
ಬೆಳಗಾವಿ: ಜಾತಿ ಗಣತಿ ಆಧಾರದಲ್ಲಿ ಹಿಂದೂ ಮತ್ತು ಮುಸ್ಲಿಮರನ್ನು ವಿಭಜಿಸುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗುರಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆರೋಪಿಸಿದ್ದಾರೆ.
ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಾತಿ ಗಣತಿ ನಡೆಸುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲದಿದ್ದರೂ ಕಾಂಗ್ರೆಸ್ ನವರು ಇನ್ನೂ ಆ ಪ್ರಕ್ರಿಯೆಯಲ್ಲಿದ್ದಾರೆ. ಜಾತಿ ಗಣತಿ ಆಧಾರದ ಮೇಲೆ ಮೀಸಲಾತಿ ಅಸಾಧ್ಯ. ಈಗ ನೀಡಿರುವ ವರದಿ 10 ವರ್ಷಗಳಷ್ಟು ಹಳೆಯದಾಗಿದೆ. ಹಿಂದುಳಿದ ವರ್ಗಗಳ ಆಯೋಗದ ಪ್ರಕಾರ ಪ್ರತಿ 10 ವರ್ಷಗಳಿಗೂ ಇಂತಹ ಸಮೀಕ್ಷೆ ನಡೆಸಬೇಕಾಗುತ್ತದೆ. ಜಾತಿ ಗಣತಿ ಜಾರಿ ಕುರಿತು ಸರ್ಕಾರದ ಹೇಳಿಕೆ ಕೇವಲ ಕಣ್ಣೊರೆಸುವ ತಂತ್ರ ಎಂದರು.
ಕಾಂಗ್ರೆಸ್ ಪಕ್ಷ ಈ ದೇಶದಲ್ಲಿ "ಒಡೆದು ಆಳುವ" ಬ್ರಿಟಿಷರ ನೀತಿಯನ್ನು ಯಶಸ್ವಿಯಾಗಿ ಅನುಸರಿಸುತ್ತಿದೆ. ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ವೀರಶೈವ-ಲಿಂಗಾಯತ ಪ್ರತ್ಯೇಕ ಧರ್ಮ ಎಂದು ಘೋಷಣೆ ಮಾಡುವ ಮೂಲಕ ವಿವಾದ ಹುಟ್ಟು ಹಾಕಲು ಯತ್ನಿಸಿದ್ದರು. ಆ ಪ್ರಯತ್ನದಲ್ಲಿ ವಿಫಲರಾದರು. ಕಾಂಗ್ರೆಸ್ಗೆ ಈಗ ಅಂಬೇಡ್ಕರ್ ಮತ್ತು ಮುಸ್ಲಿಮರು ನೆನಪಾಗುತ್ತಿದೆ. ಅವರು ಮುಸ್ಲಿಮರನ್ನು ಮತ ಬ್ಯಾಂಕ್ಗಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ವಿಜಯೇಂದ್ರ ಆರೋಪಿಸಿದರು.
ಹಿಂದುಳಿದ, ತುಳಿತಕ್ಕೊಳಗಾದ ಮತ್ತು ಶೋಷಿತ ಸಮುದಾಯಗಳಿಗೆ ಆರ್ಥಿಕ, ಶೈಕ್ಷಣಿಕ ಮತ್ತು ಸಾಮಾಜಿಕ ನ್ಯಾಯವನ್ನು ಖಾತ್ರಿಪಡಿಸಲು ಬಿಜೆಪಿ ಬದ್ಧವಾಗಿದೆ. ಆದರೆ ಕಾಂಗ್ರೆಸ್ ಪಕ್ಷ ಮತ್ತು ಸಿದ್ದರಾಮಯ್ಯನವರು ದುರ್ಬಲ ಸಮುದಾಯಗಳನ್ನು ಕೇವಲ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ. 2015ರಲ್ಲಿಯೇ ಕಾಂತರಾಜ್ ವರದಿ ಸಲ್ಲಿಕೆಯಾಗಿತ್ತು ಎಂದು ಮುಖ್ಯಮಂತ್ರಿ ಹೇಳುತ್ತಾರೆ. ಆಗಿದ್ದರೆ ಈ ಹಿಂದೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಕಾಂತರಾಜ್ ವರದಿಯನ್ನು ಯಾಕೆ ಅನುಷ್ಠಾನಗೊಳಿಸಲಿಲ್ಲ ಎಂದು ಪ್ರಶ್ನಿಸಿದರು.
ವಿರೋಧ ಪಕ್ಷದ ನಾಯಕ ಆರ್.ಅಶೋಕ ಮಾತನಾಡಿ, ಕಳೆದ ಬಾರಿ ಲಿಂಗಾಯತ ಸಮುದಾಯವನ್ನು ಪ್ರತ್ಯೇಕ ಧರ್ಮ ಎಂದು ಘೋಷಿಸಲು ಯತ್ನಿಸಿ ಕೈ ಸುಟ್ಟುಕೊಂಡಿದ್ದರು. ಈಗ ಜಾತಿ ಗಣತಿ ವರದಿಯನ್ನು ಜಾರಿಗೆ ತರಲು ಪ್ರಯತ್ನಿಸುತ್ತಿದ್ದಾರೆ. ಈ ಬಾರಿಯೂ ಅವರಿಗೆ ಶಿಕ್ಷೆಯಾಗುತ್ತದೆ, ರಾಜ್ಯದಲ್ಲಿ ಮುಸ್ಲಿಮರು ಹೆಚ್ಚಿನ ಜನಸಂಖ್ಯೆಯನ್ನು ಹೊಂದಿದ್ದಾರೆ ಎಂದು ಸಮೀಕ್ಷೆ ಹೇಳುತ್ತದೆ. ಅವರಿಗೆ ಅಲ್ಪಸಂಖ್ಯಾತರ ಸ್ಥಾನಮಾನ ಏಕೆ ಬೇಕು? ಅವರು ಸಂಖ್ಯೆಯಲ್ಲಿ ಮೊದಲ ಸ್ಥಾನದಲ್ಲಿದ್ದರೆ ಅವರನ್ನು ಅಲ್ಪಸಂಖ್ಯಾತರ ಪಟ್ಟಿಯಿಂದ ತೆಗೆದುಹಾಕಬೇಕು ಎಂದು ಹೇಳಿದರು.
Advertisement