ಮೋದಿ ಪರ ಧ್ವನಿ ಎತ್ತುತ್ತೇನೆ, ಆದರೆ ನಾಳೆ ಮೋದಿ ಕಾರ್ಯಕ್ರಮಕ್ಕೆ ಹೋಗಲ್ಲ; ನನ್ನ ಸ್ಪರ್ಧೆ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ: ಕೆ ಎಸ್ ಈಶ್ವರಪ್ಪ

ಲೋಕಸಭೆ ಚುನಾವಣೆ ಹೊತ್ತಿನಲ್ಲಿ ರಾಜ್ಯ ಬಿಜೆಪಿಯಲ್ಲಿ ಬಂಡಾಯದ ಬಿಸಿ ಜೋರಾಗಿಯೇ ಇದೆ, ಹಾವೇರಿಯಲ್ಲಿ ತಮ್ಮ ಪುತ್ರ ಕಾಂತೇಶ್ ಗೆ ಟಿಕೆಟ್ ಸಿಗಬಹುದೆಂದು ನಿರೀಕ್ಷೆ ಇಟ್ಟುಕೊಂಡಿದ್ದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಬಂಡಾಯ ಅಭ್ಯರ್ಥಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಮುಂದಾಗಿದ್ದಾರೆ.
ಕೆ ಎಸ್ ಈಶ್ವರಪ್ಪ
ಕೆ ಎಸ್ ಈಶ್ವರಪ್ಪ
Updated on

ಶಿವಮೊಗ್ಗ: ಲೋಕಸಭೆ ಚುನಾವಣೆ ಹೊತ್ತಿನಲ್ಲಿ ರಾಜ್ಯ ಬಿಜೆಪಿಯಲ್ಲಿ ಬಂಡಾಯದ ಬಿಸಿ ಜೋರಾಗಿಯೇ ಇದೆ, ಹಾವೇರಿಯಲ್ಲಿ ತಮ್ಮ ಪುತ್ರ ಕಾಂತೇಶ್ ಗೆ ಟಿಕೆಟ್ ಸಿಗಬಹುದೆಂದು ನಿರೀಕ್ಷೆ ಇಟ್ಟುಕೊಂಡಿದ್ದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಬಂಡಾಯ ಅಭ್ಯರ್ಥಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಮುಂದಾಗಿದ್ದಾರೆ.

ಯಾರು ಏನೇ ಹೇಳಿದರೂ ತಮ್ಮ ನಿರ್ಧಾರ ಅಚಲ ಎಂದು ಈಶ್ವರಪ್ಪನವರು ಹೇಳುತ್ತಿದ್ದಾರೆ. ನಾಳೆ ಜಿಲ್ಲೆಗೆ ಪ್ರಧಾನಿ ನರೇಂದ್ರ ಮೋದಿ ಆಗಮನ ಹೊತ್ತಿನಲ್ಲಿ ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರ ವಿರುದ್ಧ ಬಂಡಾಯ ಘೋಷಣೆ ಮಾಡಿರುವ ಕೆಎಸ್ ಈಶ್ವರಪ್ಪ ಅವರ ನಿವಾಸದಲ್ಲಿ ನಡೆದ ಬಿಜೆಪಿ ಸಂಧಾನ ವಿಫಲಗೊಂಡಿದೆ. ಬಿಜೆಪಿ ನಾಯಕರು ತಮ್ಮ ನಿವಾಸದಿಂದ ವಾಪಸ್ ಹೋದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಈಶ್ವರಪ್ಪ, ನಾನು ಮೋದಿ ಪರ ಧ್ವನಿ ಎತ್ತುತ್ತೇನೆ. ಆದರೆ ಮೋದಿ ಕಾರ್ಯಕ್ರಮಕ್ಕೆ ನಾನು ಹೋಗುವುದಿಲ್ಲ ಎಂದು ತಿಳಿಸಿದ್ದಾರೆ.

ನಾಳೆ ಶಿವಮೊಗ್ಗದಲ್ಲಿ ಪ್ರಧಾನಿ ಮೋದಿಯವರ ಚುನಾವಣಾ ರ್ಯಾಲಿಯಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದು ಆರಗ ಜ್ಞಾನೇಂದ್ರ ಹಾಗೂ ಕೆಲವರು ನಿವಾಸಕ್ಕೆ ಬಂದಿದ್ದರು. ಆದರೆ ಯಾವುದೇ ಕಾರಣಕ್ಕೂ ಪಕ್ಷೇತರವಾಗಿ ಸ್ಪರ್ಧಿಸುವ ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆ ಇಲ್ಲ ಎಂದು ಹೇಳಿ ಯಡಿಯೂರಪ್ಪ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದರು.

ನನ್ನ ಮಗನಿಗೆ ಟಿಕೆಟ್​ ಕೊಟ್ಟಿಲ್ಲ ಎಂದು ಸ್ಪರ್ಧಿಸುತ್ತಿಲ್ಲ. ಪಕ್ಷದಲ್ಲಿ ಅನೇಕ ಹಿಂದುತ್ವವಾದಿಗಳಿಗೆ ಮೋಸವಾಗಿದೆ. ಯಡಿಯೂರಪ್ಪ ಕುಟುಂಬದ ಹಿಡಿತದಲ್ಲಿ ಬಿಜೆಪಿ ಸಿಲುಕಿದೆ. ರಾಜ್ಯಾಧ್ಯಕ್ಷರು ಲಿಂಗಾಯತರೇ ಬೇಕು ಅಂದಿದ್ದರೆ ಯತ್ನಾಳ್​ ಅವರನ್ನು ಮಾಡಬೇಕಿತ್ತು. ಯತ್ನಾಳ್ ಅವ​​ರನ್ನ ಯಾಕೆ ಮಾಡಲಿಲ್ಲ? ಲಿಂಗಾಯತರು ಬೆಳೆಯುವುದು ಇವರಿಗೆ ಇಷ್ಟವಿಲ್ಲ ಓಕೆ. ಒಕ್ಕಲಿಗ ನಾಯಕರನ್ನಾದರೂ ಮಾಡಬಹುದಿತ್ತು. ಯಾಕೆ ಮಾಡಿಲ್ಲ ಎಂದು ಯಡಿಯೂರಪ್ಪ ಅವರನ್ನು ಪ್ರಶ್ನಿಸಿದ್ದಾರೆ.

ಶೋಭಾ ಕರಂದ್ಲಾಜೆ ವಿರುದ್ಧ ಗೋಬ್ಯಾಕ್​ ಅಭಿಯಾನ ನಡೆದರೂ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಸಿ.ಟಿ.ರವಿಗೆ ಟಿಕೆಟ್ ಯಾಕೆ​ ಕೊಡಿಸಲಿಲ್ಲ. ಪಕ್ಷವನ್ನು ಯಡಿಯೂರಪ್ಪ ಕಪಿಮುಷ್ಟಿಯಿಂದ ಮುಕ್ತಗೊಳಿಸಬೇಕು. ಪಕ್ಷ ಅಂದರೆ ತಾಯಿ, ತಾಯಿಯ ಕತ್ತು ಹಿಸುಕುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಎಲ್ಲರೂ ಕರೆಮಾಡಿ ನೀವು ಸ್ಪರ್ಧಿಸಬೇಕೆಂದು ಹೇಳುತ್ತಿದ್ದಾರೆ. ಎಲ್ಲ ಮೋರ್ಚಾದವರು ನನಗೆ ಕರೆ ಮಾಡುತ್ತಿದ್ದಾರೆ. ನೀವು ಚುನಾವಣಾ ನಿವೃತ್ತಿ ತೆಗೆದುಕೊಳ್ಳಬೇಡಿ ಅಂತಿದ್ದಾರೆ. ನನ್ನ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದರು. ಅಲ್ಲದೆ, ಕುಟುಂಬ ರಾಜಕಾರಣದ ಬಗ್ಗೆ ಮಾತನಾಡಿದ ಅವರು, ನಾವು ದಿನನಿತ್ಯ ಕಾಂಗ್ರೆಸ್​ ಪಕ್ಷವನ್ನ ಟೀಕೆ ಮಾಡುತ್ತಿದ್ದೇವೆ. ಆದರೆ, ರಾಜ್ಯದಲ್ಲಿ ಬಿಜೆಪಿ ಕುಟುಂಬದ ಕೈಯಲ್ಲಿ ಸಿಲುಕಿದೆ ಎಂದರು.

ಇತ್ತೀಚೆಗೆ ಶಿವಮೊಗ್ಗದಲ್ಲಿ ಬೆಂಬಲಿಗರ ಸಭೆ ನಡೆಸಿದಾದ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ನಿರೀಕ್ಷೆ ಮೀರಿ ನನಗೆ ಬೆಂಬಲ ಸಿಕ್ಕಿದೆ. ಈಗಾಗಲೇ ನಾನು ಚುನಾವಣೆ ಸ್ಪರ್ಧೆ ನಿರ್ಧಾರ ಮಾಡಿದ್ದೇನೆ. ಯಾವುದೇ ಕಾರಣಕ್ಕೂ ನಾನು ಹಿಂದೆ ಸರಿಯುವುದಿಲ್ಲ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com