

ಹಾಸನ: ಕಾಂಗ್ರೆಸ್ ಸರ್ಕಾರದ ಕಠಿಣ ನಿರ್ಧಾರಗಳು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ರಾಜಕೀಯ ಜೀವನವನ್ನು ನಾಶಪಡಿಸಿತು ಎಂದು ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿಯವರು ಭಾನುವಾರ ಹೇಳಿದರು.
ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿಗೆ ಹೋಗುವ ಮಾರ್ಗಮಧ್ಯೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ ಅವರು, ನನ್ನ ತಂದೆ ಪ್ರಧಾನಿ, ಮುಖ್ಯಮಂತ್ರಿ ಮತ್ತು ಕೇಂದ್ರ ಸಚಿವರಾಗಿ ರಾಜ್ಯ ಮತ್ತು ರಾಷ್ಟ್ರ ಎರಡಕ್ಕೂ ಸೇವೆ ಸಲ್ಲಿಸಿದ್ದಾರೆ. ಆದರೆ, ಕಾಂಗ್ರೆಸ್ ಕೈಗೊಂಡ ತುರ್ತು ಮತ್ತು ಕಠಿಣ ನಿರ್ಧಾರಗಳ ಕಾರಣ ಅವರು ಈ ಸ್ಥಾನಗಳಲ್ಲಿ ದೀರ್ಘಕಾಲ ಸೇವೆ ಮಾಡಲು ಸಾಧ್ಯವಾಗಲಿಲ್ಲ ಎಂದು ಹೇಳಿದರು.
ಕಾಂಗ್ರೆಸ್ ನಾಯಕರು ವಿವಿಧ ಹುದ್ದೆಗಳಲ್ಲಿ ದೇವೇಗೌಡರಿಗೆ ರಾಜ್ಯವನ್ನಾಗಲಿ, ದೇಶವನ್ನಾಗಲಿ ಸಂಪೂರ್ಣವಾಗಿ ಆಡಳಿತ ನಡೆಸಲು ಅವಕಾಶ ನೀಡಲಿಲ್ಲ ಎಂದು ಆರೋಪಿಸಿದರು.
ಇದೇವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮೋದಿ ವಿರುದ್ಧ ನಿರಂತರವಾಗಿ ಟೀಕೆ ಮಾಡುತ್ತಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು, ರಾಜ್ಯದ ಪ್ರಸ್ತುತ ಆರ್ಥಿಕ ಸ್ಥಿತಿಗತಿಯ ಕುರಿತು ಶ್ವೇತಪತ್ರವನ್ನು ಹೊರಡಿಸಬೇಕೆಂದು ಒತ್ತಾಯಿಸಿದರು.
ಜೊತೆಗೆ ಕಳೆದ ಎರಡೂವರೆ ವರ್ಷಗಳಲ್ಲಿ ಕೃಷಿ ಕ್ಷೇತ್ರಕ್ಕೆ ಎಷ್ಟು ಅನುದಾನ ಬಿಡುಗಡೆ ಮಾಡಲಾಗಿದೆ ಎಂಬ ವಿವರಗಳನ್ನು ಸಹ ನೀಡಬೇಕೆಂದು ಆಗ್ರಹಿಸಿದ್ದಾರೆ.
ರಾಜ್ಯ ಸರ್ಕಾರವೇ ಪರಿಹರಿಸಬೇಕಾದ ಹಲವು ವಿಷಯಗಳಿಗೆ ಕೇಂದ್ರ ಸರ್ಕಾರವನ್ನು ಹೊಣೆಗಾರನಾಗಿಸಲಾಗುತ್ತಿದೆ. ಜಿಎಸ್ಟಿ ಮತ್ತು ಕನಿಷ್ಠ ಬೆಂಬಲ ಬೆಲೆ (MSP) ವಿಷಯಗಳ ಕುರಿತು ಸಿದ್ದರಾಮಯ್ಯಅವರು ಕೇಂದ್ರವನ್ನು ದೋಷಿಸುವುದು ಸರಿಯಲ್ಲ ಎಂದರು.
ಏತನ್ಮಧ್ಯೆ ಇತ್ತೀಚೆಗೆ ನವದೆಹಲಿಯಲ್ಲಿರುವ ತಮ್ಮ ನಿವಾಸಕ್ಕೆ ಬಿಜೆಪಿ ಬಂಡಾಯ ನಾಯಕರು ಭೇಟಿ ನೀಡಿದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪಕ್ಷದೊಳಗಿನ ನಾಯಕತ್ವ ಬದಲಾವಣೆಯ ಬಗ್ಗೆ ಅವರಿಗೆ ವಿಭಿನ್ನ ಅಭಿಪ್ರಾಯಗಳಿವೆ. ಅಂತಿಮ ತೀರ್ಮಾನವನ್ನು ಪಕ್ಷದ ಹೈಕಮಾಂಡ್ ತೆಗೆದುಕೊಳ್ಳಲಿದೆ. ಆದರೆ, ಭೇಟಿ ವೇಳೆ ಯಾವುದೇ ರಾಜಕೀಯ ವಿಚಾರ ಚರ್ಚೆಯಾಗಿಲ್ಲ. ಅವರು ಬಂದು ಒಂದು ಕಪ್ ಚಹಾ ಕುಡಿದು ಹೋಗಿದ್ದಾರೆ ಅಷ್ಟೇ ಎಂದು ಸ್ಪಷ್ಟಪಡಿಸಿದರು.
Advertisement