
ಬೆಂಗಳೂರು: ಬಹುನಿರೀಕ್ಷಿತ ಲೋಕಸಭಾ ಚುನಾವಣೆ ಮತದಾನ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಇನ್ನು ಕೆಲವೇ ಕ್ಷಣಗಳಲ್ಲಿ ಎಲ್ಲಾ ಅಭ್ಯರ್ಥಿಗಳ ಭವಿಷ್ಯ ಹೊರಬೀಳಲಿದೆ.
ಇದರ ಬೆನ್ನಲ್ಲೇ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಯವರು ವಿಜಯನಗರದ ಆದಿಚುಂಚನಗಿರಿ ಮಹಾಸಂಸ್ಥಾನ ಮಠಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಮಠದ ಆವರಣದಲ್ಲಿರುವ ಗಂಗಾಧರೇಶ್ವರ ದೇವಾಲಯದಲ್ಲಿ ಡಾ.ನಿರ್ಮಲಾನಂದ ಶ್ರೀಗಳ) ಸಮ್ಮುಖದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ವಿಶೇಷ ಮಂಗಳಾರತಿ ಮಾಡಿಸಿ, ಶ್ರೀಗಳ ಆಶೀರ್ವಾದ ಪಡೆದುಕೊಂಡರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯ ಕ್ಷೇತ್ರದ ಜನತೆ ನನಗೆ ಆಶೀರ್ವಾದ ಮಾಡುತ್ತಾರೆ. ಎಕ್ಸಿಟ್ ಪೋಲ್ ಸರ್ವೆ ಶೇ 90ರಷ್ಟು ಸತ್ಯವಾಗಲಿದೆ. ರಾಜ್ಯದಲ್ಲಿ 25 ಸ್ಥಾನಗಳಲ್ಲಿ, ದೇಶದಲ್ಲಿ ಎನ್ಡಿಎ ಹೆಚ್ಚು ಸ್ಥಾನಗಳು ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದರು.
ದೇಶದಲ್ಲಿ ಭರ್ಜರಿ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಮಂಡ್ಯದಲ್ಲಿ ಪೋಸ್ಟಲ್ ಬ್ಯಾಲೆಟ್ ಶುರುವಾಗಿದೆ. ಕೊನೆಯ ಹಂತದವರೆಗೂ ಮುನ್ನಡೆಯಲ್ಲಿ ಇರುತ್ತೇನೆ. ನಾನು ಚುನಾವಣೆ ಶುರುವಿನಿಂದಲೂ ಉತ್ಸಾಹದಿಂದ ಇದ್ದೇನೆಂದು ತಿಳಿಸಿದರು.
ಎನ್ಡಿಎ ಅಧಿಕಾರಕ್ಕೆ ಬಂದರೆ ಕೇಂದ್ರ ಸಚಿವರಾಗುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿ, ಆ ಬಗ್ಗೆ ನನಗೆ ಹೆಚ್ಚಿನ ಆಸಕ್ತಿ ಇಲ್ಲ. ಮಂಡ್ಯ ಜಿಲ್ಲೆಗೆ ನನ್ನ ಕೈಲಾದ ಅಳಿಲು ಸೇವೆಯನ್ನು ಮಾಡುತ್ತೇನೆ. ರಾಜ್ಯಕ್ಕೆ ಏನಾಗಬೇಕೋ ಅದನ್ನು ಮಾಡುವುದು ನನ್ನ ಮೊದಲ ಆದ್ಯತೆ ಎಂದು ಹೇಳಿದರು.
Advertisement