ಪಹಲ್ಗಾಂ ಭಯೋತ್ಪಾದಕ ದಾಳಿ: ಇಂತಹ ಸಂದಿಗ್ಧ ಸ್ಥಿತಿಯಲ್ಲಿ ಜವಾಬ್ದಾರಿಯುತವಾಗಿ ಮಾತನಾಡಿ; ಕಾಂಗ್ರೆಸ್'ಗೆ ವಿಜಯೇಂದ್ರ ಆಗ್ರಹ

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಆರ್‌ಡಿಪಿಆರ್ ಸಚಿವ ಪ್ರಿಯಾಂಕ್ ಖರ್ಗೆ ಕೇಂದ್ರದ ಗುಪ್ತಚರ ವೈಫಲ್ಯದ ಬಗ್ಗೆ ಮಾತನಾಡುತ್ತಾರೆ. ಈ ದೇಶವನ್ನು 60 ವರ್ಷ ಕಾಂಗ್ರೆಸ್‌ ಆಡಳಿತ ನಡೆಸಿತ್ತು. ಆಗಲೂ ಹಲವು ಬಾರಿ ಭಯೋತ್ಪಾದಕ ದಾಳಿಗಳು ನಡೆದಿರಲಿಲ್ಲವೇ?
siddaramaiah and vijayendra
ಸಿದ್ದರಾಮಯ್ಯ ಹಾಗೂ ವಿಜಯೇಂದ್ರ
Updated on

ಬೆಂಗಳೂರು: ಭಯೋತ್ಪಾದಕರ ದಾಳಿಯ ವಿಚಾರದಲ್ಲಿ ಹೊಣೆಗಾರಿಕೆ ಅರಿತು ಮಾತನಾಡಿ ಎಂದು ಕಾಂಗ್ರೆಸ್ ನಾಯಕರಿಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಗುರುವಾರ ಆಗ್ರಹಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಆರ್‌ಡಿಪಿಆರ್ ಸಚಿವ ಪ್ರಿಯಾಂಕ್ ಖರ್ಗೆ ಕೇಂದ್ರದ ಗುಪ್ತಚರ ವೈಫಲ್ಯದ ಬಗ್ಗೆ ಮಾತನಾಡುತ್ತಾರೆ. ಈ ದೇಶವನ್ನು 60 ವರ್ಷ ಕಾಂಗ್ರೆಸ್‌ ಆಡಳಿತ ನಡೆಸಿತ್ತು. ಆಗಲೂ ಹಲವು ಬಾರಿ ಭಯೋತ್ಪಾದಕ ದಾಳಿಗಳು ನಡೆದಿರಲಿಲ್ಲವೇ? ಅವರ ಅವಧಿಯಲ್ಲಿ ಭಯೋತ್ಪಾದನೆ ನಿರ್ಮೂಲನೆ ಮಾಡಲು ಏಕೆ ಸಾಧ್ಯವಾಗಲಿಲ್ಲ ಎಂದು ಪ್ರಶ್ನಿಸಿದರು.

ದೇಶ ಸಂದಿಗ್ಧ ಸ್ಥಿತಿಯಲ್ಲಿ ಇರುವಾಗ ಪ್ರತಿಯೊಬ್ಬ ಭಾರತೀಯನೂ ಒಗ್ಗಟ್ಟಿನಿಂದ ಇರಬೇಕು. ಆ ಮೂಲಕ ವಿಶ್ವಕ್ಕೆ ಸ್ಪಷ್ಟ ಸಂದೇಶ ಕಳುಹಿಸಬೇಕು. ಭಯೋತ್ಪಾದನೆ ಎಂಬುದು ಭಾರತಕ್ಕೆ ಮಾತ್ರ ಸೀಮಿತವಲ್ಲ. ಇದು ಜಾಗತಿಕ ಸಮಸ್ಯೆ. ಭಯೋತ್ಪಾದನೆಯನ್ನು ಬುಡಸಮೇತ ಕಿತ್ತು ಹಾಕಲು ಪ್ರಧಾನಿ ಮೋದಿ ಶ್ರಮಿಸುತ್ತಿದ್ದು, ಅದಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಹೇಳಿದರು.

‘ಭಯೋತ್ಪಾದಕರು ಹೆಸರನ್ನು ಕೇಳಿ ಹಿಂದೂಗಳನ್ನೇ ಹತ್ಯೆ ಮಾಡಿದ್ದಾರೆ. ಆದರೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾರತೀಯ ಪ್ರವಾಸಿಗರ ಮೇಲೆ ದಾಳಿ ಮಾಡಿರುವುದಾಗಿ ಹೇಳಿದ್ದಾರೆ. ಹತರಾದವರು ಹಿಂದೂಗಳು ಎಂದು ಇವರಿಗೆ ಅನ್ನಿಸಲಿಲ್ಲವೇ? ಹಿಂದೂಗಳನ್ನು ಗುರಿಯಾಗಿಸಿ ದಾಳಿ ಮಾಡಿರುವ ಬಗ್ಗೆ ಕಾಂಗ್ರೆಸ್‌ನವರಿಗೆ ಯಾವುದೇ ಸಂವೇದನೆಯೇ ಇಲ್ಲದಿರುವುದು ದುರ್ದೈವ’ ಎಂದು ಕಿಡಿಕಾರಿದರು.

ಜಮ್ಮು ಮತ್ತು ಕಾಶ್ಮೀರಕ್ಕೆ ಬರುವ ವಿದೇಶಿ ಪ್ರವಾಸಿಗರನ್ನು ತಡೆಯುವುದು, ಅಲ್ಲಿನ ಯುವಕರಿಗೆ ಉದ್ಯೋಗ ಸಿಗಬಾರದು, ಅವರನ್ನು ಭಯೋತ್ಪಾದನೆಗೆ ಬಳಸಿಕೊಳ್ಳಬಹುದು ಎಂಬ ದುರುದ್ದೇಶದಿಂದ ಪ್ರವಾಸಿಗರ ಮೇಲೆ ದಾಳಿ ನಡೆಸಲಾಗಿದೆ ಎಂಬ ಮಾತು ಕೇಳಿ ಬರುತ್ತಿದೆ. ಮೋದಿ ಸರ್ಕಾರ ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಗಂಭೀರವಾಗಿ ಪರಿಗಣಿಸಿದ್ದು, ಎಲ್ಲಾ ಭಾರತೀಯರು ಸರ್ಕಾರದೊಂದಿಗೆ ಒಟ್ಟಾಗಿ ನಿಲ್ಲಬೇಕು. 370 ನೇ ವಿಧಿಯನ್ನು ರದ್ದುಪಡಿಸುವುದರ ಹಿಂದೆ, ಕಾಶ್ಮೀರವನ್ನು ಸಾಮಾನ್ಯ ಸ್ಥಿತಿಗೆ ತರುವ ಒಳ್ಳೆಯ ಉದ್ದೇಶವಿತ್ತು ಎಂದು ಹೇಳಿದರು.

siddaramaiah and vijayendra
Pahalgam terror attack: ಕೇಂದ್ರ ಗುಪ್ತಚರ ಸಂಸ್ಥೆಗಳ ವೈಫಲ್ಯವೇ ಕಾರಣ; ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಪರಮೇಶ್ವರ್!

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com