ಮಂಡ್ಯ ಲೋಕಸಭೆ ಚುನಾವಣೆ: ಮದ್ದೂರಿನಿಂದ ನಿಖಿಲ್ ಕುಮಾರಸ್ವಾಮಿ ಚುನಾವಣಾ ಪ್ರಚಾರ

ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರಕ್ಕೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮದ್ದೂರು ತಾಲೂಕಿನಿಂದ ಚಾಲನೆ ನೀಡಲಿದ್ದಾರೆ ಎಂದು ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಹೇಳಿದರು.
ನಿಖಿಲ್ ಕುಮಾರಸ್ವಾಮಿ
ನಿಖಿಲ್ ಕುಮಾರಸ್ವಾಮಿ
Updated on

ಮದ್ದೂರು: ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರಕ್ಕೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮದ್ದೂರು ತಾಲೂಕಿನಿಂದ ಚಾಲನೆ ನೀಡಲಿದ್ದಾರೆ ಎಂದು ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಹೇಳಿದರು.

ಲೋಕಸಭೆ ಚುನಾವಣೆಗೂ ಮುನ್ನ ಪಕ್ಷ ಸಂಘಟನೆಗೆ ಗಮನ ಹರಿಸಲಾಗುವುದು ಎಂದರು. ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರದಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಮೊದಲ ಹಂತದ ಪ್ರವಾಸ ಮದ್ದೂರು ವಿಧಾನಸಭಾ ಕ್ಷೇತ್ರದಿಂದ ಆರಂಭಗೊಳ್ಳುವುದರಿಂದ ಪ್ರವಾಸದ ರೂಪು-ರೇಷೆಗಳ ಬಗ್ಗೆ ಪೂರ್ವಭಾವಿ ಸಭೆಯಲ್ಲಿ ಚರ್ಚೆ ನಡೆಸಲಾಯಿತು.

ನಿಖಿಲ್ ಕುಮಾರಸ್ವಾಮಿ ಅವರು ಸಭೆ ಉದ್ದೇಶಿಸಿ ಮಾತನಾಡುವುದರ ಜೊತೆಗೆ ವಿದ್ಯಾರ್ಥಿಗಳು ಮತ್ತು ಯುವಕರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಅವರು ಹೇಳಿದರು. ಕೆಸ್ತೂರು ಹಾಗೂ ಕೆ.ಎಂ.ದೊಡ್ಡಿ ಕಾಲೇಜಿಗೆ ಭೇಟಿ ನೀಡಲಿರುವ ಅವರು, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷವನ್ನು ಗೆಲ್ಲಿಸುವ ನಿಟ್ಟಿನಲ್ಲಿ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಮಾತುಕತೆ ನಡೆಸಲಿದ್ದಾರೆ.

ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಪಕ್ಷದ ಮುಖಂಡರು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ತಮ್ಮಣ್ಣ ಹೇಳಿದರು. ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅಥವಾ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು ಮಂಡ್ಯದಿಂದ ಸ್ಪರ್ಧಿಸುವಂತೆ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಕುಮಾರಸ್ವಾಮಿ ಮತ್ತು ನಿಖಿಲ್ ಇಬ್ಬರೂ ಸ್ಪರ್ಧಿಸಲು ನಿರಾಕರಿಸಿದರೆ ಮಾಜಿ ಶಾಸಕ ಅಥವಾ ಬೇರೆ ಮುಖಂಡರನ್ನು  ಕಣಕ್ಕಿಳಿಸುವ ಬಗ್ಗೆಯೂ ಪಕ್ಷವು ಪರಿಗಣಿಸಲಿದೆ ಎಂದು ಅವರು ಹೇಳಿದರು.

ಆದರೆ, ಸೀಟು ಹಂಚಿಕೆ ಮಾತುಕತೆಯಲ್ಲಿ ಜೆಡಿಎಸ್ ವರಿಷ್ಠರು ಕ್ಷೇತ್ರವನ್ನು ಬಿಜೆಪಿ ಅಭ್ಯರ್ಥಿಗೆ ಬಿಟ್ಟುಕೊಡಲು ಒಪ್ಪಿಗೆ ನೀಡಿದರೆ ಪಕ್ಷದ ಮುಖಂಡರು, ಕಾರ್ಯಕರ್ತರು ಬಿಜೆಪಿಗೆ ಬೆಂಬಲ ನೀಡಲಿದ್ದಾರೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com