ಡಿ.ಕೆ ಶಿವಕುಮಾರ್
ಡಿ.ಕೆ ಶಿವಕುಮಾರ್

ಯಾರು ಏನೇ ಟೀಕೆ ಮಾಡಲಿ, ನಾನಂತೂ ಚನ್ನಪಟ್ಟಣದ ಜನರ ಋಣ ತೀರಿಸುತ್ತೇನೆ: DK ಶಿವಕುಮಾರ್

ಈ ಹಿಂದೆ ನಾನು ಈ ಭಾಗದ ಶಾಸಕನಾಗಿದ್ದಾಗಲೂ ಅಧಿಕಾರಿಗಳನ್ನು ಹಳ್ಳಿಗಳಿಗೆ ಕರೆದುಕೊಂಡು ಹೋಗಿ ಜನರ ಸಮಸ್ಯೆಗಳನ್ನು ಆಲಿಸಿ ಪರಿಹಾರ ನೀಡುವ ಕೆಲಸ ಮಾಡುತ್ತಿದ್ದೆ. ಈಗಲೂ ಅದೇ ಕೆಲಸ ಮುಂದುವರಿಸುತ್ತಿದ್ದೇನೆ ಎಂದರು
Published on

ಚನ್ನಪಟ್ಟಣ: ಯಾರು ಏನೇ ಟೀಕೆ ಮಾಡಲಿ. ನಾನು ಚನ್ನಪಟ್ಟಣ ಕ್ಷೇತ್ರದ ಜನರ ಋಣ ತೀರಿಸುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಕೋಡಂಬಳ್ಳಿ ಹಾಗೂ ಅಕ್ಕೂರು ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯಲ್ಲಿ ಸರ್ಕಾರದ ವತಿಯಿಂದ ನಡೆದ "ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ" ಕಾರ್ಯಕ್ರಮದಲ್ಲಿ ಸೋಮವಾರ ಜನರ ಅಹವಾಲು ಸ್ವೀಕರಿಸಿ ಮಾತನಾಡಿದ ಅವರು, ಸಾವಿರಾರು ಜನ ತಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಅರ್ಜಿ ಸಲ್ಲಿಸಲು ಮುಗಿ ಬೀಳುತ್ತಿರುವುದನ್ನು ನೋಡಿದರೆ, ಅವರ ಪರಿಸ್ಥಿತಿ ಅರ್ಥವಾಗುತ್ತದೆ. ನನ್ನ ಬಗ್ಗೆ ಯಾರು ಏನೇ ಟೀಕೆ ಮಾಡಲಿ, ನನಗೆ ಈ ಜನರ ಸಮಸ್ಯೆಗೆ ಪರಿಹಾರ ನೀಡುವುದಷ್ಟೇ ಮುಖ್ಯ. ಈ ಹಿಂದೆ ನಾನು ಈ ಭಾಗದ ಶಾಸಕನಾಗಿದ್ದಾಗಲೂ ಅಧಿಕಾರಿಗಳನ್ನು ಹಳ್ಳಿಗಳಿಗೆ ಕರೆದುಕೊಂಡು ಹೋಗಿ ಜನರ ಸಮಸ್ಯೆಗಳನ್ನು ಆಲಿಸಿ ಪರಿಹಾರ ನೀಡುವ ಕೆಲಸ ಮಾಡುತ್ತಿದ್ದೆ. ಈಗಲೂ ಅದೇ ಕೆಲಸ ಮುಂದುವರಿಸುತ್ತಿದ್ದೇನೆ ಎಂದರು.

ಈ ಹಿಂದೆ ಇದ್ದ ಜನಪ್ರತಿನಿಧಿಗಳು ಈ ಕೆಲಸ ಮಾಡಬಹುದಾಗಿತ್ತು. ಆದರೆ ಮಾಡಲಿಲ್ಲ. ಯಾಕೆ ಮಾಡಲಿಲ್ಲ ಎಂದು ನಾನು ಪ್ರಶ್ನೆ ಮಾಡುವುದಿಲ್ಲ. ಕೆಲ ದಿನಗಳ ಹಿಂದೆ ತಾಲ್ಲೂಕಿನ ಅಧಿಕಾರಿಗಳ ಸಭೆ ಮಾಡಿದೆ. ಆಗ ನನ್ನ ಗಮನಕ್ಕೆ ಒಂದಷ್ಟು ವಿಚಾರಗಳು ಬಂದವು. ಕಳೆದ ಐದು ವರ್ಷಗಳಲ್ಲಿ ತಾಲ್ಲೂಕಿನ ಬಡವರಿಗೆ ಒಂದೇ ಒಂದು ನಿವೇಶನ ಹಂಚಿಕೆ ಮಾಡಿಲ್ಲ. ಯಾರೊಬ್ಬರಿಗೂ ಬಗರ್ ಹುಕುಂ ಸಾಗುವಳಿ ಜಮೀನು ನೀಡಿಲ್ಲ. ಆಶ್ರಯ ಸಮಿತಿ ಸಭೆ ಕೂಡ ಮಾಡಿಲ್ಲ ಎಂಬ ವಿಚಾರ ತಿಳಿಯಿತು. ಈ ಹಿಂದೆ ಇದ್ದವರು ಯಾಕೆ ಮಾಡಲಿಲ್ಲ ಎಂದು ಈಗ ನಾನು ಪ್ರಶ್ನೆ ಮಾಡುವುದಿಲ್ಲ. ಬಡವರ ಬದುಕಲ್ಲಿ ಬದಲಾವಣೆ ತರಲಿಲ್ಲ ಎಂದರೆ ನಾವು ಜನಪ್ರತಿನಿಧಿಯಾಗಿ ಯಾಕೆ ಇರಬೇಕು? ಇಂತಹ ಕಾರ್ಯಕ್ರಮ ಮಾಡಿ ಜನರ ಕಷ್ಟ ಆಲಿಸಬೇಡಿ ಎಂದು ಅವರಿಗೆ ನಾವೇನಾದರೂ ಹೇಳಿದ್ದೆವಾ? ನೀವೇನಾದರೂ ಹೇಳಿದ್ದೀರಾ? ಎಂದು ಪ್ರಶ್ನಿಸಿದರು.

ಆಯಾ ಊರುಗಳಲ್ಲಿ ಸರ್ಕಾರ 2-3 ಎಕರೆ ಜಮೀನು ಖರೀದಿಸಿ ಲೇಔಟ್ ಮಾಡಿ ಬಡವರಿಗೆ ನಿವೇಶನ ಹಂಚಿಕೆ ಮಾಡಲಾಗುವುದು ಎಂದು ಬಿಸಿಲಮ್ಮ ದೇವಾಲಯದ ಆವರಣದಲ್ಲಿ ನಿಂತು ಹೇಳುತ್ತಿದ್ದೇನೆ. ಚನ್ನಪಟ್ಟಣದ ಬಡವರಿಗೆ ನಿವೇಶನ ನೀಡಲು 50 ಕೋಟಿ ಹಣ ತಂದು 50-100 ಎಕರೆ ಜಾಗದಲ್ಲಿ ಲೇಔಟ್ ಮಾಡುತ್ತೇವೆ. ಬಡವರಿಗೆ ಮನೆ ಕಟ್ಟಿಕೊಡಲಾಗುವುದು. ಮುಂದೆ ಇಲ್ಲಿ ನಮ್ಮ ಶಾಸಕರು ಆಯ್ಕೆಯಾಗುತ್ತಾರೆ ಕನಿಷ್ಠ 10 ಸಾವಿರ ಜನರಿಗೆ ನಿವೇಶನ ಹಂಚಿಕೆ ಮಾಡುತ್ತೇವೆ ಎಂದು ಭರವಸೆ ನೀಡಿದರು.

ಡಿ.ಕೆ ಶಿವಕುಮಾರ್
HDK ರಾಜಿನಾಮೆಯಿಂದ ತೆರವಾಗಿರುವ ಚನ್ನಪಟ್ಟಣದಿಂದ ನಾನು ಸ್ಪರ್ಧಿಸಲ್ಲ: ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ

ಈ ತಾಲ್ಲೂಕಿನ 94% ಅಂದರೆ ಸುಮಾರು 64 ಸಾವಿರ ಬಡ ಕುಟುಂಬದ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆ ತಲುಪಿದೆ. ಇನ್ನು ಶೇ.7-8 ರಷ್ಟು ಫಲಾನುಭವಿಗಳಿಗೆ ತಲುಪಬೇಕಿದೆ. ಅದಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಈ ಪಂಚಾಯ್ತಿಯ 12 ಸಾವಿರ ಕುಟುಂಬಗಳಿಗೆ ಅರ್ಜಿಯನ್ನು ತಲುಪಿಸಿದ್ದೇವೆ. ನಾನು ಚನ್ನಪಟ್ಟಣ ಬಿಟ್ಟು ಓಡಿ ಹೋಗುವವನಲ್ಲ. ಪೋಡಿ, ಜಮೀನು ಖಾತೆ, ಬಗರ್ ಹುಕುಂ ಸಾಗುವಳಿ ಜಮೀನು, ನಿವೇಶನ, ವಸತಿ ರಹಿತರ ಸಮಸ್ಯೆ, ಸಂಧ್ಯಾ ಸುರಕ್ಷಾ ಸೇರಿದಂತೆ ವಿವಿಧ ಪಿಂಚಣಿ ಸಮಸ್ಯೆ, ರಸ್ತೆ ದುರಸ್ತಿ, ಬಸ್ ವ್ಯವಸ್ಥೆ, ದೇವಾಲಯ ಜೀರ್ಣೋದ್ಧಾರ, ಕುಡಿಯುವ ನೀರಿನ ಸಮಸ್ಯೆ, ಸರ್ಕಾರಿ ಯೋಜನೆಗಳ ಸಮಸ್ಯೆ, ಪೊಲೀಸರಿಂದ ತೊಂದರೆ ಸೇರಿದಂತೆ ಯಾವುದೇ ಸಮಸ್ಯೆ ಇದ್ದರೂ ನಮಗೆ ಅರ್ಜಿ ಸಲ್ಲಿಸಿ. ನಿಮ್ಮ ಅರ್ಜಿಯನ್ನು ಸರ್ಕಾರಿ ಅಧಿಕಾರಿಗಳು ಪರಿಶೀಲಿಸಿ ಸಮಸ್ಯೆ ಬಗೆಹರಿಸಲಿದ್ದಾರೆ ಎಂದರು.

ಬೇರೆ ಪಕ್ಷಕ್ಕೆ ಮತಹಾಕಿದ್ದೇನೆ, ಬೇರೆ ಪಕ್ಷದ ಜತೆ ಗುರುತಿಸಿಕೊಂಡಿದ್ದೇನೆ. ಶಿವಕುಮಾರ್ ಬಳಿ ಹೋಗಿ ಹೇಗೆ ಅರ್ಜಿ ನೀಡಲಿ ಎಂಬ ಮುಜುಗರ, ಹಿಂಜರಿಕೆ ಬೇಡ. ನಾವು ಎಲ್ಲರ ಸಮಸ್ಯೆಗಳನ್ನೂ ಆಲಿಸಿ ಸ್ಪಂದಿಸುತ್ತೇವೆ. ತಾಲ್ಲೂಕಿನ ಗ್ರಾಮೀಣ ಭಾಗದ ಜನರು ವಿದ್ಯಾಭ್ಯಾಕ್ಕಾಗಿ, ಉದ್ಯೋಗಕ್ಕಾಗಿ ಬೆಂಗಳೂರಿಗೆ ಹೋಗುತ್ತಿದ್ದಾರೆ. ಹೀಗಾಗಿ ಮಾಜಿ ಸಂಸದ ಸುರೇಶ್ ಅವರು ಸಿ ಎಸ್ ಆರ್ ನಿಧಿಯಲ್ಲಿ ರಾಮನಗರದ 20 ಕಡೆಗಳಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಸಧ್ಯದಲ್ಲೇ ಈ ಶಾಲೆಗಳ ನಿರ್ಮಾಣ ಆರಂಭವಾಗಲಿದೆ ಎಂದು ಹೇಳಿದರು. ಕೆಲವರು ಮಾತಲ್ಲೇ ಮನೆ ಕಟ್ಟುವ ಪ್ರಯತ್ನ ಮಾಡುತ್ತಾರೆ. ನಾನು ಶ್ರಮದಿಂದ ಭದ್ರ ಅಡಿಪಾಯ ಹಾಕಿ ಮನೆ ಕಟ್ಟುವವನು. ನಾವು ಭಾವನೆ ಮೇಲೆ ರಾಜಕೀಯ ಮಾಡಲ್ಲ. ಬದುಕಿನ ಮೇಲೆ ರಾಜಕಾರಣ ಮಾಡಿ ನಿಮ್ಮ ಬದುಕು ಹಾಸನ ಮಾಡುವ ಪ್ರಯತ್ನ ಮಾಡುತ್ತೇವೆ. ವಿಧಾನಸಭೆ ಚುನಾವಣೆಗೂ ಮುನ್ನ ಕೊಟ್ಟ ಮಾತಿನಂತೆ ಉಚಿತ ಬಸ್ ಪ್ರಯಾಣ, ತಿಂಗಳಿಗೆ 2 ಸಾವಿರ, ಉಚಿತ ವಿದ್ಯುತ್, ಐದು ಕೆ.ಜಿ ಅಕ್ಕಿ, ಐದು ಕೆ.ಜಿ ಅಕ್ಕಿ ಹಣ ನೀಡಲಾಗುತ್ತಿದೆ. ಯಾರಿಗೆ ಈ ಸೌಲಭ್ಯ ಸಿಗುತ್ತಿಲ್ಲ ಅವರು ಅರ್ಜಿ ಹಾಕಿ ಎಂದು ತಿಳಿಸಿದರು.

X

Advertisement

X
Kannada Prabha
www.kannadaprabha.com