ಬೆಂಗಳೂರು: ರಣ ಬಿಸಿಲು ಮತ್ತು ಬಿಸಿಗಾಳಿಯನ್ನು ಉಲ್ಲೇಖಿಸಿ, ರಾಜ್ಯದಲ್ಲಿ ಮೇ 7 ರಂದು ನಡೆಯುವ ಎರಡನೇ ಹಂತದ ಲೋಕಸಭೆ ಚುನಾವಣೆಯ ಮತದಾನದ ಸಮವಯನ್ನು ಬೆಳಗ್ಗೆ 6 ರಿಂದ ಸಂಜೆ 7 ರವರೆಗೆ ವಿಸ್ತರಿಸುವಂತೆ ಕರ್ನಾಟಕ ಬಿಜೆಪಿ ಶುಕ್ರವಾರ ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ.
ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೇ 7 ರಂದು ಎರಡನೇ ಹಂತದ ಮತದಾನ ನಡೆಯಲಿದ್ದು, ಸಮಯವನ್ನು ಬೆಳಗ್ಗೆ 6 ರಿಂದ ಸಂಜೆ 7 ರ ಅವಧಿಗೆ ಮಾರ್ಪಡಿಸಬೇಕು ಎಂದು ಬಿಜೆಪಿ ಮನವಿ ಮಾಡಿದೆ.
ಪ್ರಸ್ತುತ ಮೇ 7 ರಂದು ಬೆಳಗ್ಗೆ 7 ರಿಂದ ಸಂಜೆ 6 ರವರೆಗೆ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಮತದಾನ ನಡೆಯಲಿದೆ. ಆದರೆ ರಣ ಬಿಸಿಲು ಮತ್ತು ಉಷ್ಣ ಗಾಳಿಯಿಂದ ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಮನೆಯಿಂದ ಹೊರಗೆ ಬಂದು ಮತದಾನ ಮಾಡುವುದು ಕಷ್ಟಕರವಾಗಲಿದೆ. ಹೀಗಾಗಿ ಮತದಾನದ ಸಮಯ ಬದಲಾವಣೆ ಮಾಡುವಂತೆ ಬಿಜೆಪಿ ರಾಜ್ಯ ಚುನಾವಣಾ ಆಯುಕ್ತರಿಗೆ ಮನವಿ ಮಾಡಿದೆ.
ತಾಪಮಾನವು ಆತಂಕಕಾರಿಯಾಗಿ ಹೆಚ್ಚಾಗುತ್ತಿದ್ದು, 40 ಡಿಗ್ರಿ ಸೆಲ್ಸಿಯಸ್ ಗೂ ಹೆಚ್ಚು ದಾಖಲಾಗಿರುವುದನ್ನು ಬಿಜೆಪಿ ಮನವಿಯಲ್ಲಿ ಉಲ್ಲೇಖಿಸಿದೆ.
ಏಪ್ರಿಲ್ 26 ರಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭೆ ಚುನಾವಣೆಯಲ್ಲಿ 14 ಕ್ಷೇತ್ರಗಳಲ್ಲಿ ಬೆಳಗ್ಗೆ 7 ರಿಂದ ಸಂಜೆ 6 ರವರೆಗೆ ಮತದಾನ ನಡೆದಿದೆ.
Advertisement