ಬೆಂಗಳೂರು: ಬರ ಪರಿಹಾರಕ್ಕೆ ಹಣ ಬಿಡುಗಡೆ ಮಾಡುವಂತೆ ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷ ಬಿಜೆಪಿ ತೀವ್ರವಾಗಿ ಕಿಡಿಕಾರಿದೆ.
ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಮತನಾಡಿ, ಇದು ರಾಜಕೀಯ ಪ್ರೇರಿತ ನಿರ್ಧಾರ. ಕರ್ನಾಟಕದ ಇತಿಹಾಸದಲ್ಲಿ ಇದೊಂದು ಕರಾಳ ದಿನ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಎಲ್ಲ ತಪ್ಪುಗಳಿಗೆ ಕೇಂದ್ರದತ್ತ ಬೊಟ್ಟು ಮಾಡುತ್ತಿದ್ದಾರೆಂದು ಕಿಡಿಕಾರಿದ್ದಾರೆ.
ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರದೊಂದಿಗೆ ಹೇಗೆ ಕೆಲಸ ಮಾಡಬೇಕು ಎಂಬುದನ್ನು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿಯಿಂದ ಸಿದ್ದರಾಮಯ್ಯ ಕಲಿಯಬೇಕಿದೆ. ಚುನಾವಣೆಯ ನಂತರ, ಆಡಳಿತದ ಮೇಲೆ ಕೇಂದ್ರೀಕರಿಸಲು ಮತ್ತು ಜನರ ಹಿತಾಸಕ್ತಿಗಳನ್ನು ಕಾಪಾಡಲು ಆದ್ಯತೆ ನೀಡಲು ರಾಜಕೀಯವನ್ನು ಬದಿಗಿರಿಸಬೇಕಿದೆ. ರಾಜಕೀಯ ನಿರೂಪಣೆಗಾಗಿ ಜನರ ಹಿತಾಸಕ್ತಿಗಳನ್ನು ಬಲಿಕೊಡುವುದು ಒಳ್ಳೆಯದಲ್ಲ ಮತ್ತು ಇದಕ್ಕಾಗಿ ಸಿದ್ದರಾಮಯ್ಯ ಅವರನ್ನು ಜನತೆ ಎಂದಿಗೂ ಕ್ಷಮಿಸುವುದಿಲ್ಲ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಸರ್ಕಾರ ಎಸ್ಸಿ, ಎಸ್ಟಿ ಸಮುದಾಯಗಳಿಗೆ ಮೀಸಲಿಟ್ಟಿದ್ದ ಹಣವನ್ನು ನುಂಗಿ ನೀರು ಕುಡಿದಿದೆ. ಈಗ ಸರ್ಕಾರ ಪಾಪರ್ ಆಗಿದೆ, ಇದನ್ನು ಮುಚ್ಚಿಹಾಕಲು ಇಂತಹ ನಾಟಕವಾಡುತ್ತಿದೆ. ನೆರೆ, ಬರ ಬಂದಾಗ ನಿಯಮದಂತೆ ಯಾವ ರಾಜ್ಯಗಳಿಗೆ ಎಷ್ಟು ಕೊಡಬೇಕೋ ಅಷ್ಟನ್ನು ಕೇಂದ್ರ ಹಣ ಕೊಡುತ್ತಿದೆ. ಆದರೆ, ಬರಗಾಲ ಎಂದು ಘೋಷಣೆಗೆ ಸರ್ಕಾರವೇ 3 ತಿಂಗಳು ತಡ ಮಾಡಿದೆ ಎಂದು ಆರೋಪಿಸಿದ್ದಾರೆ.
Advertisement