
ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ, ಕೆಪಿಸಿಸಿಗೆ ನೂತನ ಅಧ್ಯಕ್ಷರ ನೇಮಕ, ಜಾತಿಗಣತಿ ವರದಿ ಇತ್ಯಾದಿ ವಿಷಯಗಳಿಗೆ ಸಂಬಂಧಿಸಿದಂತೆ ಪಕ್ಷದಲ್ಲಿ ಯಾವ ಸಮಸ್ಯೆಗಳೂ ಇಲ್ಲ. ಈ ಎಲ್ಲ ವಿಷಯಗಳ ಬಗ್ಗೆ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ ಹೇಳಿದರು.
ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿದ ಅವರು, ಮುಖ್ಯಮಂತ್ರಿ ಸ್ಥಾನದ ಬಗ್ಗೆ ಕಾಂಗ್ರೆಸ್ನಲ್ಲಿ ಯಾವ ಗೊಂದಲವೂ ಇಲ್ಲ. ನಾವೆಲ್ಲರೂ ಚೆನ್ನಾಗಿಯೇ ಇದ್ದೇವೆ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ ಎಂದರು. ಸೋಮವಾರ ನಡೆದ ಪಕ್ಷದ ಶಾಸಕಾಂಗ ಸಭೆಯಲ್ಲಿ ಕೂಡ ಸುರ್ಜೇವಾಲಾ ಇದನ್ನೇ ಸ್ಪಷ್ಟವಾಗಿ ಹೇಳಿದ್ದಾರೆ. ಸಚಿವರಾದ ಜಿ. ಪರಮೇಶ್ವರ ಮತ್ತು ಕೆ.ಎನ್. ರಾಜಣ್ಣ ಅವರು ಕಾರಣಾಂತರಗಳಿಂದ ಕೆಪಿಸಿಸಿ ಸರ್ವಸದಸ್ಯರ ಸಭೆಗೆ ಬಂದಿರಲಿಲ್ಲ ಎಂದರು.
ಬೆಳಗಾವಿ ಜಿಲ್ಲೆಯ ರಾಜಕಾರಣ ಕುರಿತು ಡಿ.ಕೆ. ಶಿವಕುಮಾರ್ ಮತ್ತು ಸತೀಶ ಜಾರಕಿಹೊಳಿ ಮಧ್ಯೆ ಯಾವ ಜಗಳವೂ ಆಗಿಲ್ಲ ಎಂದರು. ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ನಾನು ಕಣ್ಣಿಟ್ಟಿಲ್ಲ. ಕೈಗಾರಿಕಾ ಸಚಿವನಾಗಿ ನಾನು ನನ್ನ ಕೆಲಸವನ್ನು ಮುಂದುವರಿಸಿಕೊಂಡು ಹೋಗಬೇಕಾಗಿದೆ. ರಾಜಕೀಯದಲ್ಲಿ ನನಗೆ ಸಹಜವಾದ ಆಸೆ ಇದೆಯೇ ವಿನಾ ದುರಾಸೆಯಂತೂ ಇಲ್ಲ ಎಂದರು.
ಜಾತಿಗಣತಿ ವರದಿಯನ್ನು ನಾನು ಯಾವತ್ತೂ ವಿರೋಧಿಸಿಲ್ಲ. ಆದರೆ ಯಾವ ಸಮುದಾಯಕ್ಕೂ ಅನ್ಯಾಯ ಆಗದಂತೆ ನೋಡಿಕೊಳ್ಳಬೇಕೆಂದು ಹೇಳುತ್ತಾ ಬಂದಿದ್ದೇನೆ. ಇಷ್ಟಕ್ಕೂ ಜಾತಿಗಣತಿ ವರದಿಯಲ್ಲಿ ಏನಿದೆ ಎಂದು ಯಾರೂ ನೋಡಿಲ್ಲ. ಆದರೆ ಸುರ್ಜೇವಾಲಾ ಕೂಡ ಯಾವೊಂದು ಸಮುದಾಯಕ್ಕೂ ನೋವು ಆಗದಂತೆ ನಾವು ನಡೆದುಕೊಳ್ಳಬೇಕು ಎಂದಿದ್ದಾರೆ ಎಂದರು.
Advertisement