ಸರ್ಕಾರದ ಅನುಮತಿ ಇಲ್ಲದಿದ್ದರೂ ತನಿಖೆ ನಡೆಸಲು CBI ಗೆ ಅವಕಾಶ ಇದೆ: DCM ಡಿ.ಕೆ ಶಿವಕುಮಾರ್

ಬ್ಯಾಂಕ್‌ ಹಾಗೂ ಹಣಕಾಸು ಸಂಸ್ಥೆಗಳಲ್ಲಿ ಅಕ್ರಮ ನಡೆದರೆ ಸರ್ಕಾರ ಅನುಮತಿ ಇಲ್ಲದಿದ್ದರೂ ತನಿಖೆ ನಡೆಸಲು ಸಿಬಿಐಗೆ ಅವಕಾಶ ಇದೆ ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಶುಕ್ರವಾರ ಹೇಳಿದರು.
ಡಿಸಿಎಂ ಡಿಕೆ.ಶಿವಕುಮಾರ್
ಡಿಸಿಎಂ ಡಿಕೆ.ಶಿವಕುಮಾರ್
Updated on

ಬೆಂಗಳೂರು: ಬ್ಯಾಂಕ್‌ ಹಾಗೂ ಹಣಕಾಸು ಸಂಸ್ಥೆಗಳಲ್ಲಿ ಅಕ್ರಮ ನಡೆದರೆ ಸರ್ಕಾರ ಅನುಮತಿ ಇಲ್ಲದಿದ್ದರೂ ತನಿಖೆ ನಡೆಸಲು ಸಿಬಿಐಗೆ ಅವಕಾಶ ಇದೆ ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಶುಕ್ರವಾರ ಹೇಳಿದರು.

ಬೆಂಗಳೂರಿನಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು, ಬ್ಯಾಂಕ್ ಮತ್ತು ಹಣಕಾಸು ಸಂಸ್ಥೆಗಳಲ್ಲಿ ಅಕ್ರಮ ನಡೆದರೆ ರಾಜ್ಯ ಸರ್ಕಾರದ ಅನುಮತಿಯಿಲ್ಲದೆ ತನಿಖೆ ನಡೆಸಲು ಸಿಬಿಗೆ ಅವಕಾಶ ಇದ್ದು, ಸರ್ಕಾರದ ಒಪ್ಪಿಗೆಯ ಅಗತ್ಯ ಇರುವುದಿಲ್ಲ. ಹೀಗಾಗಿ ನಾವು ಸಿಬಿಐಗೆ ವಹಿಸುವ ಪ್ರಶ್ನೆಯೇ ಬರುವುದಿಲ್ಲ. ಹೀಗಾಗಿ ಕೇಂದ್ರ ಸಂಸ್ಥೆ ಸ್ವಯಂಪ್ರೇರಿತವಾಗಿ ತನಿಖೆ ಕೈಗೆತ್ತಿಕೊಳ್ಳಬಹುದು. ತನಿಖೆಗೆ ಸರ್ಕಾರ ಸಹಕಾರ ನೀಡಲು ಸಿದ್ಧವಿದೆ ಎಂದು ಹೇಳಿದರು.

ಇದೇ ವೇಳೆ, ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರದಿಂದ ನೂತನವಾಗಿ ಆಯ್ಕೆಯಾದ ಕಾಂಗ್ರೆಸ್ ಎಂಎಲ್‌ಸಿಗಳನ್ನು ಶಿವಕುಮಾರ್ ಅಭಿನಂದಿಸಿದರು.

ರಾಹುಲ್‌ ಗಾಂಧಿ ಸಿಎಂ ರಾಜೀನಾಮೆ ಪಡೆಯಲು ಬಂದಿದ್ದಾರಾ ಎಂಬ ಬಿಜೆಪಿ ಹೇಳಿಕೆಗೆ, ಮೊದಲು ಅವರ ಪಕ್ಷದ ಬಗ್ಗೆ ಮಾತನಾಡಲಿ. ನಿಗಮ ಮಂಡಳಿಗಳಲ್ಲಿ ಹಣ ದುರುಪಯೋಗ ಪ್ರಕರಣ ಈ ಹಿಂದೆಯೂ ಆಗಿದೆ. ಈಗ ಆತ್ಮಹತ್ಯೆಯಿಂದಾಗಿ ಪ್ರಕರಣ ಬೆಳಕಿಗೆ ಬಂದಿದೆ. ಬಿಜೆಪಿ ಅವಧಿಯಲ್ಲಿನ ಪ್ರಕರಣಗಳು ಇವೆ. ಸರಕಾರ ಹಾಗೂ ಪಕ್ಷಕ್ಕೆ ಮುಜುಗರ ಆಗಬಾರದು ಅಂತ ಸಚಿವರು ಸ್ವ-ಇಚ್ಛೆಯಿಂದ ರಾಜೀನಾಮೆ ನೀಡಿದ್ದಾರೆ. ನಾನು ಹಾಗೂ ಮುಖ್ಯಮಂತ್ರಿಗಳು ಈ ಬಗ್ಗೆ ಸಚಿವರ ಜತೆ ಚರ್ಚಿಸಿದ್ದು, ಅವರು ಈ ಪ್ರಕರಣದಲ್ಲಿ ಭಾಗಿಯಾಗಿಲ್ಲ. ಯಾವುದೇ ತನಿಖೆ ಬೇಕಾದರೂ ನಡೆಯಲಿ ಎಂದು ತಿಳಿಸಿರುವುದಾಗಿ ಹೇಳಿದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗುತ್ತಾರೆ. ಭವಿಷ್ಯದಲ್ಲಿ ದೇಶದ ಪ್ರಧಾನಿಯಾಗುತ್ತಾರೆ. ರಾಹುಲ್ ಗಾಂಧಿ ವಯನಾಡ್ ಮತ್ತು ರಾಯ್ಬರೇಲಿ ಎರಡರಿಂದಲೂ ಗೆದ್ದಿದ್ದಾರೆ. ಎರಡೂ ಕ್ಷೇತ್ರಗಳ ಜನರೊಂದಿಗೆ ಚರ್ಚಿಸಿ ಯಾವ ಸ್ಥಾನವನ್ನು ಉಳಿಸಿಕೊಳ್ಳಬೇಕು ಎಂಬುದನ್ನು ನಿರ್ಧರಿಸಲಿದ್ದಾರೆಂದು ತಿಳಿಸಿದರು.

ಡಿಸಿಎಂ ಡಿಕೆ.ಶಿವಕುಮಾರ್
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿದೆ: ಗೃಹ ಸಚಿವ ಪರಮೇಶ್ವರ

ಬಿಜೆಪಿ ನಾಯಕರಾದ ಯತ್ನಾಳ್ ಅವರೇ ಸಿಎಂ ಹುದ್ದೆಗೆ 2,500 ಕೋಟಿ ಹಾಗೂ ಮಾಧ್ಯಮಗಳಲ್ಲಿ ಬಂದಿದ್ದ ವರದಿ ಅನುಸಾರ ಸರ್ಕಾರಿ ಹುದ್ದೆಗೆ ಹಿಂದಿನ ಸರ್ಕಾರದ ರೇಟ್ ಕಾರ್ಡ್ ಅನ್ನು ಜಾಹೀರಾತು ರೂಪದಲ್ಲಿ ಕೊಟ್ಟಿದ್ದೆವು. ಈ ವಿಚಾರದಲ್ಲಿ ರಾಹುಲ್ ಗಾಂಧಿ ಅವರಿಗೂ ಈ ಪ್ರಕರಣಕ್ಕೂ ಸಂಬಂಧವೇ ಇಲ್ಲ. ಆದರೂ ಉದ್ದೇಶಪೂರ್ವಕವಾಗಿ ಅವರನ್ನು ಎಳೆದು ತರಲಾಗಿದೆ ಎಂದರು.

ಬಿಜೆಪಿಯವರಲ್ಲಿ ದ್ವೇಷ ಹಾಗೂ ಸೇಡು ತುಂಬಿ ತುಳುಕುತ್ತಿದೆ. ಹೀಗಾಗಿ ಸುಳ್ಳು ಪ್ರಕರಣ ದಾಖಲಿಸಿದ್ದು, ಅದಕ್ಕೆ ಈ ಪ್ರಕರಣವೇ ಉದಾಹರಣೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಅವರು ಆಗಮಿಸಿ ನ್ಯಾಯಾಲಯದ ಮುಂದೆ ಹಾಜರಾಗಿದ್ದಾರೆ. ಡಿ.ಕೆ. ಸುರೇಶ್ ಅವರು ಜಾಮೀನು ನೀಡಿದ್ದಾರೆ. ಕಾರ್ಯಕರ್ತರು ಹಾಗೂ ಅಭಿಮಾನಿಗಳು ಬಂದು ಬೆಂಬಲ ನೀಡಿದ್ದಾರೆ. ಅವರೆಲ್ಲರಿಗೂ ಧನ್ಯವಾದಗಳು. ಆರು ವಿಧಾನ ಪರಿಷತ್ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮೂರು ಕ್ಷೇತ್ರಗಳಲ್ಲಿ ಗೆದ್ದಿದ್ದು, ಅವರಿಗೆ ಪಕ್ಷದ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com