ಬೆಂಗಳೂರು: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಕಿರುಕುಳ ಹಗರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ನಡುವಿನ ಹಗ್ಗಜಗ್ಗಾಟ ಮುಂದುವರಿದಿದೆ. ತಪ್ಪಿತಸ್ಥರಿಗೆ ಶಿಕ್ಷೆಯಾಗುವುದು ಅನಿವಾರ್ಯವಾಗಿದ್ದು, ಅವರಿಬ್ಬರ ಆಪ್ತರು ಪಕ್ಷಾತೀತವಾಗಿ ಇದು ಅನಗತ್ಯ ಎಂದು ಭಾವಿಸಿದ್ದಾರೆ.
ಜೆಡಿಎಸ್ ಮತ್ತು ಕಾಂಗ್ರೆಸ್ನೊಳಗಿನ ಒಕ್ಕಲಿಗ ನಾಯಕರ ನಡುವಿನ ಜಟಾಪಟಿಯಿಂದಾಗಿ ಸಮಸ್ಯೆ ಉಲ್ಬಣಗೊಂಡಿದೆ. ಈ ವಿಷಯದಲ್ಲಿ ಕುಮಾರಸ್ವಾಮಿ ಅಥವಾ ಶಿವಕುಮಾರ್ ಅವರ ಪರವಾಗಿ ಬಲವಾಗಿ ಕೆಲವು ನಾಯಕರು ನಿಂತಿದ್ದಾರೆ. ಆದಾಗ್ಯೂ, ಕಾಂಗ್ರೆಸ್ ಸರ್ಕಾರದ ಸಚಿವರು ಮತ್ತು ಹಳೇ ಮೈಸೂರು ಭಾಗದ ಕೆಲವು ಬಿಜೆಪಿ ನಾಯಕರು ಸೇರಿದಂತೆ ಕೆಲವು ಒಕ್ಕಲಿಗೇತರ ನಾಯಕರು ಈ ವಿಷಯದಲ್ಲಿ ಎಚ್ಚರಿಕೆ ವಹಿಸಿದ್ದಾರೆ.
ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿದ ಮಾಜಿ ಸಚಿವ ವಿ ಸೋಮಣ್ಣ ಮಾತನಾಡಿ, ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ ಹಾಗೂ ಅವರ ಕುಟುಂಬದವರ ಮೇಲೆ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸುವುದನ್ನು ನಿಲ್ಲಿಸಬೇಕು. ಮುಖ್ಯಮಂತ್ರಿಯಾಗಲು ಆತುರಪಡಬೇಡಿ. ತರಾತುರಿಯಲ್ಲಿ ನಿರ್ಧಾರ ಕೈಗೊಂಡರೆ ಹಿನ್ನಡೆಯಾಗುವ ಸಂಭವವಿದೆ ಎಂದು ಎಚ್ಚರಿಸಿದರು.
'ಶಿವಕುಮಾರ್ ಅವರು ಈಗಾಗಲೇ ಎಲ್ಲ ಹುದ್ದೆಗಳನ್ನು ಅಲಂಕರಿಸಿದ್ದಾರೆ ಮತ್ತು ಉನ್ನತ ಹುದ್ದೆಯಿಂದ ಕೇವಲ ಒಂದು ಹೆಜ್ಜೆ ದೂರದಲ್ಲಿದ್ದಾರೆ. ನಾವಿಬ್ಬರೂ ಒಂದೇ ತಾಲ್ಲೂಕಿನವರಾಗಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಅವರು ಸಿಎಂ ಆಗಬೇಕು ಎಂದು ಆಸೆ ಪಟ್ಟವರಲ್ಲಿ ನಾನು ಒಬ್ಬ. ಪ್ರಜ್ವಲ್ ಮೇಲಿನ ಆರೋಪ ಸಾಬೀತಾದರೆ ಕಠಿಣ ಶಿಕ್ಷೆಯಾಗಬೇಕು ಎಂದು ಸ್ಪಷ್ಟಪಡಿಸಿದರು.
ಸೋಮಣ್ಣ ಅವರು ಡಿಕೆ ಶಿವಕುಮಾರ್ ಅವರೊಂದಿಗೆ ಉತ್ತಮ ಒಡನಾಟ ಹೊಂದಿದ್ದನ್ನು ಇಲ್ಲಿ ಗಮನಿಸಬಹುದು. ಜೂನ್ 4ರಂದು ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬೀಳಲಿದ್ದು, ಡಿಕೆ ಶಿವಕುಮಾರ್ ಅವರ ವಿರುದ್ಧ ಹಳೇ ಮೈಸೂರು ಭಾಗದಾದ್ಯಂತ ಜೆಡಿಎಸ್ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.
ಶಿವಕುಮಾರ್ ಅವರು ದೇವೇಗೌಡರ ಕುಟುಂಬವನ್ನು ಪ್ರಜ್ವಲ್ ಸಾಲಿಗೆ ಎಳೆದು ತರುವುದನ್ನು ಮುಂದುವರಿಸಿದರೆ, ಜೆಡಿಎಸ್ ತನ್ನನ್ನು ಪುನರ್ ಸಂಘಟಿಸಿಕೊಳ್ಳಲು ಇದನ್ನು ಅವಕಾಶವಾಗಿ ಬಳಸಿಕೊಳ್ಳುತ್ತದೆ. ಲೋಕಸಭಾ ಚುನಾವಣೆಯ ಫಲಿತಾಂಶವು ಪ್ರಾದೇಶಿಕ ಪಕ್ಷದ ಭವಿಷ್ಯದ ನಿರೀಕ್ಷೆಗಳ ಮೇಲೂ ಪರಿಣಾಮ ಬೀರುತ್ತದೆ ಎಂದು ರಾಜಕೀಯ ವಿಶ್ಲೇಷಕರೊಬ್ಬರು ಅಭಿಪ್ರಾಯಪಟ್ಟಿದ್ದಾರೆ.
ಗುರುವಾರ ಸಭೆ ನಡೆಸಿದ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ, ಜುಲೈನಲ್ಲಿ ನಡೆಯಲಿರುವ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಮುನ್ನ ಪಕ್ಷ ಸಂಘಟನೆಯನ್ನು ಬಲಪಡಿಸಲು ಸದಸ್ಯತ್ವ ಅಭಿಯಾನವನ್ನು ಶೀಘ್ರವೇ ಆರಂಭಿಸಲಾಗುವುದು ಎಂದರು.
ಮಂಡ್ಯ, ಕೋಲಾರ, ತುಮಕೂರು, ಬೆಂಗಳೂರು ಗ್ರಾಮಾಂತರ, ಹಾಸನದಲ್ಲಿ ಜೆಡಿಎಸ್ ಪಕ್ಷ ಇನ್ನೂ ಶಕ್ತಿಯುತವಾಗಿದ್ದು, ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸ್ಪರ್ಧಿಸಲು ಅಭ್ಯರ್ಥಿಗಳ ಕೊರತೆ ಇಲ್ಲ ಎಂದು ತುಮಕೂರು ಮಾಜಿ ಮೇಯರ್ ಟಿಆರ್ ನಾಗರಾಜು ಹೇಳಿದರು.
Advertisement