ಮೈಸೂರು-ಕೊಡಗು, ಚಾಮರಾಜನಗರ ಲೋಕಸಭಾ ಕ್ಷೇತ್ರ ಗೆಲ್ಲುವ ಗುರಿ: ಪ್ರಬಲರನ್ನು ಕಣಕ್ಕಿಳಿಸುವ ಸಿಎಂ ಸಿದ್ದರಾಮಯ್ಯ ಉತ್ಸುಕ!

ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ ಸೀಟು ಹಂಚಿಕೆಯ ಮಾತುಕತೆ ಆರಂಭವಾಗಲಿದ್ದು, ಆಡಳಿತಾರೂಢ ಕಾಂಗ್ರೆಸ್‌ಗೆ ಸೆಡ್ಡುಹೊಡೆಯಲು ಹಲವು ತಂತ್ರಗಳನ್ನು ಹೆಣೆಯುತ್ತಿದೆ. ಇನ್ನೊಂದೆಡೆ ಆಡಳಿತಾರೂಢ ಕಾಂಗ್ರೆಸ್ ಕೂಡ ಹಿಂದೆಬಿದ್ದಿಲ್ಲ.
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Updated on

ಮೈಸೂರು: ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ ಸೀಟು ಹಂಚಿಕೆಯ ಮಾತುಕತೆ ಆರಂಭವಾಗಲಿದ್ದು, ಆಡಳಿತಾರೂಢ ಕಾಂಗ್ರೆಸ್‌ಗೆ ಸೆಡ್ಡುಹೊಡೆಯಲು ಹಲವು ತಂತ್ರಗಳನ್ನು ಹೆಣೆಯುತ್ತಿದೆ. ಇನ್ನೊಂದೆಡೆ ಆಡಳಿತಾರೂಢ ಕಾಂಗ್ರೆಸ್ ಕೂಡ ಹಿಂದೆಬಿದ್ದಿಲ್ಲ. ಪಕ್ಷದ ಕಾರ್ಯಕರ್ತರನ್ನು ಸಜ್ಜುಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ತವರು ಜಿಲ್ಲೆ ಮೈಸೂರು ಮತ್ತು ಚಾಮರಾಜನಗರದಲ್ಲಿ ತಮಗೆ ಸೂಕ್ತ ಎನಿಸುವ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಚುನಾವಣೆ ಗೆಲ್ಲುವ ಹುಮ್ಮಸ್ಸಿನಲ್ಲಿದ್ದಾರೆ. ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಭೆಗಳನ್ನು ನಡೆಸಲಿದ್ದಾರೆ. 

ಈ ಬಾರಿ ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಕೈಜೋಡಿಸಿದ ನಂತರ ಹಳೇ ಮೈಸೂರು ಭಾಗದಲ್ಲಿ ಸ್ಪರ್ಧೆಯ ಕಾವು ಹೆಚ್ಚಾಗುವುದಂತು ಖಂಡಿತ. ಸಿದ್ದರಾಮಯ್ಯ ಅವರು ಲೋಕಸಭೆ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಹಳೇ ಮೈಸೂರಿನಲ್ಲಿ ತಮ್ಮ ವರ್ಚಸ್ಸು ಸಾಬೀತುಪಡಿಸಲು ಎರಡೂ ಸ್ಥಾನಗಳನ್ನು ಗೆಲ್ಲುವ ಉತ್ಸಾಹದಲ್ಲಿದ್ದಾರೆ. ಮೈಸೂರು ಮತ್ತು ಕೊಡಗಿನಲ್ಲಿ ಎರಡು ದಿನಗಳ ಪ್ರವಾಸದ ವೇಳೆ ಶಾಸಕರ ಸಭೆ ಕರೆದಿದ್ದಾರೆ.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ 13 ಆಕಾಂಕ್ಷಿಗಳು ಮತ್ತು ಚಾಮರಾಜನಗರ ಲೋಕಸಭಾ ಕ್ಷೇತ್ರದ 12 ಆಕಾಂಕ್ಷಿಗಳ ಪೈಕಿ ಮೂವರು ಪ್ರಬಲ ಆಕಾಂಕ್ಷಿಗಳಿದ್ದು, ಸಿದ್ದರಾಮಯ್ಯ ಅವರೇ ಶಾಸಕರ ಜೊತೆ ಮುಖಾಮುಖಿ ಸಭೆ ನಡೆಸಲಿದ್ದಾರೆ.

ತಮ್ಮ ಪುತ್ರ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಮತ್ತು ಒಕ್ಕಲಿಗ ಸಮುದಾಯದ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಪಕ್ಷ ಉತ್ಸುಕವಾಗಿದೆ ಎಂದು ಸ್ಪಷ್ಟಪಡಿಸಿದ ಸಿದ್ದರಾಮಯ್ಯ, ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು ಎಂದಿದ್ದಾರೆ. ಎಲ್ಲ ಶಾಸಕರು ಮತ್ತು ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಯಾವುದೇ ಗೊಂದಲ, ಭಿನ್ನಾಭಿಪ್ರಾಯ ಪಕ್ಷದಲ್ಲಿ ಉಂಟಾಗದಂತೆ ನೋಡುತ್ತಿದ್ದಾರೆ. 

ಕಾಂಗ್ರೆಸ್ ಅಭ್ಯರ್ಥಿಯು ಒಕ್ಕಲಿಗ ಮತಗಳಿಗೆ ಕತ್ತರಿ ಹಾಕುವ ಸಾಮರ್ಥ್ಯದಲ್ಲಿರಬೇಕು ಮತ್ತು ಹಾಲಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಗೆಲ್ಲುವ ತಾಕತ್ತು ಇರಬೇಕು. ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಸಹಾಯ ಮಾಡಿದ ಅಹಿಂದ ಮತಗಳ ಕ್ರೋಡೀಕರಣದ ಮೇಲೆ ಕೇಂದ್ರೀಕರಿಸುವುದನ್ನು ಹೊರತುಪಡಿಸಿ ಮುಖ್ಯಮಂತ್ರಿಗಳು ಪ್ರಮುಖ ನಾಯಕರು ಮತ್ತು ಕಾರ್ಯಕರ್ತರ ಸಮಾನಾಂತರ ಸಭೆಗಳನ್ನು ನಡೆಸಲಿದ್ದಾರೆ. ಮತ್ತೊಂದೆಡ ಚಾಮರಾಜನಗರವನ್ನು ಮರಳಿ ಪಡೆಯಲು ಸಿದ್ದರಾಮಯ್ಯನವರು ಉತ್ಸುಕರಾಗಿದ್ದಾರೆ. 

ಕಾಂಗ್ರೆಸ್ ಪಕ್ಷದ ಭದ್ರಕೋಟೆ ಎಂದು ಪರಿಗಣಿಸಲಾದ ಚಾಮರಾಜನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಕಡಿಮೆ ಅಂತರದಿಂದ ಕಳೆದ ಬಾರಿ ಬಿಜೆಪಿಗೆ ಸೋತಿದೆ, ಈ ಬಾರಿ ಗೆದ್ದೇ ತೀರಬೇಕೆಂಬ ಹಠದಲ್ಲಿ ಕಾಂಗ್ರೆಸ್ ಇದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com