಂಘಿಸಿದರೆ ಮಾತ್ರ ಮೈತ್ರಿಕೂಟದ ಎರಡನೇ ಅಭ್ಯರ್ಥಿ ಗೆಲ್ಲಲು ಸಾಧ್ಯ.
ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಅವರಿಗೆ ಎಲ್ಲಾ ಪಕ್ಷಗಳಲ್ಲಿ ಸ್ನೇಹಿತರಿದ್ದು, ಅವರಿಗೆ ಆತ್ಮಸಾಕ್ಷಿಯ ಮತಗಳು ಬೀಳಲಿವೆ ಎಂದು ಬಿಜೆಪಿ ಮತ್ತು ಜೆಡಿಎಸ್ ನಾಯಕರು ಹೇಳಿದ್ದಾರೆ. ಇದಕ್ಕೆ ಕೌಂಟರ್ ಕೊಟ್ಟಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ನಮಗೂ ಎಲ್ಲಾ ಪಕ್ಷಗಳಲ್ಲೂ ಸ್ನೇಹಿತರಿದ್ದಾರೆ. ಜೆಡಿಎಸ್ ವಿಫಲವಾಗಿರುವ ಕಾರಣದಿಂದ ಅವರು ಬಿಜೆಪಿ ಜತೆ ನೆಂಟಸ್ಥನ ಮಾಡುತ್ತಿದ್ದಾರೆ. ಆ ಪಕ್ಷಗಳಿಂದ ನಮಗೂ ಆತ್ಮಸಾಕ್ಷಿಯ ಮತಗಳು ಬರುವ ವಿಶ್ವಾಸವಿದೆ. ಬಿಜೆಪಿ ಮತ್ತು ಜೆಡಿಎಸ್ ನವರು ಸದಾ ಕುದುರೆ ವ್ಯಾಪಾರ ಮಾಡುತ್ತಾರೆ. ಅವರು ಅದಕ್ಕೆ ಹೆಸರುವಾಸಿ" ಎಂದು ತಿರುಗೇಟು ನೀಡಿದ್ದಾರೆ. ಒಟ್ಟಿನಲ್ಲಿ ಐವರು ಕಣದಲ್ಲಿ ಇರುವುದರಿಂದ ಫೆಬ್ರವರಿ 27ಕ್ಕೆ ಶಾಸಕರು ಯಾವ ರೀತಿಯಾಗಿ ಆತ್ಮಸಾಕ್ಷಿ ಮತದಾನ ಮಾಡುತ್ತಾರೆ ಎನ್ನುವುದು ಕಾದು ನೋಡಬೇಕಿದೆ.
Advertisement