'ಹೈಕಮಾಂಡ್ ಹೇಳುವವರೆಗೂ ನಾನೇ ಸಿಎಂ': ಬೆಳಗಾವಿ ಕಲಾಪದಲ್ಲಿ ಗುಡುಗಿದ ಸಿದ್ದರಾಮಯ್ಯ; ಕಾಲೆಳೆದ ವಿಪಕ್ಷ; Video

ವಿಧಾನಸಭೆಯಲ್ಲಿ ಅನುದಾನ ಹಂಚಿಕೆ ವಿಚಾರ ಪ್ರಸ್ತಾಪಿಸಿ ಕಾಂಗ್ರೆಸ್ ಪಕ್ಷದ ಶಾಸಕ ಕುಣಿಗಲ್ ರಂಗನಾಥ್ ಅವರೇ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದರು.
CM Siddaramaiah speaks in Belagavi session
ಬೆಳಗಾವಿ ಅಧಿವೇಶನದಲ್ಲಿ ಇಂದು ಮಾತನಾಡಿದ ಸಿಎಂ ಸಿದ್ದರಾಮಯ್ಯ
Updated on

ಬೆಂಗಳೂರು: ರಾಜ್ಯ ಆಡಳಿತಾರೂಢ ಕಾಂಗ್ರೆಸ್ ನ ಸಿಎಂ ಕುರ್ಚಿ ಕದನ ಇಂದು ಬೆಳಗಾವಿ ಅಧಿವೇಶನದಲ್ಲಿಯೂ ಪ್ರತಿಧ್ವನಿಸಿದೆ. ಶಾಸಕರ ಕ್ಷೇತ್ರಕ್ಕೆ ಅನುದಾನ ಬಿಡುಗಡೆ ವಿಚಾರವಾಗಿ ಆರಂಭವಾದ ಮಾತು ಸಿಎಂ ಕುರ್ಚಿ ಗದ್ದಲದ ಮಾತಿನ ಚಕಮಕಿಯೊಂದಿಗೆ ನಿಂತಿತು.

ಇಂದು ಬೆಳಗಾವಿ ಸದನ ಕಲಾಪದಲ್ಲಿ ಆಗಿದ್ದೇನು?

ವಿಧಾನಸಭೆಯಲ್ಲಿ ಅನುದಾನ ಹಂಚಿಕೆ ವಿಚಾರ ಪ್ರಸ್ತಾಪಿಸಿ ಕಾಂಗ್ರೆಸ್ ಪಕ್ಷದ ಶಾಸಕ ಕುಣಿಗಲ್ ರಂಗನಾಥ್ ಅವರೇ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಡೆಗೆ ಬೆರಳು ತೋರಿಸಿ, ಮಧುಗಿರಿಗೆ 100 ಕೋಟಿ ಅನುದಾನ ಕೊಡುತ್ತೀರಿ, ಆದರೆ ನನ್ನ ಕ್ಷೇತ್ರಕ್ಕೆ ಏಕೆ ಅನುದಾನ ನೀಡುತ್ತಿಲ್ಲ? ನನ್ನ ಕ್ಷೇತ್ರಕ್ಕೆ ಹಿಂದೆ ಮಂಜೂರಾಗಿದ್ದ ಒಂದು ಸಾವಿರ ಕೋಟಿ ಅನುದಾನವನ್ನು ತಡೆ ಹಿಡಿಯಲಾಗಿದೆ ಎಂದು ಆಕ್ರೋಶದಿಂದ ಪ್ರಶ್ನಿಸಿದರು. ರಂಗನಾಥ್ ಅವರು ಡಿಸಿಎಂ ಡಿಕೆ ಶಿವಕುಮಾರ್ ಅವರ ಆಪ್ತರೆಂದೇ ಗುರುತಿಸಿಕೊಂಡಿದ್ದು, ಅವರ ಈ ಪ್ರಶ್ನೆಯು ಸದನದಲ್ಲಿ ಸಿಎಂ ಕುರ್ಚಿ ಕಾದಾಟದ ಕಡೆಗೆ ಹೊರಳಿತು.

ಐದು ವರ್ಷಗಳ ಕಾಲ ನಾನೇ ಸಿಎಂ: ಸಿದ್ದರಾಮಯ್ಯ

ಶಾಸಕ ರಂಗನಾಥ್ ಅವರ ಆರೋಪಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಅನುದಾನ ಹೆಚ್ಚು ಕಡಿಮೆಯಾಗಿದ್ದರೆ ಪರಿಶೀಲಿಸೋಣ, ಯಾರಿಗೂ ಅನುದಾನ ಕಡಿತ ಮಾಡಿಲ್ಲ ಎಂದು ಸಮಜಾಯಿಷಿ ನೀಡಿದರು.

ಈ ವೇಳೆ, ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಮಧ್ಯಪ್ರವೇಶಿಸಿ, ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟ ಕಾರಣದಿಂದ ರಂಗನಾಥ್‌ ಅವರಿಗೆ ಉರಿಯುತ್ತಿದೆ ಎಂದು ಲೇವಡಿ ಮಾಡಿದರು.

ಇದಕ್ಕೆ ಕೌಂಟರ್ ಕೊಟ್ಟ ಸಿಎಂ ಸಿದ್ದರಾಮಯ್ಯ, 'ಐದು ವರ್ಷ ನಾವೇ ಇರುತ್ತೇವೆ. ಜನರು 140 ಶಾಸಕರನ್ನು ಆಶೀರ್ವಾದ ಮಾಡಿದ್ದಾರೆ. ಐದು ವರ್ಷ ನಾವೇ ಇರುತ್ತೇವೆ, 2028ಕ್ಕೂ ನಾವೇ ಅಧಿಕಾರಕ್ಕೆ ಬರುತ್ತೇವೆ. ಮುಂದೆಯೂ ನಿಮಗೆ ಜನ ಅವಕಾಶ ಕೊಡಲ್ಲ' ಟಾಂಗ್ ಕೊಟ್ಟರು. ಈ ವೇಳೆ ಗೃಹ ಸಚಿವ ಡಾ ಜಿ ಪರಮೇಶ್ವರ್ ಸಹ '140 ಶಾಸಕರು ಸಪೋರ್ಟ್ ಮಾಡಿದ್ದಾರೆ. ಅದಕ್ಕೆ ಐದು ವರ್ಷ ನಾನೇ ಅಂತಿದ್ದಾರೆ' ಎಂದು ಸಿಎಂ ಪರ ನಿಂತರು.

CM Siddaramaiah speaks in Belagavi session
ಕುರ್ಚಿ ಕದನ ನಡುವಲ್ಲೇ ವರಿಷ್ಠರಿಂದ ಭೋಜನಕೂಟ: ಡಿಕೆಶಿ ಭಾಗಿ, ಹಲವರ ಹುಬ್ಬೇರಿಸಿದ ಸಿದ್ದರಾಮಯ್ಯ ಅನುಪಸ್ಥಿತಿ..!

'ಉರಿತಿರೋದಕ್ಕೆ ಉಪ್ಪಾಕಬೇಡಿ': ಸಿಎಂ-ವಿಪಕ್ಷಗಳ ನಡುವೆ ವಾಕ್ಸಮರ

ಶಾಸಕ ರಂಗನಾಥ್ ಆಕ್ರೋಶದಿಂದ ಹೇಳುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದರು. ಆಗ ಸಿಎಂ , 'ಉರಿತೀರೋದಕ್ಕೆ ಉಪ್ಪು ಹಾಕಬೇಡ' ಎಂದರು. ಆಗ ಅಶೋಕ್ 'ಹಾಗಾದರೆ ಉರಿಯುತ್ತಿದೆಯೇ?' ಎಂದು ಲೇವಡಿ ಮಾಡಿದರು.

'ಅದು ಗಾದೆ ಮಾತು ಕಣಯ್ಯ' ಎಂದ ಸಿಎಂ ಮಾತಿಗೆ, ಸುನಿಲ್ ಕುಮಾರ್ 'ಗಾದೆ ಮಾತೋ.. ಮನಸ್ಸಿನ ಮಾತೋ?' ಎಂದು ಪ್ರಶ್ನಿಸಿದರು. ಈ ವೇಳೆ ಸಿಎಂ ಮಾತನಾಡಿ, 'ನೀವು ಎಷ್ಟೇ ಉಪ್ಪಾಕಿದರೂ, ನಮ್ಮ ಶಾಸಕರು ಐದು ವರ್ಷ ಇರಿ ಎಂದು ಜನ ಆಶೀರ್ವಾದ ಮಾಡಿದ್ದಾರೆ. ಐದು ವರ್ಷ ನಾವೇ ಇರುತ್ತೇವೆ' ಎಂದು ಖಚಿತಪಡಿಸಿದರು.

ಯತ್ನಾಳ್ 'ಎಷ್ಟು ಸೀಟು ಅನ್ನೋದು ಮುಖ್ಯ ಅಲ್ಲ, ಐದು ವರ್ಷಗಳ ಕಾಲ ಸಿಎಂ ಆಗೋದು ಮುಖ್ಯ' ಎಂದು ಕೆಣಕಿದಾಗ, ಸಿದ್ದರಾಮಯ್ಯ ಸ್ಪಷ್ಟವಾಗಿ, 'ನಾನೇ ಮುಖ್ಯಮಂತ್ರಿ, ಈಗಲೂ ನಾನೇ ಮುಖ್ಯಮಂತ್ರಿ' ಎಂದು ಘೋಷಿಸಿದರು. ಸುನಿಲ್ ಕುಮಾರ್ ಮತ್ತೆ ಎದ್ದು ನಿಂತು 'ಮುಂದೆಯೂ ನಾನೇ ಮುಖ್ಯಮಂತ್ರಿ ಅಂತ ಹೇಳಿ' ಎಂದು ಕಾಲೆಳೆದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com