

ಬೆಂಗಳೂರು: ಅಧಿಕಾರ ಹಂಚಿಕೆಯ ಕುರಿತು ಗಂಭೀರ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೈಕಮಾಂಡ್ ನಾಯಕರು ಆಯೋಜಿಸಿದ್ದ ಭೋಜನಕೂಟದಲ್ಲಿ ಭಾಗಿಯಾಗಿದ್ದು, ಹಲವರ ಹುಬ್ಬೇರುವಂತೆ ಮಾಡಿದೆ.
ದೆಹಲಿಯಲ್ಲಿ ಭಾನುವಾರ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಲು ಆಗಮಿಸಿದ್ದ ಪ್ರಮುಖರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೋಜನ ವ್ಯವಸ್ಥೆ ಮಾಡಿದ್ದರು. ಅದರಲ್ಲಿ ಆಯ್ದ ನಾಯಕರಿಗೆ ಮಾತ್ರ ಬೋಜನ ಕೂಟಕ್ಕೆ ಆಹ್ವಾನ ನೀಡಲಾಗಿತ್ತು. ಭೋಜನಕೂಟದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭಾಗಿಯಾಗಿದ್ದರು.
ಸಿದ್ದರಾಮಯ್ಯ ಅವರ ಅನುಪಸ್ಥಿತಿಯಲ್ಲಿ ಈ ಭೋಜನಕೂಟ ನಡೆದಿದ್ದು, ಹೈಕಮಾಂಡ್ ನಾಯಕರು ಹಾಗೂ ಡಿಕೆ.ಶಿವಕುಮಾರ್ ನಡುವಿನ ಮಾತುಕತೆ ಕುರಿತು ಕುತೂಹಲಗಳು ಶುರುವಾಗಿದೆ.
ಕರ್ನಾಟಕ ಭವನದಲ್ಲಿ ಹಲವಾರು ಶಾಸಕರು, ಸಚಿವರು ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಬಳಿಕ ಔತಣ ಕೂಟದಲ್ಲಿ ಭಾಗವಹಿಸಿದ್ದ ಡಿ.ಕೆ.ಶಿವಕುಮಾರ್ ಅಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿದಂತೆ ಪ್ರಮುಖ ನಾಯಕರನ್ನು ಭೇಟಿ ಮಾಡಿದ್ದರು. ಈ ವೇಳೆ ಡಿಕೆ ಶಿವಕುಮಾರ್ ತಮ್ಮ ಪರವಾದ ವಾದವನ್ನು ವರಿಷ್ಠರಿಗೆ ತಲುಪಿಸಿದ್ದಾರೆ ಎಂದು ಮೂಲಗಳು ತಿಳಿಸುವೆ.
ಕಳೆದ ತಿಂಗಳು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರ ನಡುವೆ ಅಧಿಕಾರ ಹಂಚಿಕೆಯ ಸಂಬಂಧಪಟ್ಟಂತೆ ಬಾರಿ ಚರ್ಚೆಗಳು ನಡೆಯುತ್ತಿದ್ದವು. ಪರಿಸ್ಥಿತಿ ವಿಪರೀತಕ್ಕೆ ತಲುಪಿದರಿಂದಾಗಿ ಹೈಕಮಾಂಡ್ ನಾಯಕರು ಮಧ್ಯ ಪ್ರವೇಶ ಮಾಡಿ ಸೂಚನೆ ನೀಡಿದ್ದರು. ಅದರಂತೆ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವೆ ಎರಡು ಉಪಹಾರ ಕೂಟಗಳು ನಡೆದವು. ಇದರೊಂದಿಗೆ ನಾಯಕರ ನಡುವೆ ಮನಸ್ತಾಪಕ್ಕೆ ತಾತ್ಕಾಲಿಕ ಕದನ ವಿರಾಮ ಘೋಷಣೆಯಾಗಿತ್ತು.
ಆದರೆ, ನಾಯಕರು ಮತ್ತು ಶಾಸಕರ ನಡುವೆ ಅಧಿಕಾರ ಹಂಚಿಕೆ ವಿವಾದ ತೀವ್ರ ಸ್ವರೂಪದಲ್ಲಿ ನಡೆಯುತ್ತಲೇ ಇತ್ತು. ಇದೀಗ ಕಾಂಗ್ರೆಸ್ ಹೈಕಮಾಂಡ್ ಆಯೋಜಿಸಿದ್ದ ಭೋಜನಕೂಟದಲ್ಲಿ ಡಿಕೆ.ಶಿವಕುಮಾರ್ ಅವರು ಏಕಾಂಗಿಯಾಗಿ ಭಾಗಿಯಾಗಿರುವುದು ಭಿನ್ನಾಭಿಪ್ರಾಯಕ್ಕೆ ಎಡೆ ಮಾಡಿಕೊಡುತ್ತದೆಯೇ ಎಂಬ ಅನುಮಾನಗಳನ್ನು ಹುಟ್ಟು ಹಾಕಿದೆ.
2023ರಲ್ಲಿ ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ಬಂದಾಗ ಅಧಿಕಾರ ಹಂಚಿಕೆ ಒಪ್ಪಂದ ನಡೆದಿದ್ದರಿಂದ ಸಿಎಂ ಹುದ್ದೆ ಬದಲಾವಣೆಯ ಬಗ್ಗೆ ಹೈಕಮಾಂಡ್ ಇದೀಗ ಅಂತಿಮ ನಿರ್ಧಾರ ತೆಗೆದುಕೊಳ್ಳಬೇಕಾಗಿದೆ.
ಆದರೆ, ಸಿದ್ದರಾಮಯ್ಯ ಮತ್ತು ಶಿವಕುಮಾರ್ ಇಬ್ಬರಿಗೂ ಒಂದೇ ಬಾರಿಗೆ ಔತಣಕೂಟಲ್ಲಿ ಅವಕಾಶ ನೀಡದಿರುವುದು ಊಹಾಪೋಹಗಳಿಗೆ ಕಾರಣವಾಗಿದೆ.
ಏತನ್ಮಧ್ಯೆ ದೆಹಲಿಯಲ್ಲಿ ನಡೆದ ರ್ಯಾಲಿ ಹೆಸರಿಗೆ ಮತಗಳ್ಳತನದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯೇ ಆಗಿದ್ದರೂ, ಒಂದು ರೀತಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರು ತಮ್ಮ ಬಲ ಪ್ರದರ್ಶಿಸುವ ವೇದಿಕೆಯಂತೆ ಕಂಡು ಬಂದಿತ್ತು.
ಡಿಕೆ.ಶಿವಕುಮಾರ್ ಅವರ ಸಹಾಯಕ ಮತ್ತು ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಅವರು 2026 ಜನವರಿ.6ರಂದು ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರೆಂದು ಹೇಳಿದ್ದರು. ಈ ಹೇಳಿಕೆಯನ್ನಿಟ್ಟುಕೊಂಡು ಡಿಕೆ.ಶಿವಕುಮಾರ್ ಅವರ ಬಂಬಲಿಕರು ಘೋಷಣೆಗಳನ್ನು ಕೂಗಿದ್ದರು. ಇದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ಬೆಂಬಲಿಗರು ಕೂಡ ಐದು ವರ್ಷ ಅಧಿಕಾರ ಪೂರ್ಣಗೊಳಿಸುತ್ತಾರೆ ಎಂದು ಘೋಷಣೆ ಕೂಗಿದ್ದರು.
ಈ ನಡುವೆ ಇಕ್ಬಾಲ್ ಹುಸೇನ್ ಮತ್ತು ಸಿಎಂ ಪುತ್ರ ಡಾ. ಯತೀಂದ್ರ ಹೇಳಿಕೆಗಳು ಅಪ್ರಸ್ತುತ ಪಕ್ಷದ ಹೈಕಮಾಂಡ್ ನಾಯಕತ್ವ ಬದಲಾವಣೆಯ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹೇಳಿದ್ದಾರೆ.
ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಅವರು ಇಕ್ಬಾಲ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಲು ನಿರಾಕರಿಸಿದರು. ಖರ್ಗೆ ಸೇರಿದಂತೆ ಹೈಕಮಾಂಡ್ ಪಕ್ಷದ ಸದಸ್ಯರು ನಾಯಕತ್ವ ಬದಲಾವಣೆಯ ಬಗ್ಗೆ ಮಾತನಾಡದಂತೆ ಸೂಚನೆ ನೀಡಿದೆ ಎಂದು ಹೇಳಿದರು.
Advertisement