
ಬೆಂಗಳೂರು: ಕರ್ನಾಟಕದ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಅವ್ಯವಹಾರ ಹಗರಣಕ್ಕೆ ಸಂಬಂಧಿಸಿದಂತೆ ಜಾತ್ಯಾತೀತ ಜನತಾದಳ ತೆಲಂಗಾಣ ಸಿಎಂಗೆ ರೇವಂತ್ ರೆಡ್ಡಿ ಅವರಿಗೆ ಪತ್ರವೊಂದನ್ನು ಬರೆದಿದ್ದು, ಕೂಡಲೇ ಹಣ ವಾಪಸ್ ಮಾಡುವಂತೆ ಆಗ್ರಹಿಸಿದೆ.
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಹೈದರಾಬಾದ್ನ ಸಹಕಾರಿ ಬ್ಯಾಂಕ್ ಒಂದಕ್ಕೆ ಅಕ್ರಮವಾಗಿ ವರ್ಗಾವಣೆಯಾಗಿದೆ ಎಂದು ಹೇಳಲಾಗಿದ್ದು, ಈ ಹಿನ್ನೆಲೆಯಲ್ಲಿ ಜೆಡಿಎಸ್ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರಿಗೆ ಪತ್ರ ಬರೆದಿದೆ.
ವಾಲ್ಮೀಕಿ ಸಮುದಾಯದ ಹಣವನ್ನು ಹಿಂತಿರುಗಿಸುವಂತೆ ಮನವಿ ಮಾಡಿದೆ. ನಮ್ಮ ರಾಜ್ಯದ ಹಣವನ್ನು ಹಿಂತಿರುಗಿಸಿ ಕೊಡಿ ಜೆಡಿಎಸ್ ರೇವಂತ್ ರೆಡ್ಡಿ ಅವರಿಗೆ ಮನವಿ ಮಾಡಿ ಪತ್ರ ಬರೆದಿದೆ.
SIT ತನಿಖೆ
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮವಾಗಿ ಹೈದರಾಬಾದ್ನ ಫಸ್ಟ್ ಫೈನಾನ್ಸ್ ಸಹಕಾರಿ ಬ್ಯಾಕ್ಗೆ ವರ್ಗಾವಣೆಯಾಗಿದೆ ಎಂಬುವುದು ವಿಶೇಷ ತನಿಖಾ ದಳ (SIT) ಅಧಿಕಾರಿಗಳ ತನಿಖೆಯಲ್ಲಿ ತಿಳಿದುಬಂದಿದೆ. ಈ ಸಂಬಂಧ ಎಸ್ಐಟಿ ಅಧಿಕಾರಿಗಳು ಈಗಾಗಲೆ ಹೈದರಾಬಾದ್ಗೆ ತೆರಳಿದ್ದು, ಸಹಕಾರಿ ಬ್ಯಾಂಕ್ನಲ್ಲಿ ನಿಗಮದ 45 ಕೋಟಿ ರೂ. ಹಣ ಜಪ್ತಿ ಮಾಡಿದ್ದು, ಈ ಹಿನ್ನೆಲೆಯಲ್ಲಿ ಜೆಡಿಎಸ್ ತೆಲಂಗಾಣ ಮುಖ್ಯಮಂತ್ರಿ ರೇವಂತ ರೆಡ್ಡಿಯವರಿಗೆ ಪತ್ರ ಬರೆದಿದೆ.
ಪತ್ರದಲ್ಲೇನಿದೆ?
ಜೆಡಿಎಸ್ ಬರೆದಿರುವ ಪತ್ರದಲ್ಲಿ, “ಗುಂಡಿಗೆ ಹೋದ ಹೆಣ, ರಾಜ್ಯ ಕಾಂಗ್ರೆಸ್ ನುಂಗಿದ ಹಣ ಎಂದಿಗೂ ವಾಪಸ್ ಬರುವುದಿಲ್ಲ ಎಂಬುದು ತಿಳಿದಿದ್ದರೂ ಕೊನೆ ಪ್ರಯತ್ನವಾಗಿ ತೆಲಂಗಾಣದ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರಿಗೆ ಕನ್ನಡಿಗರ ಪತ್ರ” ಎಂದು ಉಲ್ಲೇಖಿಸಿ ಪತ್ರ ಬರೆದಿದೆ.
“ಕರ್ನಾಟಕದ ವಾಲ್ಮೀಕಿ ಸಮುದಾಯಕ್ಕೆ ಸೇರಬೇಕಾಗಿದ್ದ ಸುಮಾರು 187 ಕೋಟಿ ರೂ. ಹಣವನ್ನು ನಿಮ್ಮ ನಾಯಕ ರಾಹುಲ್ ಗಾಂಧಿ ಅವರ ಅಣತಿಯಂತೆ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರ, ಸಚಿವ ನಾಗೇಂದ್ರ ಅವರ ಮೂಲಕ ತೆಲಂಗಾಣದ ಕಾಂಗ್ರೆಸ್ ಚುನಾವಣಾ ಖರ್ಚಿಗೆ ಸಾಗಿಸಿದ್ದಾರೆ.
ನಿಮ್ಮಲ್ಲಿ ಕನ್ನಡಿಗರು ಕೇಳಿಕೊಳ್ಳುವುದೇನೆಂದರೆ ನಮ್ಮ ರಾಜ್ಯಕ್ಕೆ ಸೇರಬೇಕಾಗಿದ್ದ ಹಣವನ್ನು ದಯಮಾಡಿ ಹಿಂತಿರುಗಿಸಿ ಕೊಡಿ. ಈ ಹಣ ವಾಲ್ಮೀಕಿ ಸಮುದಾಯದ ಏಳಿಗೆಗಾಗಿ ಬಳಕೆ ಆಗಬೇಕಿತ್ತು ಈ ನೀಚ ಸರ್ಕಾರ ಉಂಡು ಹೋದ ಕೊಂಡು ಹೋದ ಎಂಬಂತೆ ತಮ್ಮ ಸ್ವಾರ್ಥಕ್ಕಾಗಿ ಇಲ್ಲಿ ಲೂಟಿ ಹೊಡೆದದ್ದಲ್ಲದೆ, ಮಿಕ್ಕ ಹಣವನ್ನೂ ಬೇರೆ ಬೇರೆ ರಾಜ್ಯಗಳ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಖರ್ಚಿಗೆ ಸಾಗಿಸಿದ್ದಾರೆ.”
“ಗುಂಡಿಗೆ ಹೋದ ಹೆಣ, ಕಾಂಗ್ರೆಸ್ ನುಂಗಿದ ಹಣ ಎಂದಿಗೂ ವಾಪಸ್ ಬರುವುದಿಲ್ಲ ಎಂಬುದು ನಮಗೆ ತಿಳಿದಿದೆ ಆದ್ರೆ ಕೊನೆ ಪ್ರಯತ್ನವಾಗಿ ನಿಮ್ಮಲ್ಲಿ ಈ ಮನವಿ ಮಾಡುತ್ತಿದ್ದೇವೆ, ಹಣ ಹಿಂತಿರುಗಿಸಿ ವಿಶ್ವಾಸ ಉಳಿಸಿಕೊಳ್ಳಿ.” ಎಂದು ಪತ್ರ ಬರೆದಿದೆ.
Advertisement