

ಬೆಂಗಳೂರು: ಡಿಸೆಂಬರ್ 8 ರಿಂದ ಬೆಳಗಾವಿಯಲ್ಲಿ ರಾಜ್ಯ ವಿಧಾನಸಭೆಯ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಡಿಸೆಂಬರ್ 9 ರಂದು ಸುವರ್ಣ ವಿಧಾನಸೌಧಕ್ಕೆ ಬಿಜೆಪಿ ಹೆಚ್ಚಿನ ಸಂಖ್ಯೆಯ ರೈತರೊಂದಿಗೆ ಮುತ್ತಿಗೆ ಹಾಕಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಶನಿವಾರ ಹೇಳಿದ್ದಾರೆ.
ರಾಜ್ಯಕ್ಕೆ ಸಂಬಂಧಿಸಿದ ವಿವಿಧ ಸಮಸ್ಯೆಗಳು ಮತ್ತು ಕಾಂಗ್ರೆಸ್ ಸರ್ಕಾರದ "ವೈಫಲ್ಯಗಳನ್ನು" ಎತ್ತಿ ತೋರಿಸುವ ಉದ್ದೇಶದಿಂದ ಈ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ವಿಜಯೇಂದ್ರ ಅವರು ತಿಳಿಸಿದ್ದಾರೆ.
ಇದೇ ವೇಳೆ ಅಧಿವೇಶನದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಬಗ್ಗೆ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಚರ್ಚಿಸಿಲ್ಲ ಎಂದು ವಿಜಯೇಂದ್ರ ಹೇಳಿದರು.
ವಿಧಾನಮಂಡಲದ ಚಳಿಗಾಲದ ಅಧಿವೇಶನ ಡಿಸೆಂಬರ್ 8 ರಿಂದ 19 ರವರೆಗೆ ಬೆಳಗಾವಿಯಲ್ಲಿ ನಡೆಯಲಿದೆ.
"ಸೋಮವಾರದಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ವಿರೋಧ ಪಕ್ಷಗಳಾದ ಬಿಜೆಪಿ-ಜೆಡಿ(ಎಸ್) ನಾಯಕರು ಮತ್ತು ನಾನು ಅಧಿವೇಶನಕ್ಕಾಗಿ ನಮ್ಮ ಕಾರ್ಯತಂತ್ರ ಬಗ್ಗೆ ವಿವರವಾಗಿ ಚರ್ಚಿಸಿದ್ದೇವೆ. ರಾಜ್ಯದ ಸಮಸ್ಯೆಗಳನ್ನು ಎತ್ತುವುದು, ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಎತ್ತಿ ತೋರಿಸುವುದು ಮತ್ತು ಉತ್ತರ ಕರ್ನಾಟಕ, ನೀರಾವರಿ ಹಾಗೂ ರೈತರಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಚರ್ಚಿಸಲಾಗುವುದು" ಎಂದು ವಿಜಯೇಂದ್ರ ಸುದ್ದಿಗಾರರಿಗೆ ತಿಳಿಸಿದರು.
ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕಕ್ಕೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಕೇವಲ ನೆಪ ಮಾತ್ರಕ್ಕೆ ಒಂದು ದಿನ ನಡೆಯುತ್ತವೆ. ಆದರೆ ಈ ಬಾರಿ ಅದನ್ನು ಗಂಭೀರವಾಗಿ ಪರಿಗಣಿಸಿ, ಅಧಿವೇಶನದ ಆರಂಭಿಕ ದಿನಗಳಲ್ಲಿಯೇ ಈ ಪ್ರದೇಶಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಕೈಗೆತ್ತಿಕೊಳ್ಳಲು ನಾವು ನಿರ್ಧರಿಸಿದ್ದೇವೆ" ಎಂದು ಅವರು ಹೇಳಿದರು.
ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಯದೆ ಉಳಿದಿದೆ. ಮೆಕ್ಕೆಜೋಳ ಖರೀದಿಯನ್ನು ಸರಿಯಾಗಿ ನಿರ್ವಹಿಸಲಾಗಿಲ್ಲ ಮತ್ತು ಒಟ್ಟು 54 ಲಕ್ಷ ಮೆಟ್ರಿಕ್ ಟನ್ಗಳಲ್ಲಿ ಕೇವಲ 5 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಮಾತ್ರ ರಾಜ್ಯ ಸರ್ಕಾರ ಖರೀದಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಆರೋಪಿಸಿದರು.
ಹೆಸರುಕಾಳು, ಕಾಳು ಮತ್ತು ಭತ್ತದ ಖರೀದಿಯೂ ಪ್ರಾರಂಭವಾಗಿಲ್ಲ. ರೈತರಿಗೆ ಪರಿಹಾರ ವಿತರಣೆಯಲ್ಲಿ ವಿಳಂಬವಾಗುತ್ತಿದೆ. ಈ ಎಲ್ಲಾ ಸಮಸ್ಯೆಗಳೊಂದಿಗೆ ಡಿಸೆಂಬರ್ 9 ರಂದು ಸುಮಾರು 15,000-20,000 ರೈತರನ್ನು ಒಟ್ಟುಗೂಡಿಸುವ ಮೂಲಕ ಬಿಜೆಪಿ ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯೋಜಿಸಿದೆ. ಈ ರೈತ ವಿರೋಧಿ ಸರ್ಕಾರವನ್ನು ನಿದ್ರೆಯಿಂದ ಎಬ್ಬಿಸುತ್ತೇವೆ. ನಾವು ಈ ವಿಷಯಗಳನ್ನು ವಿಧಾನಸಭೆಯ ಒಳಗೆಯೂ ಪ್ರಸ್ತಾಪಿಸುತ್ತೇವೆ" ಎಂದರು.
Advertisement