ವಿಧಾನ ಪರಿಷತ್ ಚುನಾವಣೆ: ಡಿಕೆಶಿ ಭೇಟಿಯಾದ ಸಚಿವರ ನಿಯೋಗ; ಲಂಬಾಣಿಗರು, ಅಲ್ಪಸಂಖ್ಯಾತರಿಗೆ ಟಿಕೆಟ್ ಕೊಡುವಂತೆ ಮನವಿ
ಬೆಂಗಳೂರು: ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಗೆ ಜಾತಿ, ಪ್ರದೇಶ, ಕೊಡುಗೆಗಳನ್ನು ಮಾನದಂಡವಾಗಿ ಪರಿಗಣಿಸುವಂತೆ ಸಚಿವರ ನಿಯೋಗ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಶನಿವಾರ ಭೇಟಿ ಮಾಡಿ, ಮನವಿ ಮಾಡಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಶನಿವಾರ ಹೇಳಿದರು.
ಡಿ.ಕೆ.ಶಿವಕುಮಾರ್ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿನ ಸಭೆಯಲ್ಲಿ ಜಾತಿವಾರು ಹಾಗೂ ಪ್ರಾಂತ್ಯವಾರು ಅವಕಾಶ ನೀಡುವ ಬಗ್ಗೆ ಚರ್ಚೆಗಳು ನಡೆದವು. ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕುರಿತು ಸಚಿವರ ನಿಯೋಗ ಸಲಹೆಗಳನ್ನು ನೀಡಿದೆ ಎಂದು ಹೇಳಿದರು.
ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ, ಮಂಗಳೂರು ಕರಾವಳಿ ಕರ್ನಾಟಕ ಸೇರಿದಂತೆ ಎಲ್ಲಾ ಪ್ರಾಂತ್ಯವಾರು ಆಯ್ಕೆಗಳಾಗಬೇಕು. ಬೆಂಗಳೂರಿನವರನ್ನು ಮಾತ್ರ ಪರಿಗಣಿಸುವುದು ಸರಿಯಲ್ಲ. ಅದೇ ರೀತಿ ಜಾತಿ ಸಮುದಾಯವಾರು ಹಂಚಿಕೆ ಮಾಡಬೇಕು. ಕಾಂಗ್ರೆಸ್ ಪಕ್ಷದಲ್ಲಿ ಲಂಬಾಣಿ ಸಮುದಾಯದ ಅಭ್ಯರ್ಥಿಗಳು ಚುನಾವಣೆಯಲ್ಲಿ ಸೋಲು ಕಂಡಿದ್ದಾರೆ. ಆ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಬೇಕು. ಅಲ್ಪಸಂಖ್ಯಾತರ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕು. ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕುವ ಜಾತಿ ಬಗ್ಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಹೈಕಮಾಂಡ್ ನಾಯಕರಿಗೆ ಸಲಹೆ ನೀಡಿದ್ದೇವೆಂದು ತಿಳಿಸಿದರು.
ಕೆಲ ಸದಸ್ಯರ ಪುನರ್ ಆಯ್ಕೆ ಅನಿವಾರ್ಯ. ಹಾಗೆಯೇ ಹೊಸಬರನ್ನು ಗುರುತಿಸದೇ ಇದ್ದರೆ ಪಕ್ಷ ಸಂಘಟನೆ ಮಾಡುವುದು ಕಷ್ಟವಾಗುತ್ತದೆ. ಹೀಗಾಗಿ ಕನಿಷ್ಟ ನಾಲ್ಕೈದು ಜನರಿಗಾದರೂ ಹೊಸಬರಿಗೆ ಅವಕಾಶ ನೀಡಿ ಎಂದು ಮನವಿ ಮಾಡಿರುವುದಾಗಿ ತಿಳಿಸಿದರು.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ