ಪುತ್ರನಿಗೆ ಬೆಂಗಳೂರು ಉತ್ತರ ಲೋಕಸಭಾ ಟಿಕೆಟ್ ಕೊಡಿಸಲು ಸೋಮಶೇಖರ್ ಕಸರತ್ತು! ಒಂದು ವೇಳೆ ಟಿಕೆಟ್ ಸಿಗದಿದ್ದರೆ...?

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯ ಯಶವಂತಪುರ ಶಾಸಕ ಎಸ್ ಟಿ ಸೋಮಶೇಖರ್ ಆಡಳಿತಾರೂಢ ಕಾಂಗ್ರೆಸ್ ನಾಯಕರ ಭೇಟಿ ಮುಂದುವರೆಸಿದ್ದಾರೆ.
ಡಿ.ಕೆ ಶಿವಕುಮಾರ್ ಭೇಟಿ ಮಾಡಿದ ಸೋಮಶೇಖರ್
ಡಿ.ಕೆ ಶಿವಕುಮಾರ್ ಭೇಟಿ ಮಾಡಿದ ಸೋಮಶೇಖರ್

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯ ಯಶವಂತಪುರ ಶಾಸಕ ಎಸ್ ಟಿ ಸೋಮಶೇಖರ್ ಆಡಳಿತಾರೂಢ ಕಾಂಗ್ರೆಸ್ ನಾಯಕರ ಭೇಟಿ ಮುಂದುವರೆಸಿದ್ದಾರೆ. ಸೋಮವಾರ ಡಿಸಿಎಂ ಡಿ ಕೆ ಶಿವಕುಮಾರ್ ಅವರ ನಿವಾಸದಲ್ಲಿ ಭೇಟಿ ಮಾಡಿದ ಅವರು, ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡುತ್ತಾರೆ ಎಂಬ ಊಹಾಪೋಹಗಳು ಹಬ್ಬಿವೆ.

ಕೇಂದ್ರದ ಮಾಜಿ ಸಚಿವ ಡಿವಿ ಸದಾನಂದಗೌಡ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದರೂ, ಬೆಂಗಳೂರು ಉತ್ತರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಮತ್ತೆ ಸ್ಪರ್ಧಿಸಬೇಕು ಎಂದು ಸೋಮಶೇಖರ್ ಒತ್ತಾಯಿಸಿದ್ದಾರೆ.

ಒಂದು ವೇಳೆ ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರನ್ನು ಕಣಕ್ಕಿಳಿಸಿದರೆ ಸೋಮಶೇಖರ್ ಅವರನ್ನು ಬೆಂಬಲಿಸುವ ಸಾಧ್ಯತೆ ಕಡಿಮೆಯಿದ್ದು, ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸುವ ಚಿಂತನೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ತಮ್ಮ ಪುತ್ರ ನಿಶಾಂತ್‌ ಅಭ್ಯರ್ಥಿಯಾಗಬೇಕೆಂದು ಅವರು ಲಾಬಿ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಒಂದು ವೇಳೆ ಪುತ್ರನಿಗೆ ಟಿಕೆಟ್ ಸಿಗದಿದ್ದರೆ ಕಾಂಗ್ರೆಸ್ ಅಭ್ಯರ್ಥಿಗೆ ತಮ್ಮ ಬೆಂಬಲ ನೀಡಲು ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಈಗಾಗಲೇ ತಮ್ಮ ಬೆಂಬಲಿಗರನ್ನು ಕಾಂಗ್ರೆಸ್‌ಗೆ ಕಳುಹಿಸಿ ಕಣಕ್ಕೆ ಇಳಿದಿದ್ದಾರೆ.

ಕೆಲವು ಬಿಜೆಪಿ ನಾಯಕರು ರಾತ್ರಿಯ ಸಮಯದಲ್ಲಿ ಬಂದು  ಶಿವಕುಮಾರ್ ಅವರನ್ನು ಭೇಟಿಯಾಗಿ ತಮ್ಮ ಕೆಲಸಗಳನ್ನು ಮಾಡಿಸಿಕೊಳ್ಳುತ್ತಾರೆ, ನಮ್ಮ ಕ್ಷೇತ್ರದ ಬಗ್ಗೆ ಒಂದು ಮನವಿ ಇತ್ತು ಹಾಗಾಗಿ ಬಂದಿದ್ದೆ. ಕೆಲ ಬಿಜೆಪಿ ಶಾಸಕರು ರಾತ್ರಿ ಬರುತ್ತಾರೆ. ಮತ್ತೊಂದಿಷ್ಟು ಜನ ಮಾಧ್ಯಮದ ಕಣ್ಣು ತಪ್ಪಿಸಿ ಹೋಗುತ್ತಾರೆ. ನಾನು ರಾಜರೋಷವಾಗಿ ಬಂದು ಹೋಗುತ್ತಿದ್ದೇನೆ. ಕೆಲವರ ಹಾಗೆ ಕತ್ತಲಲ್ಲಿ ಬಂದು ಹೋಗಲ್ಲ. ನಾನಿದ್ದಾಗಲೂ ಸಾಕಷ್ಟು ಜನ ಬರುತ್ತಿದ್ದರು. ಆದರೆ ನೀವು ಅವರನ್ನು ಗಮನಿಸುವುದಿಲ್ಲ, ಯಶವಂತಪುರ ಶಾಸಕರನ್ನು ಮಾತ್ರ ಗಮನಿಸುತ್ತೀರಿ ಎಂದು ಪ್ರತಿಕ್ರಿಯಿಸಿದರು.

ಆದರೆ ಅವರ ಭೇಟಿಯ ಬಗ್ಗೆ ಅವರು ಹೆಚ್ಚಿನ ವಿಷಯ ಬಹಿರಂಗಪಡಿಸಲಿಲ್ಲ. ಇತ್ತೀಚೆಗೆ ಅವರು ಮಾಜಿ ಸಚಿವ ಶಿವರಾಮ ಹೆಬ್ಬಾರ್ ಅವರೊಂದಿಗೆ ಇತ್ತೀಚೆಗೆ ಗೃಹ ಸಚಿವ ಡಾ ಜಿ ಪರಮೇಶ್ವರ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ್ದರು.

ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆಯ ನಂತರ ಎಂಎಲ್‌ಸಿ ಹೆಚ್ ವಿಶ್ವನಾಥ್ ಅವರೊಂದಿಗೆ ಕಾಂಗ್ರೆಸ್ ನಾಯಕರ ಔತಣ ಕೂಟದಲ್ಲಿ ಭಾಗಿಯಾಗಿದ್ದು ಭಾರೀ ಚರ್ಚೆಗೆ ಕಾರಣವಾಗಿತ್ತು. ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ವಿಜಯೇಂದ್ರ ಅವರು ಇದನ್ನು ಗಂಭೀರ ವಿಷಯ ಎಂದು ಬಣ್ಣಿಸಿದ್ದು, ಸೋಮಶೇಖರ್ ಮತ್ತು ಹೆಬ್ಬಾರ್ ಅವರಿಂದ ವಿವರಣೆ ಕೇಳಿದ್ದಾರೆ.

ಹೆಬ್ಬಾರ್ ಅವರು ಕಾಂಗ್ರೆಸ್ ಪಕ್ಷದಿಂದ ಉತ್ತರ ಕನ್ನಡ ಲೋಕಸಭಾ ಸ್ಥಾನದ ಆಕಾಂಕ್ಷಿಯಾಗಿದ್ದರು, ಅದಕ್ಕಾಗಿಯೇ ಅವರು ಸೋಮಶೇಖರ್ ಅವರೊಂದಿಗೆ ಕಾಂಗ್ರೆಸ್ ನಾಯಕರೊಂದಿಗೆ ಮಾತುಕತೆ ನಡೆಸಿದರು. ಇವರಿಬ್ಬರು ಮೂಲತಃ ಕಾಂಗ್ರೆಸ್ ಪಕ್ಷದವರು ಆದರೆ 2019 ರಲ್ಲಿ ಬಿ ಎಸ್ ಯಡಿಯೂರಪ್ಪ ಅವರನ್ನು ಸಿಎಂ ಮಾಡಲು ಆಪರೇಷನ್ ಕಮಲದ ಕಾರಣ ಪಕ್ಷ ಬದಲಾಯಿಸಿದರು.

ಬಿಜೆಪಿಯ ಹಾಲಿ ಸಂಸದ ಅನಂತಕುಮಾರ ಹೆಗಡೆ ಲೋಕಸಭೆ ಚುನಾವಣೆಯಿಂದ ದೂರ ಉಳಿದರೆ ಬಿಜೆಪಿಗೆ ಪರ್ಯಾಯ ಅಭ್ಯರ್ಥಿ ಹುಡುಕುವುದು ಕಷ್ಟ ಮತ್ತು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಹೆಬ್ಬಾರ್‌ ಸದುಪಯೋಗಪಡಿಸಿಕೊಳ್ಳಬಹುದು ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. ಆದರೆ ಉತ್ತರ ಕನ್ನಡದ ಬಿಜೆಪಿ ನಾಯಕರು ಹಿಂದೂ ಫೈರ್ ಬ್ರ್ಯಾಂಡ್ ಹೆಗ್ಡೆ ಅವರನ್ನು ಮತ್ತೆ ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com