

ಬೆಂಗಳೂರು: ಮಂಡ್ಯ ಜಿಲ್ಲೆಗೆ ನಾನು ಕೊಟ್ಟಿದ್ದನ್ನು ಹೇಳುತ್ತೇನೆ. ನೀವು ರೈತರಿಗೆ ಏನು ಕೊಡುಗೆ ಕೊಟ್ಟಿದ್ದೀರಿ ಎಂಬುದನ್ನು ಹೇಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿಯವರು ಸವಾಲು ಹಾಕಿದ್ದಾರೆ.
ನವದೆಹಲಿಯ ತಮ್ಮ ಗೃಹ ಕಚೇರಿಯಲ್ಲಿ ಸೋಮವಾರ ಬೆಳಗ್ಗೆ ಮಾಧ್ಯಮಗೋಷ್ಠಿಯಲ್ಲಿ ಅವರು ಮಾತನಾಡಿದ ಅವರು, ಮಂಡ್ಯಕ್ಕೆ ನಿಮ್ಮ ಕೊಡುಗೆ ಏನು? ಹಿಂದಿನ ಐದು ವರ್ಷ ಆಡಳಿತದಲ್ಲಿ 200ಕ್ಕೂ ಹೆಚ್ಚು ರೈತರು ಮಂಡ್ಯದಲ್ಲಿ ಸರಣಿ ಆತ್ಮಹತ್ಯೆ ಮಾಡಿಕೊಂಡಿದ್ದೇ ನಿಮ್ಮ ಕೊಡುಗೆ. ಅಂತಹ ಕಷ್ಟಕಾಲದಲ್ಲಿ ನಾನು ಅಧಿಕಾರಕ್ಕೆ ಬಂದ ಮೇಲೆ ಅದೇ ಜಿಲ್ಲೆಯ ರೈತರ 900 ಕೋಟಿ ಸಾಲ ಮನ್ನಾ ಮಾಡಿದೆ. ಇದಕ್ಕಿಂತ ಕೊಡುಗೆ ಬೇಕಾ? ಎಂದು ಪ್ರಶ್ನಿಸಿದರು.
ನಿಮ್ಮ ಕಾಲದಲ್ಲಿ ರೈತರ ಜೀವ ಹೋಯಿತು, ನನ್ನ ಕಾಲದಲ್ಲಿ ಜೀವ ಉಳಿಯಿತು. ಇದು ನಿಮಗೆ ಗೊತ್ತಿರಲಿ ಎಂದು ತಿರುಗೇಟು ನೀಡಿದರು.
ಮಂಡ್ಯ ಜಿಲ್ಲೆಗೆ ನಾನು ಕೊಟ್ಟಿದ್ದನ್ನು ಪಟ್ಟಿ ಮಾಡಿ ಹೇಳುತ್ತೇನೆ, ಐದು ವರ್ಷ ಮುಖ್ಯಮಂತ್ರಿ ಆಗಿದ್ದಾಗ ನೀವೇನು ಕೊಟ್ಟಿದ್ದೀರಿ ಎಂಬುದನ್ನು ಹೇಳಿ ಎಂದು ಸವಾಲು ಹಾಕಿದರು.
ರಾಜ್ಯದಲ್ಲಿ ರೈತರ ಪರಿಸ್ಥಿತಿ ಎಲ್ಲಿಗೆ ಬಂದಿದೆ ಎಂಬುದನ್ನು ನೋಡಿ. ಪ್ರವಾಹ, ಮಳೆಯಲ್ಲಿ ಜನ ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದರೆ ನೀವು ಮೋಜು ಮಸ್ತಿ ಮಾಡುತ್ತಿದ್ದೀರಿ. ಕಲ್ಯಾಣ ಕರ್ನಾಟಕದಲ್ಲಿ ತೊಗರಿ ಬೆಳೆಗಾರರ ಪರಿಸ್ಥಿತಿ ಏನಾಗಿದೆ? ತೊಗರಿ ದರ ಕುಸಿದಿದೆ. ಅದಕ್ಕೆ ಏನು ಮಾಡಿದ್ದೀರಿ?
ಈವರೆಗೆ ತೊಗರಿ ಖರೀದಿ ಕೇಂದ್ರಗಳನ್ನು ತೆರೆದಿಲ್ಲ. ಸರಿಯಾದ ಸಮಯದಲ್ಲಿ ರಾಜ್ಯ ಸರ್ಕಾರ ಮಧ್ಯಪ್ರವೇಶ ಮಾಡಿ ರೈತರ ನೆರವಿಗೆ ಬರಬೇಕಿತ್ತು, ಬಂದಿಲ್ಲ ಯಾಕೆ? ಕೇಂದ್ರ ಸರ್ಕಾರ ರಾಜ್ಯಕ್ಕೆ ಪರಿಶೀಲನಾ ತಂಡ ಕಳುಹಿಸಿ ಎನ್ನುತ್ತಾರೆ. ನಾಲ್ಕು ತಿಂಗಳ ಬಳಿಕ ಇವರಿಗೆ ಜ್ಞಾನೋದಯ ಆಗಿದೆ. ಈಗ ಕೇಂದ್ರ ತಂಡ ರಾಜ್ಯಕ್ಕೆ ಬಂದರೆ ಏನು ವರದಿ ಕೊಡುತ್ತಾರೆ? ಎಂದು ಪ್ರಶ್ನಿಸಿದರು.
ಇದೇ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ʼನೀರಿನ ಹೆಜ್ಜೆʼ ಪುಸ್ತಕದ ಕುರಿತು ವ್ಯಂಗ್ಯವಾಡಿದ ಅವರು, ಯಾರೋ ಬರೆದಿರುವ ಆ ಪುಸ್ತಕ ಅದು. ಕೇವಲ ಕಟ್ ಅ್ಯಂಡ್ ಪೇಸ್ಟ್ ಅಷ್ಟೇ. ಬೇರೆ ಯಾವುದೋ ಪುಸ್ತಕದಲ್ಲಿ ಬರೆದಿರುವುದನ್ನೇ ಕತ್ತರಿಸಿ ಈ ಪುಸ್ತಕದಲ್ಲಿ ಅಂಟಿಸಿದ್ದಾರೆ. ನನಗೆ ಈ ಪುಸ್ತಕವನ್ನು ಯಾರೋ ತಂದುಕೊಟ್ಟರು. ಸಾಮಾನ್ಯವಾಗಿ ಯಾವುದೇ ಪುಸ್ತಕವಾದರೂ ಅದನ್ನು ಆಸಕ್ತಿಯಿಂದ ಓದುತ್ತೇನೆ. ಆದರೆ, ಈ ಪುಸ್ತಕ ನೋಡಿದಾಗ ಇಲ್ಲಿರುವುದು ಅವರ ಹೆಜ್ಜೆಗಳಲ್ಲ, ಯಾರದೋ ಹೆಜ್ಜೆಗಳನ್ನು ನನ್ನ ಹೆಜ್ಜೆಗಳು ಎಂದು ತೋರಿಸುವ ಕಸರತ್ತು ಮಾಡಿದ್ದಾರೆ ಎಂದು ಆರೋಪಿಸಿದರು.
ಮೇಕೆದಾಟು ಯೋಜನೆ ಕುರಿತು ಮಾತನಾಡಿ, ಮೇಕೆದಾಟು ಯೋಜನೆ ಬಗ್ಗೆ ಜನರನ್ನು ಯಾಮಾರಿಸುವುದಕ್ಕೆ ನಮ್ಮ ನೀರು- ನಮ್ಮ ಹಕ್ಕು ಎಂದು ಪಾದಯಾತ್ರೆ ಮಾಡಿದರು. ಆ ಹೆಸರಿನಲ್ಲಿ ಅವರು ಅಧಿಕಾರಕ್ಕೆ ಬಂದರು. ಮೇಕೆದಾಟು ಮಾತ್ರ ಇದ್ದಲ್ಲಿಯೇ ಇದೆ. ಸುಪ್ರೀಂಕೋರ್ಟ್ ಕೇಂದ್ರಿಯ ಜಲ ಆಯೋಗದ (CWC) ಹೋಗಿ ವಾದ ಮಂಡಿಸಿ ಎಂದು ಹೇಳಿದ್ದಾರೆ. ತಮಿಳುನಾಡಿನಲ್ಲಿ ಅಧಿಕಾರ ನಡೆಸುತ್ತಿರುವವರು ಇವರು ರಾಜಕೀಯ ಪಾರ್ಟನರ್ʼ ಗಳೇ ಆಗಿದ್ದಾರೆ. ಇವರು ಹೋಗಿ ಕುಳಿತು ಮಾತನಾಡಬೇಲ್ಲವೇ? ಎಂದು ಹೇಳಿದರು.
Advertisement