ಕಾಂಗ್ರೆಸ್‌ನಲ್ಲಿ ಕುರ್ಚಿಗಾಗಿ ಕಾದಾಟ: ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆ- ವಿಪಕ್ಷ ನಾಯಕ ಆರ್‌.ಅಶೋಕ್ ಆಕ್ರೋಶ

ಒಂದು ಕಡೆ ಸಚಿವರಾದ ಜಾರಕಿಹೊಳಿ-ಲಕ್ಷ್ಮಿ ಹೆಬ್ಬಾಳಕರ್‌ ನಡುವೆ ಕಲಹವಿದ್ದರೆ, ಮತ್ತೊಂದು ಕಡೆ ಡಿಸಿಎಂ ಡಿ.ಕೆ.ಶಿವಕುಮಾರ್‌-ಸಚಿವ ಜಾರಕಿಹೊಳಿ ನಡುವೆ ಕಲಹವಿದೆ.
R. AShok
ವಿಪಕ್ಷ ನಾಯಕ ಆರ್.ಅಶೋಕ್
Updated on

ಬೆಂಗಳೂರು: ಕಾಂಗ್ರೆಸ್‌ನಲ್ಲಿ ಕುರ್ಚಿಗಾಗಿ ಕಾದಾಟ ನಡೆಯುತ್ತಿರುವುದರಿಂದ ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆಯಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಗುರುವಾರ ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ಕಡೆ ಸಚಿವರಾದ ಜಾರಕಿಹೊಳಿ-ಲಕ್ಷ್ಮಿ ಹೆಬ್ಬಾಳಕರ್‌ ನಡುವೆ ಕಲಹವಿದ್ದರೆ, ಮತ್ತೊಂದು ಕಡೆ ಡಿಸಿಎಂ ಡಿ.ಕೆ.ಶಿವಕುಮಾರ್‌-ಸಚಿವ ಜಾರಕಿಹೊಳಿ ನಡುವೆ ಕಲಹವಿದೆ. ಎರಡೂವರೆ ವರ್ಷಕ್ಕೆ ಅಧಿಕಾರ ಹಸ್ತಾಂತರವಾಗಬೇಕೆಂದು ಒಪ್ಪಂದವಾದರೂ ಸಿಎಂ ಸಿದ್ದರಾಮಯ್ಯ ಅವರಿಗೆ ಅಧಿಕಾರ ಹಸ್ತಾಂತರಿಸಲು ಮನಸ್ಸಿಲ್ಲ. ಅದಕ್ಕಾಗಿ ಸಚಿವರನ್ನು ಛೂ ಬಿಟ್ಟಿದ್ದು, ಡಿ.ಕೆ.ಶಿವಕುಮಾರ್‌ ಒಬ್ಬಂಟಿಯಾಗಿದ್ದಾರೆ. ಅದಕ್ಕಾಗಿ ಅವರೀಗ ಹೈಕಮಾಂಡ್‌ ಪಾದದ ಬಳಿ ಕೂತಿದ್ದಾರೆ ಎಂದು ಟೀಕಿಸಿದರು.

ಶಿವಕುಮಾರ್‌ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಸಿದ್ಧವಿಲ್ಲ. ಇವೆಲ್ಲದರಿಂದಾಗಿ ಯಾರೂ ಜನರ ಪರವಾಗಿ ಮಾತಾಡುತ್ತಿಲ್ಲ. ಗುತ್ತಿಗೆದಾರರು ದಯಾಮರಣಕ್ಕೆ ಕೋರಿದ್ದರೆ, ಆಸ್ಪತ್ರೆಗಳಲ್ಲಿ ಬಾಣಂತಿಯರ ಸಾವಾಗುತ್ತಿದೆ. ಎಲ್ಲರೂ ಕುರ್ಚಿಗಾಗಿ ಕಾದಾಡುತ್ತಿದ್ದಾರೆ. ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಕರ್ನಾಟಕದ ಆರ್ಥಿಕ ಪರಿಸ್ಥಿತಿಯನ್ನು ಸಿಎಂ ಸಿದ್ದರಾಮಯ್ಯ ಹಾಳು ಮಾಡಿದ್ದಾರೆ. ಇಂತಹ ಬಣ ಬಡಿದಾಟ ಮುಂದುವರಿದರೆ ಪರಿಸ್ಥಿತಿ ಇನ್ನಷ್ಟು ಹೀನಾಯವಾಗಲಿದೆ ಎಂದರು.

ಮತ್ತೊಂದು ಸ್ವಾತಂತ್ರ್ಯ ಹೋರಾಟ: ಆರ್‌ಎಸ್‌ಎಸ್‌ ಸರಸಂಘಚಾಲಕರಾದ ಮೋಹನ್‌ ಭಾಗವತ್‌ ಅವರ ಬಗ್ಗೆ ಕಾಂಗ್ರೆಸ್‌ ನಾಯಕರು ಟೀಕೆ ಮಾಡುತ್ತಿದ್ದಾರೆ. ರಾಮ ಮಂದಿರ ನಿರ್ಮಾಣದ ಹೋರಾಟದಲ್ಲಿ ನಾನು ಕೂಡ ಭಾಗವಹಿಸಿದ್ದೆ. ಮಂದಿರ ನಿರ್ಮಾಣ ಎಂದರೆ ಮತ್ತೊಂದು ಸ್ವಾತಂತ್ರ್ಯ ಹೋರಾಟ. ರಾಹುಲ್‌ ಗಾಂಧಿ, ಸೋನಿಯಾ ಗಾಂಧಿ ಯಾವ ಸ್ವಾತಂತ್ರ್ಯ ಹೋರಾಟ ಮಾಡಿದ್ದಾರೆ? ಇಂದಿರಾಗಾಂಧಿ ತಂದ ತುರ್ತು ಪರಿಸ್ಥಿತಿಯ ವಿರುದ್ಧದ ಹೋರಾಟವೇ ಒಂದು ಸ್ವಾತಂತ್ರ್ಯ ಸಂಗ್ರಾಮ. ಆ ಸಂಗ್ರಾಮದಲ್ಲಿ ಜನಸಂಘದ ನಾಯಕರು ಭಾಗವಹಿಸಿದ್ದರು. ಕಾಂಗ್ರೆಸ್‌ನವರು ಯಾವ ಹೋರಾಟ ಮಾಡಿದ್ದಾರೆ ಎಂದು ತಿಳಿಸಲಿ. ಇಂದಿರಾಗಾಂಧಿಯನ್ನೇ ವಿರೋಧಿಸಿ ಹೋರಾಟ ಮಾಡಿದ ಆರ್‌ಎಸ್‌ಎಸ್‌, ರಾಹುಲ್‌ ಗಾಂಧಿಗೆ ಹೆದರುವುದಿಲ್ಲ ಎಂದರು.

ಕೇಂದ್ರ ಸರ್ಕಾರ ಜನಗಣತಿ ನಡೆಸುತ್ತಿರುವಾಗ ಕಾಂಗ್ರೆಸ್‌ ಸರ್ಕಾರ ಜಾತಿ ಗಣತಿ ವರದಿಯ ಬಗ್ಗೆ ಮಾತಾಡುತ್ತಿದೆ. ಜಾತಿ ಗಣತಿ ವರದಿಯನ್ನು ಬೀದಿಬೀದಿಯಲ್ಲಿ ಜನರು ನೋಡಿದ್ದಾರೆ. ಅದು ಈಗಾಗಲೇ ಬಹಿರಂಗವಾಗಿದೆ. ಸಿಎಂ ಸಿದ್ದರಾಮಯ್ಯ ಹೇಳಿ ಬರೆಸಿರುವ ವರದಿ ಇದಾಗಿದ್ದು, ಯಾವುದೇ ರಹಸ್ಯ ಉಳಿದಿಲ್ಲ. ಎಲ್ಲರೂ ಒಪ್ಪುವಂತೆ ಜಾತಿ ಗಣತಿ ವರದಿ ತಯಾರಿಸಬೇಕು. ಒಕ್ಕಲಿಗರು ಹಾಗೂ ಲಿಂಗಾಯತರ ಸಂಖ್ಯೆ ಜಾಸ್ತಿ ಬರಬಾರದೆಂಬ ಕಾರಣಕ್ಕೆ ಒಡೆದು ಚೂರು ಮಾಡಲಾಗಿದೆ ಎಂದು ದೂರಿದರು.

R. AShok
ಸುಗಮ ಅಧಿಕಾರ ಹಸ್ತಾಂತರಕ್ಕಾಗಿ ಕಾಂಗ್ರೆಸ್ ಹೈಕಮಾಂಡ್ ಕಸರತ್ತು! ಸಿದ್ದರಾಮಯ್ಯ ರಾಜಕೀಯ ಜೀವನದ ಸಂಧ್ಯಾಕಾಲ ಸನ್ನಿಹಿತ?

ಎಲ್ಲ ಯೋಜನೆಗಳಿಗೆ ಕೇಂದ್ರ ಸರ್ಕಾರದ ಜನಗಣತಿ ವರದಿಯನ್ನು ಮಾನದಂಡವಾಗಿ ಪರಿಗಣಿಸಲಾಗುತ್ತದೆ. ಆದ್ದರಿಂದ ಕೇಂದ್ರ ಸರ್ಕಾರ ನಡೆಸುವ ಜನಗಣತಿ ವರದಿಯಲ್ಲೇ ಎಲ್ಲ ಜಾತಿಗಳ ಲೆಕ್ಕಾಚಾರ ಕೂಡ ಬರುತ್ತದೆ. ಆದ್ದರಿಂದ ರಾಜ್ಯ ಸರ್ಕಾರ ಈ ಗಣತಿಗೆ ಸಹಕಾರ ನೀಡಬೇಕು. ಅದು ಬಿಟ್ಟು ಪ್ರತ್ಯೇಕವಾಗಿ ಜಾತಿ ಗಣತಿ ವರದಿ ಬಿಡುಗಡೆ ಮಾಡಿ ರಾಜಕೀಯ ಮಾಡಬಾರದು. ಈ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಡಬಲ್‌ ಗೇಮ್‌ ಆಡುತ್ತಿದ್ದಾರೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com