
ಬೆಂಗಳೂರು: ಪಕ್ಷದ ಬಲವರ್ಧನೆಗಾಗಿ ಗ್ರಾಮ ಪಂಚಾಯತ್ ನಿಂದ ಲೋಕಸಭಾ ಕ್ಷೇತ್ರವರೆಗಿನ ಎಲ್ಲಾ ಸಮಿತಿಗಳನ್ನ ಪುನರ್ ರಚಿಸಿ, ಹೊಸ ಪದಾಧಿಕಾರಿಗಳನ್ನು ನೇಮಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಸೋಮವಾರ ಹೇಳಿದರು.
ಭಾರತ್ ಜೋಡೋ ಭವನದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ನೇಮಕಾತಿಗಳು ಶೀಘ್ರದಲ್ಲೇ ನಡೆಯಲಿದೆ. ಕೆಲವು ನಾಯಕರು ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗಿಂತ ತಮ್ಮ ಬೆಂಬಲಿಗರನ್ನು ಸ್ಥಾನ ನೀಡುವಂತೆ ಒತ್ತಾಯಿಸುತ್ತಿದ್ದಾರೆ. ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಿದ ಪ್ರಾಮಾಣಿಕ ಕಾರ್ಯಕರ್ತರಿಗೆ ಆದ್ಯತೆ ಮೇರೆಗೆ ಹುದ್ದೆಗಳನ್ನು ನೀಡಲಾಗುತ್ತದೆ. ಅರ್ಹ ಡಿಸಿಸಿ ಅಧ್ಯಕ್ಷರನ್ನೂ ಕೂಡ ಪರಿಗಣಿಸಲಾಗುವುದು ಎಂದು ಹೇಳಿದರು.
ಇದೇ ವೇಳೆ ಗಾಂಧಿ ಕಾಂಗ್ರೆಸ್ ಭವನಗಳನ್ನು ನಿರ್ಮಿಸಲು ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ಸಂಬಂಧಪಟ್ಟ ಜಿಲ್ಲಾ ಸಚಿವರು ಸಹಕಾರ ನೀಡದಿದ್ದರೆ ತಮಗೆ ಅಥವಾ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರಿಗೆ ಮಾಹಿತಿ ನೀಡುವಂತೆ ಡಿಸಿಸಿ ಅಧ್ಯಕ್ಷರಿಗೆ ಸೂಚಿಸಿದರು. ಈ ದೂರುಗಳನ್ನು ಹೈಕಮಾಂಡ್ಗೆ ರವಾನಿಸುತ್ತೇವೆಂದು ಎಚ್ಚರಿಕೆ ನೀಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿ, ಕೆಲವು ನಿಗಮ ಮತ್ತು ಮಂಡಳಿಗಳಲ್ಲಿ ಖಾಲಿ ಇರುವ ನಿರ್ದೇಶಕರು ಮತ್ತು ಅಧ್ಯಕ್ಷರು ಮತ್ತು ಉಪಾಧ್ಯಕ್ಷ ಸ್ಥಾನಗಳನ್ನು ಭರ್ತಿ ಮಾಡುವುದರೊಂದಿಗೆ ನೇಮಕಾತಿಗಳನ್ನು ಶೀಘ್ರದಲ್ಲೇ ನಡೆಸಲಾಗುವುದು. ಈಗಾಗಲೇ ಪರಮೇಶ್ವರ ಅವರು ಪಟ್ಟಿಯನ್ನು ಸಲ್ಲಿಸಿದ್ದಾರೆ, ಇದನ್ನು ಶೀಘ್ರದಲ್ಲೇ ಪರಿಶೀಲಿಸಿ, ಕ್ರಮ ಕೈಗೊಳ್ಳಲಾಗುವುದು. ಕಾರ್ಯಕರ್ತರು ಪಕ್ಷದ ಶಕ್ತಿ ಎಂದು ಹೇಳಿದರು
Advertisement