ಚುನಾವಣೆ ದಿನ ಹತ್ತಿರವಾದರೂ ಶಮನವಾಗದ ಭಿನ್ನಮತ: ಅತೃಪ್ತ ನಾಯಕರನ್ನು ಸಮಾಧಾನಗೊಳಿಸಲು ಬಿಜೆಪಿ ಹರಸಾಹಸ!

ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ

ಬೆಂಗಳೂರು: ಲೋಕಸಭೆ ಚುನಾವಣೆಗೆ ದಿನ ಸಮೀಪಿಸುತ್ತಿದ್ದು ರಾಜ್ಯದ 28 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಗೆಲ್ಲಿಸಲು ನಾಯಕರು ಮತ್ತು ಕಾರ್ಯಕರ್ತರು ಒಗ್ಗಟ್ಟಿನಿಂದ ಶ್ರಮಿಸಬೇಕಾಗಿದ್ದರೆ ಹಲವು ಕ್ಷೇತ್ರಗಳಲ್ಲಿ ಬಿಜೆಪಿಯಲ್ಲಿ ಆಂತರಿಕ ಭಿನ್ನಾಭಿಪ್ರಾಯ ಇನ್ನೂ ಶಮನವಾಗಿಲ್ಲ. ಒಗ್ಗಟ್ಟಿನಿಂದ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಆಯಾ ಕ್ಷೇತ್ರದಲ್ಲಿ ನಾಯಕರು ಮತ್ತು ಕಾರ್ಯಕರ್ತರು ಶ್ರಮಿಸಬೇಕಾಗಿದ್ದರೂ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೇರಿದಂತೆ ಹಿರಿಯ ನಾಯಕರು ಪಕ್ಷದೊಳಗಿನ ಅತೃಪ್ತ ನಾಯಕರನ್ನು ಸಮಾಧಾನಪಡಿಸುವ ಕಾರ್ಯದಲ್ಲಿ ಇನ್ನೂ ನಿರತರಾಗಿದ್ದಾರೆ.

ಕಳೆದ ವಾರದ ಆರಂಭದಲ್ಲಿ ಇಂತಹ ಅತೃಪ್ತ ಹಿರಿಯ ನಾಯಕರನ್ನು ಭೇಟಿಯಾಗಿದ್ದ ಯಡಿಯೂರಪ್ಪ ಅವರು ಇನ್ನೂ ಹಲವು ನಾಯಕರನ್ನು ಭೇಟಿಯಾಗುವ ಕೆಲಸದಲ್ಲಿಯೇ ಇದ್ದಾರೆ. ನಿನ್ನೆ ಸೋಮವಾರ ಬೆಂಗಳೂರಿನ ತಮ್ಮ ನಿವಾಸದಲ್ಲಿ ಯಡಿಯೂರಪ್ಪ, ಹರಿಹರ ಶಾಸಕ ಬಿ.ಪಿ.ಹರೀಶ್, ಮಾಜಿ ಶಾಸಕ ಜಗಳೂರು ರಾಮಚಂದ್ರಪ್ಪ ಸೇರಿದಂತೆ ದಾವಣಗೆರೆಯ ಮುಖಂಡರ ಜತೆ ಮಾತುಕತೆ ನಡೆಸಿ ಜಿಲ್ಲೆಯಲ್ಲಿ ಭುಗಿಲೆದ್ದಿರುವ ಭಿನ್ನಾಭಿಪ್ರಾಯವನ್ನು ಶಮನಗೊಳಿಸುವ ಪ್ರಯತ್ನ ಮಾಡಿದರು.

ಹಾಲಿ ಸಂಸದರ ಪತ್ನಿ ಗಾಯತ್ರಿ ಸಿದ್ದೇಶ್ವರ ಅವರನ್ನು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿರುವುದು ಬಿಜೆಪಿಯ ಸ್ಥಳೀಯ ಮುಖಂಡರಲ್ಲಿ ಅಸಮಾಧಾನ ಮೂಡಿಸಿದೆ. ಮಾಜಿ ಶಾಸಕರಾದ ಎಂ.ಪಿ.ರೇಣುಕಾಚಾರ್ಯ ಮತ್ತು ಎಸ್.ಎ.ರವೀಂದ್ರನಾಥ್ ಅವರು ಸಭೆಗೆ ಗೈರು ಹಾಜರಾಗಿದ್ದರು. ಈ ನಾಯಕರನ್ನು ಭೇಟಿ ಮಾಡಿ ಮನವರಿಕೆ ಮಾಡಲು ಯಡಿಯೂರಪ್ಪ ಅವರು ಶೀಘ್ರದಲ್ಲೇ ದಾವಣಗೆರೆಗೆ ಭೇಟಿ ನೀಡುವ ನಿರೀಕ್ಷೆಯಿದೆ.

ಕೊಪ್ಪಳ ಸಂಸದ ಕರಡಿ ಸಂಗಣ್ಣ ಹಾಗೂ ಬೆಂಬಲಿಗರನ್ನು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ಮಾಡಿ ಸಮಾಧಾನಪಡಿಸಲು ಯತ್ನಿಸಿದರು. ಹಾವೇರಿ ಅಭ್ಯರ್ಥಿಯಾಗಿರುವ ಬೊಮ್ಮಾಯಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಸಂಸದರ ಹಿಂಬಾಲಕರು ತಮ್ಮ ನಾಯಕನಿಗೆ ಆಗಿರುವ ಅನ್ಯಾಯದ ಬಗ್ಗೆ ತಿಳಿಸಿದರು. ಅವರ ಭಾವನೆಗಳನ್ನು ಪಕ್ಷದ ಮೇಲಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದರು. ಅವರಿಗೆ ಮನವರಿಕೆ ಮಾಡಿಕೊಟ್ಟು ಪಕ್ಷಕ್ಕಾಗಿ ದುಡಿಯುವಂತೆ ಮನವಿ ಮಾಡಲಾಗಿದೆ ಎಂದು ಬೊಮ್ಮಾಯಿ ತಿಳಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಬಿಜೆಪಿ 5ನೇ ಪಟ್ಟಿ: ಅನಂತಕುಮಾರ್ ಕೈತಪ್ಪಿದ ಟಿಕೆಟ್; ಕೆ.ಸುಧಾಕರ್, ಶೆಟ್ಟರ್, ಕಾಗೇರಿಗೆ ಲಕ್; ಚಿತ್ರದುರ್ಗ ಕಗ್ಗಂಟು!

ಬೀದರ್‌ನಿಂದ ಕೇಂದ್ರ ರಾಜ್ಯ ಸಚಿವ ಭಗವಂತ ಖೂಬಾ ಅವರನ್ನು ಅಭ್ಯರ್ಥಿಯನ್ನಾಗಿ ಪಕ್ಷ ಘೋಷಿಸಿದಾಗಿನಿಂದ ಮಾಜಿ ಸಚಿವ ಪ್ರಭು ಚವ್ಹಾಣ ಸೇರಿದಂತೆ ಬಿಜೆಪಿ ನಾಯಕರಲ್ಲಿ ಅಸಮಾಧಾನವಿದೆ. ಬೀದರ್‌ನಲ್ಲಿರುವ ಪ್ರತಿಪಕ್ಷ ನಾಯಕ ಆರ್.ಅಶೋಕ ಅವರು ಪಕ್ಷದ ಮುಖಂಡರನ್ನು ಭೇಟಿ ಮಾಡಿ ಒಗ್ಗಟ್ಟಿನಿಂದ ಕೆಲಸ ಮಾಡುವಂತೆ ಮನವಿ ಮಾಡಿಕೊಂಡರು.

2019ರ ಕೆ.ಆರ್.ಪೇಟೆ ಉಪಚುನಾವಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇಂದು ಮಂಗಳವಾರ ಮಂಡ್ಯಕ್ಕೆ ಭೇಟಿ ನೀಡಿ ಬಿಜೆಪಿ ಕಾರ್ಯಕರ್ತರನ್ನು ಭೇಟಿ ಮಾಡಿ ಜೆಡಿಎಸ್ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಒತ್ತಾಯಿಸಲಿದ್ದಾರೆ. ಬಿಜೆಪಿಯ ಹಿರಿಯ ನಾಯಕರೊಬ್ಬರು, “ಟಿಕೆಟ್ ಹಂಚಿಕೆಯ ಬಗ್ಗೆ ನಾಯಕರು ಅಸಮಾಧಾನ ವ್ಯಕ್ತಪಡಿಸುತ್ತಿರುವುದು ನಮಗೆ ತಿಳಿದಿದೆ. ನಮ್ಮ ನಾಯಕರು ಅವರನ್ನು ಖುದ್ದಾಗಿ ಭೇಟಿ ಮಾಡಿ ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡುತ್ತಿದ್ದಾರೆ. ನಾವು ನಿಜವಾದ ಪ್ರಚಾರವನ್ನು ಪ್ರಾರಂಭಿಸುವ ಮೊದಲು ಅದನ್ನು ಸ್ಪಷ್ಟಪಡಿಸಲು ಬಯಸಿದ್ದೇವೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com