ಸಿದ್ದರಾಮಯ್ಯಗೆ OBC ಹುದ್ದೆ: ರಾಜ್ಯದಲ್ಲಿ ಸಿಎಂ ಬದಲಾವಣೆ ಸಾಧ್ಯತೆ- ಬಸವರಾಜ ಬೊಮ್ಮಾಯಿ
ಹಾವೇರಿ: ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಬದಲಾಯಿಸಲು ಕಾಂಗ್ರೆಸ್ ಕಾರ್ಯತಂತ್ರ ರೂಪಿಸಿದೆ ಎಂದು ಸಂಸದ ಬಿಜೆಪಿ ಸಂಸದ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಸಿದ್ದರಾಮಯ್ಯ ಅವರಿಗೆ ರಾಷ್ಟ್ರೀಯ ಮಟ್ಟದಲ್ಲಿ ಜವಾಬ್ದಾರಿ ನೀಡಬಹುದು. ಅವರನ್ನು ಪಕ್ಷದ ಹಿಂದುಳಿದ ವರ್ಗದ ಅಧ್ಯಕ್ಷರನ್ನಾಗಿ ಮಾಡಬಹುದು ಎಂದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಆದರೆ ಇದು ಕಾಂಗ್ರೆಸ್ ಪಕ್ಷದ ಆಂತರಿಕ ನಿರ್ಧಾರವಾಗಿದ್ದು, ಈ ಬಗ್ಗೆ ಪ್ರತಿಕ್ರಿಯಿಸಲು ಬಯಸುವುದಿಲ್ಲ ಎಂದರು.
ಕರ್ನಾಟಕ ರಾಜಕೀಯವನ್ನು ದೀರ್ಘಕಾಲದಿಂದ ಗಮನಿಸುತ್ತಿರುವ ಓರ್ವ ಕನ್ನಡಿಗನಾಗಿ, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾದಾಗ ಅವರಿಗೆ ರಾಷ್ಟ್ರ ಮಟ್ಟದಲ್ಲಿ ಸ್ಥಾನ ನೀಡುವುದನ್ನು ನಾನು ನೋಡಿದ್ದೇನೆ ಎಂದು ಅವರು ಹೇಳಿದರು.
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿಯೇ ಮುಂದುವರೆಯುತ್ತಾರೆ ಎಂದು ಕಾಂಗ್ರೆಸ್ ಹೇಳುತ್ತಿದೆಯಾದರೂ ರಾಜ್ಯದಲ್ಲಿ ಸಿಎಂ ಬದಲಾವಣೆ ಮಾತುಗಳು ವ್ಯಾಪಕವಾಗಿ ಕೇಳಿಬರುತ್ತಿರುವಂತೆಯೇ ಬೊಮ್ಮಾಯಿ ಈ ಹೇಳಿಕೆ ನೀಡಿದ್ದಾರೆ .
ಅಲ್ಲದೇ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೂಡಾ ಇತ್ತೀಚಿಗೆ ಮುಖ್ಯಮಂತ್ರಿ ಹುದ್ದೆಯ ಮಹತ್ವಾಕಾಂಕ್ಷೆಯ ಬಗ್ಗೆ ನಿಗೂಢ ಹೇಳಿಕೆ ನೀಡಿದ್ದರು.
ಇತ್ತೀಚೆಗೆ ಚಾಮುಂಡಿ ಬೆಟ್ಟದ ದೇವಸ್ಥಾನಕ್ಕೆ ಭೇಟಿ ನೀಡಿದ ವೇಳೆ ಮಾತನಾಡಿದ ಡಿಕೆ ಶಿವಕುಮಾರ್, 'ಪ್ರಯತ್ನ ವಿಫಲ ಆದ್ರೂ ಪ್ರಾರ್ಥನೆ ವಿಫಲ ಆಗಲ್ಲ ಎಂಬ ನಂಬಿಕೆ ನನ್ನದು ಎಂದು ಹೇಳುವ ಮೂಲಕ ತಮ್ಮ ಉನ್ನತ ಹುದ್ದೆಯ ಬಯಕೆಯ ಸುಳಿವು ನೀಡಿದರು
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ