ಅಹಿಂದ ನಾಯಕರಾಗಿ ಸಿಎಂ ಸಿದ್ದರಾಮಯ್ಯ, ಸಚಿವ ಸತೀಶ್ ಜಾರಕಿಹೊಳಿ ಸ್ಥಾನ ಭದ್ರ; ದಲಿತ ಸಿಎಂ ವಿಚಾರ ನಗಣ್ಯ!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಆಪ್ತ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮೂಲಕ ದಲಿತ ಮುಖಂಡರ ಬೆಂಬಲ ಪಡೆಯುವ ಮೂಲಕ ಮುಖ್ಯಮಂತ್ರಿ ಹಾಗೂ ಅಹಿಂದ ನಾಯಕ ಎಂಬ ಸ್ಥಾನವನ್ನು ನಿರ್ವಿವಾದವಾಗಿ ಭದ್ರವಾಗಿ ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.
ಸಿದ್ದರಾಮಯ್ಯ-ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ-ಸತೀಶ್ ಜಾರಕಿಹೊಳಿ
Updated on

ಬೆಂಗಳೂರು: ಸಿಎಂ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಅವರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ 14 ನಿವೇಶನಗಳನ್ನು ಹಿಂತಿರುಗಿಸಿದರೂ ಕೂಡ ಮುಡಾ ವಿಚಾರ ಇನ್ನೂ ರಾಜಕೀಯ ವಲಯದಲ್ಲಿ ಅಲ್ಲೋಲ ಕಲ್ಲೋಲ ಉಂಟು ಮಾಡುತ್ತಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಆಪ್ತ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮೂಲಕ ದಲಿತ ಮುಖಂಡರ ಬೆಂಬಲ ಪಡೆಯುವ ಮೂಲಕ ಮುಖ್ಯಮಂತ್ರಿ ಹಾಗೂ ಅಹಿಂದ ನಾಯಕ ಎಂಬ ಸ್ಥಾನವನ್ನು ನಿರ್ವಿವಾದವಾಗಿ ಭದ್ರವಾಗಿ ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.

ಒಂದು ರೀತಿಯಲ್ಲಿ, ಸಿದ್ದರಾಮಯ್ಯ ಮತ್ತು ಸತೀಶ್ ಜಾರಕಿಹೊಳಿ ಇಬ್ಬರೂ ದಲಿತ ಮುಖ್ಯಮಂತ್ರಿ ಸಮಸ್ಯೆಯನ್ನು ಬಗೆಹರಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಕಾಂಗ್ರೆಸ್ ನಾಯಕರೊಬ್ಬರು ದಿ ನ್ಯೂ ಸಂಡೆ ಎಕ್ಸ್‌ಪ್ರೆಸ್‌ಗೆ ತಿಳಿಸಿದರು.

ಸಿದ್ದರಾಮಯ್ಯನವರ ಆಶೀರ್ವಾದವಿಲ್ಲದೇ ದೆಹಲಿಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ, ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಜತೆ ಪ್ರತ್ಯೇಕ ಸಭೆ ನಡೆಸಲು ಸತೀಶ್ ಮುಂದಾಗುತ್ತಿರಲಿಲ್ಲ ಎಂಬುದು ಕಾಂಗ್ರೆಸ್ ನೊಳಗಿರುವವರ ಅಭಿಪ್ರಾಯ. ಮೊನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಯಾಗಿ ಮುಂದುವರಿಯಲು ಸಿದ್ದರಾಮಯ್ಯ ಅವರಿಗೆ ಒಗ್ಗಟ್ಟಾಗಿ ಬೆಂಬಲ ವ್ಯಕ್ತಪಡಿಸಲು ಒತ್ತಾಯಿಸಲಾಯಿತು.

ಇತ್ತೀಚೆಗೆ ಸತೀಶ್ ಜಾರಕಿಹೊಳಿ ಅವರ ರಾಜಕೀಯ ನಡೆ ಅವರು ಸಿದ್ದರಾಮಯ್ಯನವರ ನಂತರ ಅಹಿಂದ ನಾಯಕರಾಗಿ ಹೊರಹೊಮ್ಮಲು ಸಹಾಯ ಮಾಡಿದೆ. ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಕೆಳಗಿಳಿದರೆ ಸತೀಶ್ ಜಾರಕಿಹೊಳಿ ಅವರ ಹೆಸರನ್ನು ಉನ್ನತ ಸ್ಥಾನಕ್ಕೆ ಪ್ರಸ್ತಾಪಿಸಬಹುದು. ಇಲ್ಲದಿದ್ದರೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಬದಲಿಗೆ ಸತೀಶ್ ಕಣಕ್ಕಿಳಿಯಬಹುದು ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ರಾಜಕೀಯ ಮಹತ್ವಾಕಾಂಕ್ಷೆಯ ಸತೀಶ್ ಜಾರಕಿಹೊಳಿ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಮತ್ತು 2028 ರ ವಿಧಾನಸಭಾ ಚುನಾವಣೆಯಲ್ಲಿ ಅಹಿಂದ ನಾಯಕರಾಗಿ ಕಾಂಗ್ರೆಸ್ ನ್ನು ಮುಂಚೂಣಿಯಿಂದ ಮುನ್ನಡೆಸಲು ಬಯಸಿದ್ದಾರೆ ಎಂದು ಕಾಂಗ್ರೆಸ್ ಮುಖಂಡರೊಬ್ಬರು ತಿಳಿಸಿದ್ದಾರೆ.

ದಸರಾ ಹಬ್ಬ ಮುಗಿದಿದೆ, ಇನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಶಿವಕುಮಾರ್ ಅಭಿವೃದ್ಧಿ ಕಾರ್ಯಗಳತ್ತ ಗಮನ ಹರಿಸಲಿದ್ದು, ಇಂದು ಮೈಸೂರಿನಿಂದ ವಿಶೇಷ ವಿಮಾನದಲ್ಲಿ ಹುಬ್ಬಳ್ಳಿಗೆ ತೆರಳಲಿದ್ದಾರೆ. ಬೆಳಗಾವಿ ಜಿಲ್ಲೆಯ ಸವದತ್ತಿಯ ಎಲ್ಲಮ್ಮ ದೇವಸ್ಥಾನದಲ್ಲಿ ಅನುಷ್ಠಾನಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ.

ಸಿದ್ದರಾಮಯ್ಯ-ಸತೀಶ್ ಜಾರಕಿಹೊಳಿ
ಜಾತಿ ಗಣತಿ: ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಸ್ಥಾನ ಹೆಚ್ಚು ಭದ್ರ?

ಸಚಿವ ಸಂಪುಟ ಪುನರ್ರಚನೆ?: ಯಾವುದೇ ಹಗರಣಗಳಿಗೆ ಒಳಗಾಗದೆ ಸುಗಮ ಆಡಳಿತಕ್ಕೆ ಕಾಂಗ್ರೆಸ್ ಹೈಕಮಾಂಡ್ ಸಂಪುಟ ಪುನರ್ರಚನೆಗೆ ಒಪ್ಪಿಗೆ ನೀಡುವ ಸಾಧ್ಯತೆಯಿದೆ. ಸಹಕಾರ ಸಚಿವ ಕೆ.ಎನ್.ರಾಜಣ್ಣ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್.ಮುನಿಯಪ್ಪ ಸೇರಿದಂತೆ ಕೆಲವು ಸಚಿವರನ್ನು ಕೈಬಿಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ರಾಜಣ್ಣ ಅವರು ಸರ್ಕಾರದಲ್ಲಿ ಹೆಚ್ಚಿನ ಡಿಸಿಎಂ ಹುದ್ದೆಗಳನ್ನು ಸೃಷ್ಟಿಸಬೇಕು ಎಂದು ಹೇಳಿಕೆಗಳನ್ನು ನೀಡುವ ಮೂಲಕ ಕಾಂಗ್ರೆಸ್ ವರಿಷ್ಠರನ್ನು ಮುಜುಗರಪಡಿಸಿದ್ದರು ಎಂದು ಪಕ್ಷದ ಆಂತರಿಕ ಮೂಲಗಳು ಹೇಳುತ್ತವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com