ದೇಶದ್ರೋಹದ ಕೆಲಸ ಮಾಡಿರುವುದು ಪ್ರಧಾನಿ ಮೋದಿ, ಅಮಿತ್ ಶಾ; ಕೇಜ್ರಿವಾಲ್ ಬಂಧನಕ್ಕೆ ಮುಖ್ಯಮಂತ್ರಿ ಚಂದ್ರು ಕಿಡಿ
ಬೆಂಗಳೂರು: ದೇಶದಾದ್ಯಂತ ಅರವಿಂದ್ ಕೇಜ್ರಿವಾಲ್ ಅವರ ಜನಪ್ರಿಯತೆಯನ್ನು ಸಹಿಸಲಾಗದೆ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ಕೇಂದ್ರವು ಅವರನ್ನು ಬಂಧಿಸಿದೆ. ಇದಕ್ಕೆಲ್ಲ ಕೇಜ್ರಿವಾಲ್ ಆಗಲಿ, ನಾವಾಗಲಿ ಹೆದರುವುದಿಲ್ಲ. ದೇಶಕ್ಕಾಗಿ ಜೈಲಿಗೆ ಹೋಗಲು ಸಿದ್ಧರಿದ್ದೇವೆ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಹೇಳಿದರು.
ದೆಹಲಿ ಸಿಎ ಅರವಿಂದ್ ಕೇಜ್ರಿವಾಲ್ ಅವರ ಬಂಧನ ಖಂಡಿಸಿ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ನೇತೃತ್ವದಲ್ಲಿ ಆಮ್ ಆದ್ಮಿ ಪಾರ್ಟಿಯ ನಾಯಕರು ಮತ್ತು ಕಾರ್ಯಕರ್ತರು ನಗರದ ಫ್ರೀಡಂ ಪಾರ್ಕ್ನಲ್ಲಿ ಕರಾಳ ದಿನಾಚರಣೆ ಆಚರಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಚಂದ್ರು, ಸಂವಿಧಾನವನ್ನೇ ಬದಲಿಸುತ್ತೇವೆ ಎಂದು ಹೊರಟವರಿಂದ ಇನ್ನೇನು ನಿರೀಕ್ಷೆ ಮಾಡಲು ಸಾಧ್ಯ. ಐಟಿ, ಇ.ಡಿಯಂತಹ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ವಿರೋಧ ಪಕ್ಷಗಳ ನಾಯಕರನ್ನು ಹಣಿಯಲು ಕೇಂದ್ರ ಸರ್ಕಾರ ಸಂಚು ರೂಪಿಸಿದೆ. ಕೇಜ್ರಿವಾಲ್ ಅವರಿಗೆ ಜಾಮೀನು ಸಿಗದಂತೆಯೂ ತಂತ್ರ ಮಾಡಲಾಗಿದೆ ಎಂದು ದೂರಿದರು.
ಚುನಾವಣಾ ಬಾಂಡ್ ಹೆಸರಿನಲ್ಲಿ ಕಪ್ಪುಹಣವನ್ನು ತಮ್ಮ ಪಕ್ಷದ ಅಕೌಂಟ್ಗೆ ಹಾಕಿಸಿಕೊಂಡಿದ್ದಾರೆ. ಜಾರಿ ನಿರ್ದೇಶನಾಲಯವನ್ನು ಬಳಸಿಕೊಂಡು ಹಲವರನ್ನು ಹೆದರಿಸಿ ಅವರ ಪಕ್ಷದ ಚುನಾವಣಾ ಬಾಂಡ್ಗಳನ್ನು ಖರೀದಿಸುವಂತೆ ಮಾಡಿದ್ದಾರೆ. ದೇಶದ್ರೋಹದ ಕೆಲಸ ಮಾಡಿರುವುದು ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಮತ್ತು ಬಿಜೆಪಿ ನಾಯಕರು, ಅವರನ್ನು ಮೊದಲು ಜೈಲಿಗೆ ಹಾಕಬೇಕು ಎಂದರು.
ಬಂಧಿಸಿದ ಮಾತ್ರಕ್ಕೆ ನಾವಾಗಲೀ ನಮ್ಮ ನಾಯಕ ಅರವಿಂದ್ ಕೇಜ್ರಿವಾಲ್ ಅವರಾಗಲಿ ಹೆದರುವುದಿಲ್ಲ, ನಮ್ಮನ್ನು ಕೂಡ ಜೈಲಿಗೆ ಹಾಕಲಿ ಎಂದು ಸವಾಲೆಸೆದ ಅವರು, ಈ ಬಾರಿ ಚುನಾವಣೆ ಪಾರದರ್ಶಕವಾಗಿ, ನ್ಯಾಯಯುತವಾಗಿ ನಡೆಯುತ್ತದೆ ಎನ್ನುವ ನಂಬಿಕೆ ಇಲ್ಲ ಎಂದು ಆತಂಕ ವ್ಯಕ್ತಪಡಿಸಿದರು.
ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಮಾತನಾಡಿ, ಪ್ರಧಾನಿ ಮೋದಿಯವರ ಒತ್ತಾಯದ ಮೇರೆಗೆ ಅರವಿಂದ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿದೆ. ಚುನಾವಣಾ ಬಾಂಡ್ಗಳ ಮೂಲಕ ಭ್ರಷ್ಟಾಚಾರ ಮಾಡಿರುವ ಬಿಜೆಪಿ ದೇಶದ ಜನತೆಯ ಗಮನವನ್ನು ಬೇರೆಡೆ ಸೆಳೆಯಲು ಈ ರೀತಿ ಮಾಡಿದ್ದಾರೆ ಎಂದರು.
400 ಸೀಟುಗಳನ್ನು ಗೆಲ್ಲುತ್ತೇನೆ ಎನ್ನುವ ಪ್ರಧಾನಿ ಮೋದಿ ಕನ್ನಡಿಯಲ್ಲಿ ತಮ್ಮ ಮುಖ ನೋಡಿಕೊಳ್ಳಲಿ. ಕೇಜ್ರಿವಾಲ್ ಅವರ ಜನಪ್ರಿಯತೆ ಕಂಡು ಹೆದರಿದ್ದಾರೆ. ಅದಕ್ಕಾಗಿಯೇ ಚುನಾವಣೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಅವರನ್ನು ಬಂಧಿಸಲಾಗಿದೆ. ನಿಮ್ಮನ್ನು ದೇಶದಿಂದ ಹೊರಹಾಕಲು ಮತದಾರರು ಕಾಯುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.