
ಬೆಂಗಳೂರು: ಬಿಜೆಪಿ ಶಾಸಕರು ಗುರುವಾರ ರಾಜಭವನವರೆಗೂ ಮೆರವಣಿಗೆ ನಡೆಸಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಿವೇಶನ ಹಗರಣ ಕುರಿತು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಿದರು. ಉಭಯ ಸದನಗಳಲ್ಲಿ ಈ ವಿಷಯ ಪ್ರಸ್ತಾಪಿಸಲು ಆಡಳಿತಾರೂಢ ಕಾಂಗ್ರೆಸ್ ಅವಕಾಶ ನೀಡಲಿಲ್ಲ ಎಂದು ಅವರು ದೂರಿದ್ದಾರೆ.
ವಿಧಾನಮಂಡಲದ ಅಧಿವೇಶನವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದ ನಂತರ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಶಾಸಕರು ಭಿತ್ತಿಪತ್ರಗಳು ಮತ್ತು ಘೋಷಣೆಗಳೊಂದಿಗೆ ರಾಜಭವನಕ್ಕೆ ಮೆರವಣಿಗೆ ನಡೆಸಿದ ಪಕ್ಷದ ನಾಯಕರು, ರಾಜ್ಯಪಾಲರನ್ನು ಭೇಟಿ ಮಾಡಿ ಹಗರಣದ ವಿವರಗಳನ್ನು ನೀಡುವ ಮನವಿ ಪತ್ರ ಸಲ್ಲಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್, ಮುಖ್ಯಮಂತ್ರಿ ಸಿದ್ದರಾಮಯ್ಯ ನೇರವಾಗಿ ಭಾಗಿಯಾಗಿರುವ ಮುಡಾ ಹಗರಣದ ಬಗ್ಗೆ ಮಾತನಾಡಲು ಆಡಳಿತಾರೂಢ ಕಾಂಗ್ರೆಸ್ ಅವಕಾಶ ನೀಡಲಿಲ್ಲ ಎಂದು ಆರೋಪಿಸಿದರು. ಈ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿರುವುದು ಈಗ ಜಗತ್ತಿಗೆ ಗೊತ್ತಾಗಿದೆ. ಕರ್ನಾಟಕದ ಇತಿಹಾಸದಲ್ಲಿ ಆಡಳಿತ ಪಕ್ಷಕ್ಕೆ ಇಂತಹ ಅವಮಾನ ಎದುರಾಗಿರಲಿಲ್ಲ. ಹಗರಣಗಳ ನಂತರ ಹಗರಣಗಳು ಮುನ್ನೆಲೆಗೆ ಬಂದಿವೆ ಎಂದು ಟೀಕಿಸಿದರು.
187 ಕೋಟಿ ರೂ. ಮೊತ್ತದ ಕರ್ನಾಟಕ ಮಹರ್ಷಿ ವಾಲ್ಮೀಕಿ ಎಸ್ಟಿ ಅಭಿವೃದ್ಧಿ ನಿಗಮಕ್ಕೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಜೆಡಿಎಸ್ ಹೋರಾಟದಿಂದ ಕಾಂಗ್ರೆಸ್ ಶಾಸಕ ಬಿ ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಈಗ ಜೈಲಿನಲ್ಲಿದ್ದಾರೆ ಹಲವಾರು ಅಧಿಕಾರಿಗಳು ಕೂಡ ಜೈಲಿನಲ್ಲಿದ್ದು, ಮತ್ತೊಬ್ಬ ಶಾಸಕ ಜೈಲಿಗೆ ಹೋಗಲಿದ್ದಾರೆ ಎಂದು ಅವರು ಹೇಳಿದರು.
ಇದೇ ವೇಳೆ ಮುಡಾ ಹಗರಣ ಕುರಿತು ಮಾತನಾಡಿದ ಅಶೋಕ್, 1990ರ ದಶಕದಲ್ಲಿ ಜೆ ಎಚ್ ಪಟೇಲ್ ಸರಕಾರದಲ್ಲಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿಯಾಗಿದ್ದಾಗ ಹಗರಣ ನಡೆದಿತ್ತು. ''50:50 ಯೋಜನೆಯಡಿ ಸಿದ್ದರಾಮಯ್ಯ ಮತ್ತು ಅವರ ಬೆಂಬಲಿಗರು ಮುಡಾ ಹಗರಣದಲ್ಲಿ ಒಂದು ಲಕ್ಷ ಚದರ ಅಡಿ ಭೂಮಿಯನ್ನು ಕಬಳಿಸಿದ್ದಾರೆ ಎಂದು ಆರೋಪಿಸಿದರು.
ರಾಜ್ಯಪಾಲರ ಸಮ್ಮುಖದಲ್ಲಿ ಸಾಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವುದಾಗಿ ಪ್ರಮಾಣ ವಚನ ಸ್ವೀಕರಿಸಿದ ಮುಖ್ಯಮಂತ್ರಿಗಳು ಸಂವಿಧಾನವನ್ನು ಉಲ್ಲಂಘಿಸುತ್ತಿದ್ದಾರೆ, ಅದರಲ್ಲಿ ಸಿದ್ದರಾಮಯ್ಯ ನೇರವಾಗಿ ಭಾಗಿಯಾಗಿದ್ದಾರೆ ಎಂಬುದಕ್ಕೆ ನನ್ನ ಬಳಿ ದಾಖಲೆಗಳಿವೆ. ‘ಮುಡಾ ನಿವೇಶನಕ್ಕಾಗಿ 86 ಸಾವಿರ ಜನ ಸರದಿ ಸಾಲಿನಲ್ಲಿದ್ದಾಗ 14 ನಿವೇಶನಗಳನ್ನು ಸಿದ್ದರಾಮಯ್ಯ ಕುಟುಂಬಕ್ಕೆ ನೀಡಲಾಗಿದೆ ಎಂದು ಆರೋಪಿಸಿದರು.
ಕರ್ನಾಟಕ ವಿಧಾನಮಂಡಲದ ಉಭಯ ಸದನಗಳಲ್ಲಿ ಈ ವಿಷಯವನ್ನು ಪ್ರಸ್ತಾಪಿಸಲು ಬಿಜೆಪಿ ಶಾಸಕರಿಗೆ ಅನುಮತಿ ನಿರಾಕರಿಸಲಾಗಿದೆ. ಬಿಜೆಪಿ ಮತ್ತು ಅದರ ಮಿತ್ರ ಪಕ್ಷ ಜೆಡಿಎಸ್ ಮುಖ್ಯಮಂತ್ರಿ ರಾಜೀನಾಮೆಗೆ ಒತ್ತಾಯಿಸುತ್ತಿವೆ ಎಂದು ಅವರು ಹೇಳಿದರು.
Advertisement