ದೆಹಲಿಯಲ್ಲಿ ಕೇಸರಿ ಕಮಾಲ್: ಇತರೆ ರಾಜ್ಯಗಳಲ್ಲೂ ಇದೇ ತಂತ್ರ ಪ್ರಯೋಗಕ್ಕೆ BJP ಮುಂದು

ಬಿಜೆಪಿ ಅತ್ಯಂತ ಸಂಘಟಿತ ರೀತಿಯಲ್ಲಿ ಪ್ರಚಾರ ನಡೆಸಿದ್ದು, ದೆಹಲಿ ಜನತೆಗೆ ಶುದ್ಧ ಆಡಳಿತ ನೀಡುವ ಭರವಸೆ ನೀಡಿತ್ತು. ಇದು ಜನರನ್ನು ಆಕರ್ಷಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ನವದೆಹಲಿ/ಮೈಸೂರು: ತೀವ್ರ ಕುತೂಹಲ ಕೆರಳಿಸಿದ್ದ ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, ಸತತ 10 ವರ್ಷಗಳಿಂದ ಅಧಿಕಾರದಲ್ಲಿದ್ದ ಆಮ್ ಆದ್ಮಿ ಪಕ್ಷ ಸೋಲು ಕಂಡಿದ್ದರೆ, ದೇಶದ ಇತರೆ ರಾಜ್ಯಗಳಲ್ಲಿ ಗೆಲವು ಸಾಧಿಸಿದ್ದರೂ ಗಗನಕುಸುಮವಾಗಿಯೇ ಉಳಿದಿದ್ದ ದೆಹಲಿಯಲ್ಲಿ ಕೊನೆಗೂ ಬಿಜೆಪಿ ಗೆಲುವು ಸಾಧಿಸಿದೆ. ಹೀಗಾಗಿ, ರಾಜ್ಯ ಸೇರಿದಂತೆ ಇತರೆ ರಾಜ್ಯಗಳಲ್ಲಿರುವ ಬಿಜೆಪಿ ಕಚೇರಿಗಳಲ್ಲಿ ವಿಜಯೋತ್ಸವ ಮುಗಿಲು ಮುಟ್ಟಿದೆ.

ಪಕ್ಷದ ಕಚೇರಿಗಳ ಮುಂದೆ ಬಿಜೆಪಿ ಪಕ್ಷದ ಕಾರ್ಯಕರ್ತರು ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರ ಪರವಾಗಿ ಘೋಷಣೆಗಳನ್ನು ಕೂಗುತ್ತಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿರುವ ಬಿಜೆಪಿ ಕಚೇರಿಯಲ್ಲಿ ಪಟಾಕಿ ಸಿಡಿಸಿ, ಸಿಹಿತಿಂಡಿಗಳನ್ನು ವಿತರಿಸಿ ವಿಜಯೋತ್ಸವ ಆಚರಿಸಿದ್ದಾರೆ.

ದೆಹಲಿ ಫಲಿತಾಂಶ ಕುರಿತು ಪ್ರತಿಕ್ರಿಯೆ ನೀಡಿರುವ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು, ಸುಮಾರು 27 ವರ್ಷಗಳ ಬಳಿಕ ದೆಹಲಿಯಲ್ಲಿ ನಮ್ಮ ಪಕ್ಷ ಚುನಾವಣೆಯಲ್ಲಿ ಗೆಲುವು ಸಾಧಿಸಿರುವುದು ಸಂತೋಷವಾಗಿದೆ. ದೆಹಲಿಯ ಜನತೆ ಪ್ರಧಾನಿ ಮೋದಿಯವರ ಅಭಿವೃದ್ಧಿ ಕಾರ್ಯಗಳನ್ನು ಪರಿಗಣಿಸಿ ನಮ್ಮ ಪಕ್ಷದ ನಾಯಕರಿಗೆ ಮತಗಳನ್ನು ನೀಡಿದ್ದಾರೆ. ಇದರಿಂದ ದೆಹಲಿಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ದೆಹಲಿಯಲ್ಲಿ ಇಂದು ಕಮಲ ಅರಳಿರುವುದಕ್ಕೆ ಕಾರಣವಾಗಿರುವ ಪ್ರಧಾನಿ ಮೋದಿ, ಪಕ್ಷದ ಸದಸ್ಯರು ಮತ್ತು ಕಾರ್ಯಕರ್ತರಿಗೆ ಧನ್ಯವಾದಗಳನ್ನು ತಿಳಿಸಲು ಇಚ್ಛಿಸುತ್ತೇನೆ. ಇನ್ನೂ ದೇಶದ ಮಹಾರಾಷ್ಟ್ರ, ಹರಿಯಾಣ ಮತ್ತು ಜಮ್ಮು ಕಾಶ್ಮೀರದ ಚುನಾವಣೆಗಳಲ್ಲಿಯೂ ಸಹ ಒಂದು ರೀತಿ ಸಕಾರಾತ್ಮಕವಾದ ಪ್ರತಿಕ್ರಿಯೆ ನೀಡಿದ್ದಾರೆ. ಹೀಗಾಗಿ ದೇಶದ ಜನತೆ ಪ್ರಧಾನಿ ಮೋದಿ ಅವರ ಜನಾಭಿವೃದ್ಧಿ ಕಾರ್ಯಗಳನ್ನು ಮೆಚ್ಚಿದ್ದಾರೆ ಎಂದು ಹೇಳಿದರು.

ಬಿಜೆಪಿ ಶಾಸಕ ಶ್ರೀವತ್ಸ ಅವರು ಮಾತನಾಡಿ, ಬಿಜೆಪಿ ಅತ್ಯಂತ ಸಂಘಟಿತ ರೀತಿಯಲ್ಲಿ ಪ್ರಚಾರ ನಡೆಸಿದ್ದು, ದೆಹಲಿ ಜನತೆಗೆ ಶುದ್ಧ ಆಡಳಿತ ನೀಡುವ ಭರವಸೆ ನೀಡಿತ್ತು. ಇದು ಜನರನ್ನು ಆಕರ್ಷಿಸಿದೆ. ಭವಿಷ್ಯದಲ್ಲಿ ಚುನಾವಣೆ ನಡೆಯುವ ಇತರ ರಾಜ್ಯಗಳಲ್ಲಿಯೂ ಇದೇ ರೀತಿಯ ತಂತ್ರವನ್ನು ಅಳವಡಿಸಿಕೊಳ್ಳಲಾಗುವುದು ಎಂದು ಹೇಳಿದರು.

ಸಂಗ್ರಹ ಚಿತ್ರ
ಬಿಜೆಪಿ ಸರ್ವಾಧಿಕಾರದ ವಿರುದ್ಧ ಹೋರಾಟ ಮುಂದುವರಿಸುತ್ತೇವೆ: ದೆಹಲಿ ಸಿಎಂ ಅತಿಶಿ

ಅರವಿಂದ್‌ ಕೇಜ್ರಿವಾಲ್‌ ಜೈಲಿಗೆ ಹೋದರೂ ಜೈಲಿನಲ್ಲಿಯೇ ಆಡಳಿತ ನಡೆಸುವ ಮೂಲಕ ಪ್ರಜಾಪ್ರಭುತ್ವದ ವ್ಯವಸ್ಥೆ ವಿರುದ್ಧವಾಗಿ ನಡೆದುಕೊಂಡರು. ಇದು ಪ್ರಜಾಪ್ರಭುತ್ವದ ನೀತಿಗೆ ವಿರುದ್ಧವಾಗಿದೆ. ಹಾಗೆಯೇ, ಎಎಪಿ ಪಕ್ಷದ ವ್ಯಾಪಕ ಭ್ರಷ್ಟಚಾರದಿಂದ ನೊಂದಿದ್ದ ದೆಹಲಿ ಜನತೆ ಈ ಬಾರಿ ಬಿಜೆಪಿಗೆ ಅಧಿಕಾರ ನೀಡಿದ್ದಾರೆ ಎಂದು ತಿಳಿಸಿದರು.

ರಾಜ್ಯದಲ್ಲಿಯೂ ಭ್ರಷ್ಟಚಾರ ಆರೋಪ ಹೊತ್ತಿರುವವರ ನೇತೃತ್ವದ ಸರ್ಕಾರ ಆಡಳಿತ ನಡೆಸುತ್ತಿದೆ. ಮುಡಾ ನಿವೇಶನ ಹಂಚಿಕೆ ಹಗರಣದಲ್ಲಿ ನಂಬರ್ 1 ಆರೋಪಿಯಾಗಿರುವ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರವೂ ಭ್ರಷ್ಟಾಚಾರದ ಆರೋಪಗಳನ್ನು ಎದುರಿಸುತ್ತಿದೆ. ಮುಡಾ ಹಗರಣದಲ್ಲಿ ಮೂರು ತನಿಖೆಗಳು ನಡೆಯುತ್ತಿವೆ. ದೂರುದಾರರು ಆತುರದಲ್ಲಿ ಸಿಬಿಐ ತನಿಖೆಗಾಗಿ ನ್ಯಾಯಾಲಯವನ್ನು ಪ್ರಶ್ನಿಸಿದ್ದಾರೆ. ಅವರೇಕೆ ಆತುರದಲ್ಲಿದ್ದರು ಎಂಬುದು ತಿಳಿಯುತ್ತಿಲ್ಲ ಎಂದು ತಿಳಿಸಿದರು.

ಇದೇ ವೇಳೆ ಮುಂದೆ ನಡೆಯುವ ಚುನಾವಣೆಗಳಲ್ಲಿ ದೆಹಲಿಯ ಮಾದರಿಯಲ್ಲೇ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ಬಣ ರಾಜಕೀಯ ಕುರಿತು ಮಾತನಾಡಿ, ರಾಜ್ಯ ಬಿಜೆಪಿಯಲ್ಲಿನ ಆಂತರಿಕ ಬಿಕ್ಕಟ್ಟು ಮನಸ್ಸಿಗೆ ತುಂಬಾ ನೋವು ತಂದಿದೆ. ಪಕ್ಷದ ಕಾರ್ಯಕರ್ತರಿಗೂ ಇವರ ನಡವಳಿಕೆ ಬೇಸರ ತರಿಸಿದೆ. ಬಿಜೆಪಿ ಹೈಕಮಾಂಡ್‌ ಚುನಾವಣೆಯತ್ತ ಗಮನ ಹರಿಸಿದ್ದ ಕಾರಣ ರಾಜ್ಯದ ವಿದ್ಯಮಾನದ ಬಗ್ಗೆ ಗಮನ ನೀಡಿರಲಿಲ್ಲ. ಈಗ ಚುನಾವಣೆ ಮುಗಿದಿದೆ. ಸದ್ಯದಲ್ಲೇ ರಾಜ್ಯ ಬಿಜೆಪಿ ನಾಯಕರ ಬಿಕ್ಕಟ್ಟು ಬಗೆಹರಿಸುವ ವಿಶ್ವಾಸವಿದೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com