ಕೊನೆಗೂ ಸತ್ಯ ಕಕ್ಕಿದ್ದೀರಿ! ಸುಳ್ಳುರಾಮಯ್ಯ: ಸಿಎಂ ವಿರುದ್ಧ ಕುಮಾರಸ್ವಾಮಿ ಕಿಡಿ

ಸುಮಲತಾ ಬಿಜೆಪಿಯಿಂದ ಗೆದ್ದಿದ್ದಲ್ಲ.. ಕಾಂಗ್ರೆಸ್‌ ವೋಟುಗಳಿಂದಲೇ ಗೆದ್ದಿದ್ದು ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ಡಿ. ಕುಮಾರಸ್ವಾಮಿ ತೀವ್ರವಾಗಿ ಕಿಡಿಕಾರಿದ್ದಾರೆ.
ಹೆಚ್. ಡಿ ಕುಮಾರಸ್ವಾಮಿ, ಸಿಎಂ ಸಿದ್ದರಾಮಯ್ಯ ಸಾಂದರ್ಭಿಕ ಚಿತ್ರ
ಹೆಚ್. ಡಿ ಕುಮಾರಸ್ವಾಮಿ, ಸಿಎಂ ಸಿದ್ದರಾಮಯ್ಯ ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಸುಮಲತಾ ಬಿಜೆಪಿಯಿಂದ ಗೆದ್ದಿದ್ದಲ್ಲ.. ಕಾಂಗ್ರೆಸ್‌ ವೋಟುಗಳಿಂದಲೇ ಗೆದ್ದಿದ್ದು ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ಡಿ. ಕುಮಾರಸ್ವಾಮಿ ತೀವ್ರವಾಗಿ ಕಿಡಿಕಾರಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸರಣಿ ಫೋಸ್ಟ್ ಮಾಡಿರುವ ಕುಮಾರಸ್ವಾಮಿ, ಮಂಡ್ಯ ಜಿಲ್ಲೆಯ ಗ್ಯಾರಂಟಿಗಳ 2ನೇ ಸಮಾವೇಶದಲ್ಲಿ ಅಲವತ್ತುಕೊಂಡ ಸಿಎಂ ಸಿದ್ದರಾಮಯ್ಯ ನವರೇ.. ಕೊನೆಗೂ ಸತ್ಯ ನುಡಿದಿದ್ದೀರಿ! ಸುಳ್ಳುರಾಮಯ್ಯ ಬಿರುದಾಂಕಿತರಾದ ನೀವು, ಕೊನೆಗೂ ಸತ್ಯ ಕಕ್ಕಿದ್ದೀರಿ! ಸುಳ್ಳುರಾಮಯ್ಯನೆಂಬ ಕುಖ್ಯಾತಿಯಿಂದ ಹೊರಬರಲು ಪ್ರಾಮಾಣಿಕ ಪ್ರಯತ್ನ ನಡೆಸಿದ್ದೀರಿ. ಅಭಿನಂದನೆಗಳು ಎಂದಿದ್ದಾರೆ.

ಸತ್ಯ ಗಂಟಲಲ್ಲಿ ಸಿಕ್ಕಿಕೊಂಡ ಬಿಸಿತುಪ್ಪದಂತೆ.. ಕಕ್ಕಲೇಬೇಕು. 2019ರ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಿಂದ ಆಯ್ಕೆಯಾದ ಪಕ್ಷೇತರ ಅಭ್ಯರ್ಥಿ ಗೆಲುವಿಗೆ ಕಾಂಗ್ರೆಸ್ಸೇ ಕಾರಣ ಎಂದು ಸ್ವತಃ ನೀವೇ ಒಪ್ಪಿಕೊಂಡಿದ್ದೀರಿ.ನಿಮ್ಮ ಗೋಮುಖವ್ಯಾಘ್ರತನ ಅರಿಯಲು ಇಷ್ಟು ಸಾಕು. ಅಂದು ಕಾಂಗ್ರೆಸ್ ಮೈತ್ರಿ ಪಕ್ಷ, ನಿಖಿಲ್‌ ಕುಮಾರಸ್ವಾಮಿ ಮೈತ್ರಿ ಅಭ್ಯರ್ಥಿ. ಅವರ ಜತೆಯಲ್ಲೇ ಪ್ರಚಾರದ ಸೋಗಿನಾಟವಾಡಿ, ಮಾಧ್ಯಮಗಳ ಮುಂದೆ ಗೆಲ್ಲಿಸುತ್ತೇವೆಂದು ಪೋಸು ಕೊಡುತ್ತಲೇ ನಿಖಿಲ್ ಸುತ್ತ ಶಕುನಿವ್ಯೂಹವನ್ನೇ ರಚಿಸಿದ ಕಲಿಯುಗ ಶಕುನಿ ನೀವಲ್ಲದೆ ಮತ್ತ್ಯಾರು ಸಿದ್ದರಾಮಯ್ಯನವರೇ ಎಂದು ಪ್ರಶ್ನಿಸಿದ್ದಾರೆ.

ಕಳ್ಳಬೆಕ್ಕು ಕದ್ದು ಹಾಲು ಕುಡಿದರೆ ಗೊತ್ತಾಗದೇ? ಬೂದಿ ಮುಚ್ಚಿದ ಕೆಂಡ ತಣ್ಣಗಿರಲು ಸಾಧ್ಯವೇ? ಕುದಿಯುವ ಕುಲುಮೆಯಂತಿರುವ ನಿಮ್ಮ ಉದರಹುರಿಗೆ ತಂಪೆನ್ನುವುದುಂಟೆ? 5 ವರ್ಷಗಳ ನಂತರವಾದರೂ ಸತ್ಯ ಕಕ್ಕಿದ್ದೀರಿ ಹಾಗೂ ನಂಬಿದವನ ಮನೆ ನಾಶವಾಗಲಿ ಎನ್ನುವ ನಿಮ್ಮಹೇಯತನ ಬಯಲಾಗಿದೆ. ಸತ್ಯಮೇಯ ಜಯತೆ. ಇದಿಷ್ಟೇ ನನ್ನ ಕಳಕಳಿ ಮತ್ತು ನಂಬಿಕೆ.ಸಕ್ಕರೆ ಕಾರ್ಖಾನೆ ಬಗ್ಗೆ ಹೇಳಿದ್ದೀರಿ. ಬಜೆಟ್‌ʼನಲ್ಲಿ ‌ಘೋಷಣೆ ಮಾಡಿದ್ದೀರಿ, ಸರಿ.. ದುಡ್ಡು ಎಲ್ಲಿಟ್ಟಿದ್ದೀರಿ. ನಾನು 2019ರ ಬಜೆಟ್‌ ನಲ್ಲಿಯೇ ಈ ಕಾರ್ಖಾನೆಗೆ 100 ಕೋಟಿ ತೆಗೆದಿರಿಸಿದ್ದೆ. ಎಲ್ಲಿ ಹೋಯಿತು ಆ ದುಡ್ಡು? ಇದರ ಬಗ್ಗೆ ಗ್ಯಾರಂಟಿ ಸಮಾವೇಶದಲ್ಲಿ ಚಕಾರ ಎತ್ತಿಲಿಲ್ಲವೇಕೆ ಸಿದ್ದರಾಮಯ್ಯನವರೇ? ಇಂಥ ಆತ್ಮವಂಚನೆ ಏತಕ್ಕೆ? ಎಂದು ಟೀಕಿಸಿದ್ದಾರೆ.

ತನ್ನ ತಲೆಗೇ ಹರಳೆಣ್ಣೆ ಇಲ್ಲ, ಪಕ್ಕದವನಿಗೆ ಸಂಪಂಗೆಣ್ಣೆ ಕೊಟ್ಟನಂತೆ ನಿಮ್ಮಂಥವನೊಬ್ಬ! ನಿಮ್ಮ ವೈಖರಿ ಹಾಗಿದೆ. ಕನ್ನಡಿಗರು ಬರದ ಬೆಂಕಿಯಲ್ಲಿ ಬೇಯುತ್ತಿದ್ದರೆ ನಿಮ್ಮ ಸರಕಾರ ಕದ್ದೂಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿದೆ! ಒಂದು ಕೈಲಿ ಅಗ್ಗದ ಗ್ಯಾರಂಟಿ ಕೊಟ್ಟು ಹತ್ತು ಕೈಗಳಲ್ಲಿ ಬದುಕಿನ ಗ್ಯಾರಂಟಿ ಕಿತ್ತುಕೊಳ್ಳುತ್ತಿದ್ದೀರಿ ಎಂದು ವಾಗ್ದಾಳಿ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com