ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಇನ್ನು ಮಂಡ್ಯದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸಂಸದೆ ಸುಮಲತಾ ಅವರಿಗೆ ಬಿಜೆಪಿ-ಜೆಡಿಎಸ್ ಮೈತ್ರಿ ಅಡ್ಡಿಯುಂಟು ಮಾಡಿದೆ.
ಇನ್ನು ಮಂಡ್ಯ ಲೋಕಸಭಾ ಕ್ಷೇತ್ರವನ್ನು ಮೈತ್ರಿ ಪಕ್ಷ ಜೆಡಿಎಸ್ಗೆ ಬಿಟ್ಟುಕೊಡಲು ಬಿಜೆಪಿ ಹೈಕಮಾಂಡ್ ಒಪ್ಪಿಗೆ ಸೂಚಿಸಿದೆ ಎನ್ನಲಾಗುತ್ತಿದೆ. ಈ ನಡುವೆ ಬಿಜೆಪಿ ಬೆಂಬಲಿತ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಬಿಜೆಪಿ ಹೈಕಮಾಂಡ್ ದೆಹಲಿಗೆ ಬರುವಂತೆ ಬುಲಾವ್ ನೀಡಿದ್ದು ರಾಜಧಾನಿಗೆ ತೆರಳಿದ್ದಾರೆ. ಸದ್ಯ ಬಿಜೆಪಿ ವರಿಷ್ಠರ ಕರೆ ರಾಜ್ಯ ರಾಜಕಾರಣದಲ್ಲಿ ಭಾರೀ ಕುತೂಹಲ ಮೂಡಿಸಿದೆ.
2019ರಲ್ಲಿ ಮಂಡ್ಯ ಲೋಕಸಭೆ ಪಕ್ಷೇತರವಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಸುಮಲತಾ ಅವರು ನಂತರ ಬಿಜೆಪಿಯನ್ನು ಬೆಂಬಲಿಸಿದ್ದರು. ಅದರಂತೆ ಈ ಬಾರಿ ಮಂಡ್ಯದ ಬಿಜೆಪಿ ಟಿಕೆಟ್ಗಾಗಿ ಪೈಪೋಟಿ ನಡೆಸುತ್ತಿದ್ದಾರೆ. ಅಲ್ಲದೆ ತನಗೆ ಟಿಕೆಟ್ ಸಿಗುವ ವಿಶ್ವಾಸವಿದೆ ಎಂದು ಹಲವು ಬಾರಿ ವ್ಯಕ್ತಪಡಿಸಿದ್ದರು. ಆದರೆ ಮೈತ್ರಿ ಧರ್ಮಪಾಲನೆಗಾಗಿ ಬಿಜೆಪಿ ಮಂಡ್ಯ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಡಲು ಒಪ್ಪಿಗೆ ಸೂಚಿಸಿದೆ ಎಂದು ಹೇಳಲಾಗುತ್ತಿದೆ.
ಹೀಗಾಗಿ ಬಿಜೆಪಿ ಹೈಕಮಾಂಡ್ ಕರೆ ಮಾಡಿದ ಹಿನ್ನೆಲೆ ಸುಮಲತಾ ಅಂಬರೀಶ್ ಅವರು ದೆಹಲಿಗೆ ತೆರಳಿದ್ದಾರೆ. ಕೇಂದ್ರ ಗೃಹ ಸಚಿವ ಸಚಿವ ಅಮಿತ್ ಶಾ ಹಾಗೂ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವ ಸಾಧ್ಯತೆ ಇದೆ. ಸುಮಲತಾ ಅವರಿಗೆ ಮಂಡ್ಯ ಟಿಕೆಟ್ ಸಿಗುತ್ತಾ? ಇಲ್ಲವಾ? ಅಥವಾ ಮಂಡ್ಯ ಬಿಟ್ಟು ಚಿಕ್ಕಬಳ್ಳಾಪುರಕ್ಕೆ ತರುತ್ತಾರಾ ಎಂಬ ಪ್ರಶ್ನೆಗಳು ಮೂಡಿಸಿವೆ.
Advertisement