
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ವಿರುದ್ಧ ಬಹಿರಂಗವಾಗಿಯೇ ವಾಗ್ದಾಳಿ ನಡೆಸುತ್ತಿದ್ದ ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಈ ಸಂಬಂಧ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ತಮಗೆ ನೀಡಿದ್ದ ನೋಟಿಸ್ ಗೆ ಉತ್ತರ ನೀಡಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ಬಹಿರಂಗ ಹೇಳಿಕೆ ನೀಡುವ ಮೂಲಕ ಪಕ್ಷಕ್ಕೆ ಮುಜುಗರ ಉಂಟು ಮಾಡುತ್ತಿದ್ದ ಯತ್ನಾಳ್ ಅವರಿಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ನೋಟಿಸ್ ನೀಡಿತ್ತು. ಅಲ್ಲದೆ 72 ಗಂಟೆ ಒಳಗೆ ಉತ್ತರಿಸುವಂತೆ ಸೂಚನೆ ನೀಡಿತ್ತು.
ಯತ್ನಾಳ್ ಅವರು ತಮಗೆ ನೋಟಿಸ್ ಸಿಕ್ಕ ಮರುದಿನವೇ ಉತ್ತರ ನೀಡಿದ್ದು, ಈ ವಿಚಾರ ತಡವಾಗಿ ಬೆಳಕಿಗೆ ಬಂದಿದೆ.
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರೇ ಬಣ ರಾಜಕೀಯ ಮಾಡುತ್ತಿದ್ದಾರೆ. ನಾನು ಯಾವುದೇ ಬಣ ರಾಜಕೀಯ ಮಾಡಿಲ್ಲ. ಪಕ್ಷದ ಶಿಸ್ತನ್ನು ನಾನು ಉಲ್ಲಂಘಿಸಿಲ್ಲ. ಪಕ್ಷದ ಚೌಕಟ್ಟಿನಲ್ಲೇ ವಕ್ಫ್ ವಿರುದ್ಧ ಹೋರಾಟ ನಡೆಸಿದ್ದೇವೆ. ಪಕ್ಷಕ್ಕೆ ಧಕ್ಕೆಯಾಗುವಂತಹ ಯಾವ ಕೆಲಸವನ್ನೂ ಮಾಡಿಲ್ಲ ಎಂದು ಯತ್ನಾಳ್ ಉತ್ತರದಲ್ಲಿ ತಿಳಿಸಿದ್ದಾರೆ.
ವಕ್ಫ್ ಕುರಿತ ಹೋರಾಟವನ್ನು ಉನ್ನತ ನಾಯಕರು ಸಮರ್ಥಿಸಿದ್ದಾರೆ. ಬಿ.ವೈ.ವಿಜಯೇಂದ್ರ ಏಕಪಕ್ಷೀಯ ನಿರ್ಧಾರ ಕೈಗೊಳ್ಳುತ್ತಿದ್ದಾರೆ. ಕಾರ್ಯಕರ್ತರು, ನಾಯಕರ ಭಾವನೆಯನ್ನು ವ್ಯಕ್ತಪಡಿಸಿದ್ದೇನೆ ಎಂದು ಯತ್ನಾಳ್ ಉತ್ತರಿಸಿದ್ದಾರೆ.
ವಿಜಯೇಂದ್ರ ಅವರು ಸ್ವಜನ ಪಕ್ಷಪಾತ ಮಾಡುತ್ತಿದ್ದಾರೆ. ಹಿರಿಯರನ್ನು, ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದಿಲ್ಲ. ಈ ಕಾರಣದಿಂದ ಪಕ್ಷಕ್ಕೆ ಭಾರಿ ಹಿನ್ನಡೆಯಾಗಿದೆ. ರಾಜ್ಯದಲ್ಲಿ ಕುಟುಂಬ ರಾಜಕಾರಣ ಮತ್ತು ಸ್ವಜನಪಕ್ಷಪಾತ ಕೊನೆಗೊಳ್ಳಬೇಕು. ಹೀಗಾಗಿ ವಿಜಯೇಂದ್ರ ಬದಲಾವಣೆ ಅನಿವಾರ್ಯ ಎಂದು ಯತ್ನಾಳ್ ಪ್ರತಿಪಾದಿಸಿದ್ದಾರೆ.
ಮುಂದಿನ ವಿಧಾನಸಭೆ ಚುನಾವಣೆ ವೇಳೆಗೆ ಪಕ್ಷವನ್ನು ಬಲಪಡಿಸಲು ಈಗಲೇ ಅಧ್ಯಕ್ಷರನ್ನು ಬದಲಿಸಬೇಕು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷವನ್ನು ಮುನ್ನಡೆಸುವವರಿಗೆ ಆ ಹೊಣೆಗಾರಿಕೆ ನೀಡಬೇಕು ಎಂದು ಯತ್ನಾಳ್ ಒತ್ತಾಯಿಸಿರುವುದಾಗಿ ಮೂಲಗಳು ತಿಳಿಸಿವೆ.
Advertisement