

ನವದೆಹಲಿ: ಕರ್ನಾಟಕದಲ್ಲಿನ ಭ್ರಷ್ಟಾಚಾರದಿಂದ ರಾಹುಲ್ ಗಾಂಧಿ ಲಾಭ ಪಡೆದಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಪ್ರದೀಪ್ ಭಂಡಾರಿ ಸೋಮವಾರ ಆರೋಪಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ರಾಹುಲ್ ಖರ್ಗೆ ನಡೆಸುತ್ತಿರುವ ಟ್ರಸ್ಟ್ಗೆ ಮಂಜೂರಾಗಿದ್ದ ಐದು ಎಕರೆ ಭೂಮಿಯನ್ನು ಹಿಂದಿರುಗಿಸಲು ಅವರ ಕುಟುಂಬ ನಿರ್ಧರಿಸಿದ ನಂತರ ಅವರು ಈ ಹೇಳಿಕೆ ನೀಡಿದ್ದಾರೆ.
ಕರ್ನಾಟಕ ಕಾಂಗ್ರೆಸ್ ಸರ್ಕಾರ ಕೇವಲ ಭ್ರಷ್ಟಾಚಾರದ ಮೇಲೆ ಗಮನ ಕೇಂದ್ರೀಕರಿಸಿದೆ, ಬಡವರ ಜಮೀನು ಪಡೆದು ಖರ್ಗೆಯಂತಹ ನಾಯಕರ ಕುಟುಂಬದ ಸದಸ್ಯರ ಬೊಕ್ಕಸ ತುಂಬಿಸುತ್ತಿದೆ. ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಇಬ್ಬರೂ ರಾಹುಲ್ ಗಾಂಧಿಯನ್ನು ತಮ್ಮ ಮೆಂಟರ್ ಎಂದು ಪರಿಗಣಿಸಿದ್ದಾರೆ. ಹಾಗಾಗಿ, ರಾಹುಲ್ ಗಾಂಧಿ ಇಬ್ಬರಿಗೂ ಭ್ರಷ್ಟಾಚಾರದ ಮಾರ್ಗದರ್ಶಕರಾಗಿದ್ದಾರೆ. ಕರ್ನಾಟಕ ಕಾಂಗ್ರೆಸ್ ಸರ್ಕಾರ ಇಲ್ಲಿಯವರೆಗಿನ ಅತ್ಯಂತ ಭ್ರಷ್ಟ ಸರ್ಕಾರ ಎಂದು ಸಾಬೀತಾಗಿದ್ದು, ರಾಹುಲ್ ಗಾಂಧಿ ಕರ್ನಾಟಕದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಫಲಾನುಭವಿ ಎಂದು ಅವರು ಹೇಳಿದ್ದಾರೆ.
ತಮ್ಮ ಕುಟುಂಬ ಸದಸ್ಯರಿಗೆ ಜಮೀನು ನೀಡಲು ಅಧಿಕೃತ ಸ್ಥಾನವನ್ನು ದುರುಪಯೋಗಪಡಿಸಿಕೊಂಡಿದ್ದನ್ನು ಮಲ್ಲಿಕಾರ್ಜುನ ಖರ್ಗೆ ಒಪ್ಪಿಕೊಂಡಿದ್ದಾರೆ. ಮುಡಾ ಹಗರಣದಲ್ಲಿ ಕರ್ನಾಟಕದ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಕುಟುಂಬದ ಸದಸ್ಯರಿಗೆ ಅನುಕೂಲ ಮಾಡಿಕೊಡಲು ಅಧಿಕಾರ ದುರ್ಬಳಕೆ ಮಾಡಿಕೊಂಡಂತೆ ಕೆಐಎಡಿಬಿ ಜಮೀನು ವಿಚಾರದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಈ ಮಧ್ಯೆ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬ ನಡೆಸುತ್ತಿರುವ ಟ್ರಸ್ಟ್ಗೆ ಮಂಜೂರು ಮಾಡಿದ ಐದು ಎಕರೆ ಭೂಮಿಯನ್ನು ಹಿಂದಿರುಗಿಸುವ ನಿರ್ಧಾರವನ್ನು ಸಂಭವನೀಯ ವಂಚನೆಯ ಸೂಚನೆಯಾಗಿದ್ದು, ಈ ಬಗ್ಗೆ ತನಿಖೆ ನಡೆಸಬೇಕು ಎಂದು ಬಿಜೆಪಿ ಸಂಸದ ಪ್ರವೀಣ್ ಖಂಡೇಲ್ವಾಲ್ ಒತ್ತಾಯಿಸಿದ್ದಾರೆ.