ಶ್ರೀರಾಮನನ್ನು ರಾಜಕೀಯ ಲಾಭಕ್ಕೆ ಬಳಸಿಕೊಂಡ ಬಿಜೆಪಿಗೆ ಶಾಪ ತಟ್ಟಲಿದೆ: ಸಚಿವ ಮಧು ಬಂಗಾರಪ್ಪ
ಚಿತ್ರದುರ್ಗ: ಅಯೋಧ್ಯೆಯಲ್ಲಿ ಬಾಲರಾಮ ವಿಗ್ರಹ ಪ್ರಾಣ ಪ್ರತಿಷ್ಠಾಪನಾ ಸಮಾರಂಭವನ್ನು ರಾಜಕೀಯ ಉದ್ದೇಶಕ್ಕೆ ಬಳಸಿಕೊಂಡ ಬಿಜೆಪಿಗೆ ಶಾಪ ತಟ್ಟಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಂಗಳವಾರ ಕಿಡಿಕಾರಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರ, ಬಿಜೆಪಿ ನಾಯಕರು ಶ್ರೀರಾಮನನ್ನು ಬೀದಿಗೆ ತಂದು ನಿಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಮನ ಶಾಪ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ತಟ್ಟಲಿದೆ ಎಂದು ಹೇಳಿದ್ದಾರೆ.
‘ರಾಮಮಂದಿರ ಕಾನೂನು ಬದ್ಧವಾಗಿ ನಿರ್ಮಾಣವಾಗಿದೆ. ಈ ವಿಚಾರದಲ್ಲಿ ಬಿಜೆಪಿ ನಡೆದುಕೊಳ್ಳುತ್ತಿರುವ ರೀತಿ ಹಾಸ್ಯಾಸ್ಪದವಾಗಿದೆ. ಶ್ರೀರಾಮ ನನ್ನ ಹೃದಯದಲ್ಲಿಯೂ ಇದ್ದಾನೆ. ಶ್ರೀರಾಮನ ಹೆಸರಿನಲ್ಲಿ ಬಿಜೆಪಿ ಕೀಳುಮಟ್ಟದ ರಾಜಕೀಯ ಮಾಡುತ್ತಿದೆ. ಬೇರೆ ಧರ್ಮವನ್ನು ಗೌರವಿಸುವ ವ್ಯಕ್ತಿ ನಿಜವಾದ ಹಿಂದೂ. ನಾನು ಹಿಂದೂ ಎಂದು ಬಹಿರಂಗವಾಗಿ ಹೇಳಿಕೊಳ್ಳುವ ಅಗತ್ಯವಿಲ್ಲ. ಧರ್ಮ ನನ್ನ ರಕ್ತ, ಮಾತಿನಲ್ಲಿದೆ. ದೇವರನ್ನು ಪಕ್ಷಕ್ಕೆ ಅಡ ಇಟ್ಟುಕೊಳ್ಳುವುದನ್ನು ಒಪ್ಪುವುದಿಲ್ಲ. ಅಂಬೇಡ್ಕರ್ ರಚಿಸಿದ ಸಂವಿಧಾನ ದೇಶದ ದೇವರು ಎಂದು ತಿಳಿಸಿದ್ದಾರೆ.
ಬಿಜೆಪಿ ನಾಯಕರಿಗೆ ಒಳ್ಳೆಯತನ ಗೊತ್ತಿಲ್ಲ. ಕಿತಾಪತಿ ಮಾಡುವಲ್ಲಿ ಅವರು ಮೊದಲಿಗರು. ಕೇಂದ್ರದಲ್ಲಿ ಅಧಿಕಾರದಲ್ಲಿದ್ದು ಕೆಟ್ಟ ರೀತಿಯಲ್ಲಿ ವರ್ತಿಸುತ್ತಿರುವುದನ್ನು ಜನರು ಗಮನಿಸುತ್ತಿದ್ದಾರೆಂದು ಕಿಡಿಸಿದರು.
ಇದೇ ವೇಳೆ ‘ಭಾರತ್ ಜೋಡೊ ನ್ಯಾಯ ಯಾತ್ರೆ’ಗೆ ಅಡ್ಡಿಪಡಿಸುತ್ತಿರುವುದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ‘ಅಸ್ಸಾಂನಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಕಾನೂನು ದುರುಪಯೋಗ ಮಾಡಿಕೊಂಡು ಯಾತ್ರೆಗೆ ಅಡ್ಡಿಪಡಿಸುವ ಹುನ್ನಾರಗಳು ನಡೆಯುತ್ತಿವೆ. ರಾಹುಲ್ ಗಾಂಧಿ ಕುಟುಂಬದ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಸಹಿಸುವುದಿಲ್ಲ’ ಎಂದು ಎಚ್ಚರಿಕೆ ನೀಡಿದರು.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ