ಬೆಂಗಳೂರು: ಹಾವೇರಿ ಜಿಲ್ಲೆಯಲ್ಲಿ ಮುಸ್ಲಿಂ ಮಹಿಳೆಯ ಮೇಲೆ ನೈತಿಕ ಪೊಲೀಸ್ ಗಿರಿ ನಡೆಸಿ ಸಾಮೂಹಿಕ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೌನವಾಗಿದ್ದಾರೆ ಎಂದು ಗುರುವಾರ ಪ್ರತಿಪಕ್ಷ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದೆ.
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ನೈತಿಕ ಪೊಲೀಸ್ಗಿರಿ ಕುರಿತು ಸುದೀರ್ಘ ಭಾಷಣ ಮಾಡುತ್ತಿದ್ದ ಸಿದ್ದರಾಮಯ್ಯ ಅವರು ಈ ಹೇಯ ಕೃತ್ಯ ಬಯಲಿಗೆ ಬಂದ ನಂತರ ಮೌನವಾಗಿದ್ದಾರೆ ಎಂದರು.
ಆರೋಪಿಗಳು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕೆ ಸುಮ್ಮನಿದ್ದೀರಾ? ನಿಮ್ಮ ನಿಲುವು ಸ್ಪಷ್ಟಪಡಿಸಬೇಕು ಎಂದು ಬೊಮ್ಮಾಯಿ ಆಗ್ರಹಿಸಿದರು.
ಹಾನಗಲ್ ಪಟ್ಟಣದ ಹೋಟೆಲ್ವೊಂದರಲ್ಲಿ ಅನ್ಯಕೋಮಿನ ಪುರುಷನೊಂದಿಗೆ ಇದ್ದ ಮುಸ್ಲಿಂ ಮಹಿಳೆ ಮೇಲೆ ನಡೆದ ಹಲ್ಲೆ ಮತ್ತು ನೈತಿಕ ಪೊಲೀಸ್ಗಿರಿ ಖಂಡನೀಯ. ಅಮಾಯಕರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸುತ್ತಿರುವ ಗೂಂಡಾಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಬೊಮ್ಮಾಯಿ ಒತ್ತಾಯಿಸಿದರು.
ಮಹಿಳೆಯನ್ನು ಹೋಟೆಲ್ ನಿಂದ ಬಲವಂತವಾಗಿ ಕಾರಿನಲ್ಲಿ ಪ್ರತ್ಯೇಕ ಸ್ಥಳಕ್ಕೆ ಕರೆದೊಯ್ದ ಆಕೆಯ ಮೇಲೆ ಹಲ್ಲೆ ನಡೆಸಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಲಾಗಿದೆ. ಗೂಂಡಾಗಳು ನೈತಿಕ ಪೊಲೀಸ್ಗಿರಿ ನಡೆಸುತ್ತಿರುವುದನ್ನು ನೋಡಿದರೆ, ರಾಜ್ಯದಲ್ಲಿ ಸರ್ಕಾರ ಜೀವಂತವಾಗಿದೆಯೇ ಎಂಬ ಪ್ರಶ್ನೆ ಹುಟ್ಟುಹಾಕುತ್ತಿದೆ ಎಂದು ಮಾಜಿ ಸಿಎಂ ಕಿಡಿಕಾರಿದ್ದಾರೆ.
Advertisement