ಬೆಳಗಾವಿ: 'ಜೈ ಬಾಪು, ಜೈ ಭೀಮ್, ಜೈ ಸಂವಿಧಾನ' ಸಮಾವೇಶದ ಸಿದ್ಧತೆ ಪರಿಶೀಲಿಸಿದ ಕಾಂಗ್ರೆಸ್ ನಾಯಕರು

ಬಿಜೆಪಿ ಪದೇ ಪದೇ ಸಂವಿಧಾನದ ಮೇಲೆ ದಾಳಿ ನಡೆಸುತ್ತಿದೆ ಮತ್ತು ಜನರ ಸಾಂವಿಧಾನಿಕ ಹಕ್ಕುಗಳನ್ನು ಹತ್ತಿಕ್ಕಲಾಗುತ್ತಿದೆ. ಇಂತಹ ದಾಳಿಗಳನ್ನು ಎದುರಿಸಲು ಮತ್ತು ಬಿಜೆಪಿಯಂತಹ ಫ್ಯಾಸಿಸ್ಟ್ ಶಕ್ತಿಗಳ ವಿರುದ್ಧ ಸಂವಿಧಾನವನ್ನು ರಕ್ಷಿಸಲು ಸಮಾವೇಶ ಆಯೋಜನೆ.
AICC General Secretary Randeep Singh Surjewala and other
ಸಮಾವೇಶದ ಸಿದ್ಧತೆ ಪರಿಶೀಲಿಸಿದ ಸುರ್ಜೇವಾಲಾ ಮತ್ತಿತರರು
Updated on

ಬೆಳಗಾವಿ: ಮಹಾತ್ಮ ಗಾಂಧಿ ಅಧ್ಯಕ್ಷತೆ ವಹಿಸಿದ್ದ 1924ರ ಬೆಳಗಾವಿ ಸಮಾವೇಶಕ್ಕೆ 100 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ 'ಜೈ ಬಾಪು, ಜೈ ಭೀಮ್, ಜೈ ಸಂವಿಧಾನ' ಎಂಬ ರಾಷ್ಟ್ರೀಯ ಮಟ್ಟದ ಸಮಾವೇಶ ಆಯೋಜಿಸಲು ಸಜ್ಜಾಗಿದೆ. ಜನವರಿ 21 ರಂದು ಬೆಳಗಾವಿಯ ಸಿಪಿಇಡಿ ಮೈದಾನದಲ್ಲಿ ಈ ಸಮಾವೇಶ ನಡೆಯಲಿದೆ. ಶುಕ್ರವಾರ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಸೇರಿದಂತೆ ಹಲವು ನಾಯಕರು ಪರಿಶೀಲನೆ ನಡೆಸಿದರು.

ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಆರಂಭದಲ್ಲಿ ಕಳೆದ ವರ್ಷ ಡಿಸೆಂಬರ್ 27 ರಂದು ನಿಗದಿಯಾಗಿದ್ದ ಸಮಾವೇಶವನ್ನು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ನಂತರ ಅನಿರ್ದಿಷ್ಟಾವಧಿಗೆ ಮುಂದೂಡಲಾಗಿತ್ತು. ಶಾಸಕಾಂಗ ಸಭೆಯ ನಂತರ, ರಾಹುಲ್ ಗಾಂಧಿ ಸೇರಿದಂತೆ ಹಲವಾರು ನಾಯಕರು ಸಿಂಗ್ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಡಿಸೆಂಬರ್ 26 ರಂದು ನವದೆಹಲಿಗೆ ತೆರಳಿದರು.

ಬೆಳಗಾವಿಯ ಐತಿಹಾಸಿಕ ಮಹತ್ವ ಕುರಿತು ಮಾತನಾಡಿದ ಸುರ್ಜೇವಾಲಾ, ನಗರವು ದಶಕಗಳಿಂದ ಕಾಂಗ್ರೆಸ್ ಪಕ್ಷದೊಂದಿಗೆ ನಂಟು ಹೊಂದಿದೆ. 1924 ರಲ್ಲಿ ನಡೆದ ಐತಿಹಾಸಿಕ ಕಾಂಗ್ರೆಸ್ ಗಾಂಧಿಯವರ ಅಧ್ಯಕ್ಷತೆಯಲ್ಲಿ ನಡೆದ ಏಕೈಕ ಕಾಂಗ್ರೆಸ್ ಅಧಿವೇಶನವಾಗಿದೆ. ಜವಾಹರಲಾಲ್ ನೆಹರು, ಸರ್ದಾರ್ ವಲ್ಲಭಭಾಯಿ ಪಟೇಲ್, ಮತ್ತು ಸರೋಜಿನಿ ನಾಯ್ಡು ಮುಂತಾದ ಪ್ರಮುಖ ನಾಯಕರು ಈ ಸಮಾವೇಶದಲ್ಲಿ ಪಾಲ್ಗೊಂಡಿದ್ದರು ಎಂದರು.

ಮುಂಬರುವ ಸಮಾವೇಶದ ಹಿಂದಿನ ಕಾರಣಗಳನ್ನು ಚರ್ಚಿಸಿದ ಸುರ್ಜೆವಾಲಾ, ಡಿಸೆಂಬರ್ 17 ರಂದು ಸಂಸತ್ ಅಧಿವೇಶನದಲ್ಲಿ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್. ಅಂಬೇಡ್ಕರ್ ಮತ್ತು ಸಂವಿಧಾನವನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿದರು.

ಶಾ ಅವರು ಅಂಬೇಡ್ಕರ್ ಮತ್ತು ಸಂವಿಧಾನವನ್ನು ಅವಮಾನಿಸಿದ್ದು ಮಾತ್ರವಲ್ಲದೆ ಅಂಬೇಡ್ಕರ್ ಅವರ ತತ್ವಗಳನ್ನು ನಂಬುವ ಜನರ ಬಗ್ಗೆಯೂ ಲೇವಡಿ ಮಾಡಿದ್ದರು. ಬಿಜೆಪಿ ಪದೇ ಪದೇ ಸಂವಿಧಾನದ ಮೇಲೆ ದಾಳಿ ನಡೆಸುತ್ತಿದೆ ಮತ್ತು ಜನರ ಸಾಂವಿಧಾನಿಕ ಹಕ್ಕುಗಳನ್ನು ಹತ್ತಿಕ್ಕಲಾಗುತ್ತಿದೆ. ಇಂತಹ ದಾಳಿಗಳನ್ನು ಎದುರಿಸಲು ಮತ್ತು ಬಿಜೆಪಿಯಂತಹ ಫ್ಯಾಸಿಸ್ಟ್ ಶಕ್ತಿಗಳ ವಿರುದ್ಧ ಸಂವಿಧಾನವನ್ನು ರಕ್ಷಿಸಲು ಸಮಾವೇಶ ಆಯೋಜಿಸಲಾಗಿದೆ ಎಂದು ಸುರ್ಜೇವಾಲಾ ಹೇಳಿದ್ದಾರೆ.

AICC General Secretary Randeep Singh Surjewala and other
ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ 100 ವರ್ಷ: "ಗಾಂಧಿ ಭಾರತ" ಹೆಸರಲ್ಲಿ ವರ್ಷವಿಡೀ ಕಾರ್ಯಕ್ರಮಕ್ಕೆ ಸರ್ಕಾರ ನಿರ್ಧಾರ

ಇದೇ ಜನವರಿ 27 ರಂದು ಅಂಬೇಡ್ಕರ್ ಅವರ ಜನ್ಮಸ್ಥಳವಾದ ಮಧ್ಯಪ್ರದೇಶದ ಮೊವ್‌ನಲ್ಲಿಯೂ 'ಜೈ ಬಾಪು, ಜೈ ಭೀಮ್, ಜೈ ಸಂವಿಧಾನ' ಸಮಾವೇಶ ನಡೆಯಲಿದೆ. ಬಿಜೆಪಿ ಏಕಕಾಲದಲ್ಲಿ ಅಂಬೇಡ್ಕರ್ ಅವರನ್ನು ಅಪಮಾನಿಸುತ್ತಾ ಯುವಕರು, ಹಿಂದುಳಿದವರು, ಮಹಿಳೆಯರು ಮತ್ತು ಬಡವರ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ ಎಂದು ಆರೋಪಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com