ಬೆಂಗಳೂರು: ಮಾಜಿ ಸಿಎಂ ಹಾಗೂ ಜಾತ್ಯಾತೀತ ಜನತಾದಳ ನಾಯಕ ಎಚ್.ಡಿ. ಕುಮಾರಸ್ವಾಮಿ ಕೇಂದ್ರದ ಮಂತ್ರಿಯಾಗುವ ವಿಷಯ ನನಗೆ ಗೊತ್ತಿಲ್ಲ. ಪ್ರಧಾನಿ ನರೇಂದ್ರ ಮೋದಿಯವರ ಮನಸ್ಸಿನಲ್ಲಿ ಏನಿದೆಯೋ ಗೊತ್ತಿಲ್ಲ’ ಎಂದು ಪಕ್ಷದ ವರಿಷ್ಠ ಎಚ್.ಡಿ. ದೇವೇಗೌಡ ಹೇಳಿದ್ದಾರೆ.
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಂಪುಟಕ್ಕೆ ಕುಮಾರಸ್ವಾಮಿ ಸೇರ್ಪಡೆ ಕುರಿತು ಸುದ್ದಿಗೋಷ್ಠಿಯಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಮೋದಿಯವರು ಮೊದಲ ಬಾರಿ ಸಂಸದರಾದವರನ್ನು ಮಂತ್ರಿ ಮಾಡಿದ್ದಾರೆ, ಮೊದಲ ಬಾರಿಗೆ ಗೆದ್ದವರನ್ನು ಮುಖ್ಯಮಂತ್ರಿ ಮಾಡಿದ್ದಾರೆ. ಮೋದಿಯವರ ತಂತ್ರಗಾರಿಕೆ, ಯೋಜನೆಗಳೇನು ಎಂಬುದು ಅವರ ಸಹೋದ್ಯೋಗಿಗಳಿಗೂ ಗೊತ್ತಾಗುವುದಿಲ್ಲ. ಈ ವಿಷಯದಲ್ಲಿ ಅವರ ಭಾವನೆ ಏನಿದೆಯೋ ಎಂಬುದು ನನಗೆ ಗೊತ್ತಿಲ್ಲ. ನನ್ನ ಬಳಿ ಈ ಬಗ್ಗೆ ಚರ್ಚೆ ನಡೆಸಿಲ್ಲ’ ಎಂದರು.
ಲೋಕಸಭೆ ಚುನಾವಣೆಗೆ ಕುಮಾರಸ್ವಾಮಿ ಸ್ಪರ್ಧಿಸುವ ಬಗ್ಗೆ ಕೇಳಿದ ಪ್ರಶ್ನೆಗೂ, ‘ಮೋದಿಯವರ ಮನಸ್ಸಿನಲ್ಲಿ ಏನಿದೆಯೋ ಗೊತ್ತಿಲ್ಲ. ಅವರು ಏನು ಹೇಳುತ್ತಾರೋ ನೋಡೋಣ. ಮೋದಿಯವರು ಹೇಳಿದ್ದನ್ನು ಕುಮಾರಸ್ವಾಮಿ ಕೇಳುತ್ತಾರೆ. ಅವರು ಸ್ಪರ್ಧಿಸುವ ಪರಿಸ್ಥಿತಿ ಎದುರಾದರೆ ಎಲ್ಲರೂ ಕುಳಿತು ಚರ್ಚಿಸಿ ತೀರ್ಮಾನ ಮಾಡುತ್ತೇವೆ’ ಎಂದರು.
ಇದೇ ವೇಳೆ ಲೋಕಸಭೆ ಚುನಾವಣೆಯಲ್ಲಿ ತಮ್ಮ ಸ್ಪರ್ಧೆ ಕುರಿತು ಸ್ಪಷ್ಟನೆ ನೀಡಿದ ದೇವೇಗೌಡ ಅವರು, ‘ನನಗೀಗ 92 ವರ್ಷ. ಯಾವುದೇ ಕಾರಣಕ್ಕೂ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ರಾಜ್ಯಸಭೆಯ ಅವಧಿ ಎರಡೂವರೆ ವರ್ಷವಿದೆ. ಚುನಾವಣೆ ವೇಳೆ ಮೈತ್ರಿ ಕೂಟದ ಪರವಾಗಿ ಪ್ರಚಾರ ಮಾಡುತ್ತೇನೆ. ಬಿಜೆಪಿಯವರು ಎಲ್ಲಿಗೆ ಕರೆದರೂ ಹೋಗುತ್ತೇನೆ’ ಎಂದು ದೇವೇಗೌಡ ಹೇಳಿದರು.
ಹಾಸನದಿಂದಲೇ ಪ್ರಜ್ವಲ್ ರೇವಣ್ಣ ಸ್ಪರ್ಧೆ
‘ಪ್ರಜ್ವಲ್ ರೇವಣ್ಣಗೆ ಮೋದಿ ಹಾಗೂ ಕುಮಾರಸ್ವಾಮಿ ಇಬ್ಬರೂ ಆಶೀರ್ವಾದ ಮಾಡಲಿದ್ದಾರೆ. ನಾನು ಕೂಡ ಆಶೀರ್ವಾದ ಮಾಡಿದ್ದೇನೆ. ಹಾಸನದಿಂದ ಅವರು ಸ್ಪರ್ಧಿಸುವ ಬಗ್ಗೆ ನಿಮಗೆ ಅನುಮಾನವೇಕೆ’ ಎಂದು ದೇವೇಗೌಡ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಪ್ರಮುಖರ ಸಮಿತಿಯ ಅಧ್ಯಕ್ಷ ಜಿ.ಟಿ.ದೇವೇಗೌಡ, ಮಾಜಿ ಸಂಸದ ಕುಪೇಂದ್ರ ರೆಡ್ಡಿ, ವಿಧಾನಪರಿಷತ್ತಿನ ಸದಸ್ಯರಾದ ಕೆ.ಎ. ತಿಪ್ಪೇಸ್ವಾಮಿ, ಟಿ.ಎ. ಶರವಣ ಉಪಸ್ಥಿತರಿದ್ದರು.
Advertisement